Laxmi Hebbalkar: ರಾಜ್ಯದ ಜನತೆಗೆ ಗುಡ್ನ್ಯೂಸ್; ಗ್ಯಾರಂಟಿ ಬಳಿಕ ಮತ್ತೆ 3 ದೊಡ್ಡ ಯೋಜನೆ ಘೋಷಿಸಿದ ಸರ್ಕಾರ
ದೇಶವನ್ನು ಕಟ್ಟಿದ್ದು ಕಾಂಗ್ರೆಸ್. ಇಂದು ವಿಶ್ವದ ಹಿರಿಯಣ್ಣ ಆಗುವ ಮಟ್ಟಕ್ಕೆ ಭಾರತ ಬೆಳೆದಿದೆ. ಪಕ್ಷದ ನೀತಿ, ಸಿದ್ದಾಂತ, ಯೋಜನೆಗಳೇ ದೇಶದ ಅಭಿವೃದ್ಧಿಗೆ ಪೂರಕ. ಕಾಂಗ್ರೆಸ್ ಎಂದರೆ ಜನರ ಪರ, ಮಹಿಳೆಯರ ಪರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ -
ಬೆಂಗಳೂರು, ನ. 21: ನವೆಂಬರ್ 28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಂದಿನ 50 ವರ್ಷಕ್ಕೆ ಪೀಠಿಕೆ ಹಾಕಿದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ಗೆ ಚಾಲನೆ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದಿನ ಐತಿಹಾಸಿಕ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಕೇಂದ್ರದಲ್ಲೆ ಇರಲಿ, ರಾಜ್ಯದಲ್ಲೆ ಇರಲಿ, ನಮ್ಮ ಸರ್ಕಾರ ಬಂದಾಗಲೆಲ್ಲ ಮಹಿಳೆಯರ ಪರ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರಿಂದ ಹಿಡಿದು ಸಿದ್ದರಾಮಯ್ಯ ಅವರವರೆಗೂ ಮಹಿಳೆಯರ ಪರ ಚಿಂತನೆ, ಯೋಜನೆಗಳನ್ನು ರೂಪಿಸಲಾಗಿದೆ. ಇಂದಿರಾ ಗಾಂಧಿ ಅವರ ಪರಿಕಲ್ಪನೆಯಂತೆ ಕರ್ನಾಟಕ ರಾಜ್ಯದಲ್ಲಿ ಮೈಸೂರಿನ ಟಿ. ನರಸೀಪುರದಲ್ಲಿ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಯಿತು ಎಂದು ಅವರು ಹೇಳಿದರು.
ದೇಶವನ್ನು ಕಟ್ಟಿದ್ದು ಕಾಂಗ್ರೆಸ್. ಇಂದು ವಿಶ್ವದ ಹಿರಿಯಣ್ಣ ಆಗುವ ಮಟ್ಟಕ್ಕೆ ಭಾರತ ಬೆಳೆದಿದೆ. ಪಕ್ಷದ ನೀತಿ, ಸಿದ್ದಾಂತ, ಯೋಜನೆಗಳೇ ದೇಶದ ಅಭಿವೃದ್ಧಿಗೆ ಪೂರಕ. ಕಾಂಗ್ರೆಸ್ ಎಂದರೆ ಜನರ ಪರ, ಮಹಿಳೆಯರ ಪರ ಎಂದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2.18 ಲಕ್ಷ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿದ್ದು, ಇದುವರೆಗೆ 900 ಕೋಟಿ ರೂಪಾಯಿ ಸಂದಾಯವಾಗಿದೆ ಎಂದು ಹೇಳಿದರು.
ಮುಂದಿನ ವಾರ ಮೂರು ದೊಡ್ಡ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಒಂದು ಅಕ್ಕ ಪಡೆ, ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭದ ಜತೆಗೆ ಮಹಿಳೆಯರಿಗಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ನನ್ನ ಹೃದಯಕ್ಕೆ ತುಂಬಾ ಹತ್ತಿರವಾದ ಯೋಜನೆಗಳು ಇವಾಗಿವೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2.18 ಲಕ್ಷ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿದ್ದು, ಯೋಜನೆಯ ಯಶಸ್ಸಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರೆ ಕಾರಣ. ಬ್ಯಾಂಕ್ನಲ್ಲಿ 30 ಸಾವಿರದಿಂದ 3 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ರಾಷ್ಟ್ರೀಕೃತ ಬ್ಯಾಂಕ್ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಸಿಗಲಿದೆ. ಖಾಸಗಿ ಫೈನಾನ್ಸ್ ಹಾವಳಿ ನಿಲ್ಲಬೇಕು. ಬ್ಯಾಂಕ್ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಮುಂದಿನ ಬಾರಿಯೂ ನಮ್ಮ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಯಾವುದೇ ಸರ್ಕಾರ ಬಂದರೂ ಬ್ಯಾಂಕ್ ಮುಚ್ಚಲು ಸಾಧ್ಯವಿಲ್ಲ. ಈ ಮೂರು ಯೋಜನೆಗಳು ಇಡೀ ದೇಶಕ್ಕೆ ಮಾದರಿ ಆಗುವುದರಲ್ಲಿ ಅನುಮಾನ ಇಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಈ ಸುದ್ದಿಯನ್ನೂ ಓದಿ | Child Marriage Eradication: ಬಾಲ್ಯ ವಿವಾಹ ಮುಕ್ತ ಗ್ರಾ.ಪಂ.ಗಳಿಗೆ 25 ಸಾವಿರ ರೂ. ಬಹುಮಾನ ಘೋಷಿಸಿದ ಸರ್ಕಾರ
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ. ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ. ಮಂಜುನಾಥ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ. ಜಗನ್ನಾಥ್, ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಮ್ಮ, ಜಿಲ್ಲಾಧಿಕಾರಿ ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್.ಅನುರಾಧ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಂ.ಮುದ್ದಣ್ಣ ಮತ್ತಿತರರು ಉಪಸ್ಥಿತರಿದ್ದರು.