DK Shivakumar: ಬಿಡುವು ಮಾಡಿಕೊಂಡು ಅಶೋಕ್ ಬಳಿ ಶಾಸ್ತ್ರ ಕೇಳುತ್ತೇನೆ: ಡಿ.ಕೆ. ಶಿವಕುಮಾರ್ ಲೇವಡಿ
DK Shivakumar: ನನಗೂ ಜ್ಯೋತಿಷ್ಯ ಕೇಳುವ ಚಟ ಇದೆ. ಈಗ ಅಶೋಕ್ ಅವರು ಜ್ಯೋತಿಷ್ಯ ಹೇಳುವ ಬೋರ್ಡ್ ಹಾಕಿಕೊಂಡಿದ್ದಾರೆ. ಸಮಯ ಬಿಡುವು ಮಾಡಿಕೊಂಡು ನಾನು ಅವರ ಬಳಿ ಹೋಗಿ ಶಾಸ್ತ್ರ ಕೇಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಬೆಂಗಳೂರು: ಬಡವರ ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿ ಹೆಸರಲ್ಲಿ ಮೈಕ್ರೊಫೈನಾನ್ಸ್ಗಳಿಂದ (Micro Finance) ಬಡವರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.
ಸಾಲ ವಸೂಲಿ ಹೆಸರಲ್ಲಿ ಬಡವರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಹಾಗೂ ಸುಗ್ರೀವಾಜ್ಞೆ ಬಗ್ಗೆ ಕೇಳಿದಾಗ, ʼಸಾಲ ವಸೂಲಿ ಮಾಡಲು ರೌಡಿಗಳ ಮೂಲಕ ಬೆದರಿಸಿ, ಕಾನೂನು ಕೈಗೆ ತೆಗೆದುಕೊಂಡು, ಬಡವರ ಮೇಲೆ ದಬ್ಬಾಳಿಕೆ ನಡೆಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ಇದನ್ನು ನಿಯಂತ್ರಿಸಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದುʼ ಎಂದು ತಿಳಿಸಿದರು.
ಎಚ್ಚರಿಕೆ ನೀಡಿದ್ದರೂ ಕಿರುಕುಳ ಮುಂದುವರಿದಿದೆ ಎಂದು ಕೇಳಿದಾಗ, ಈಗಾಗಲೇ ಬೆಳಗಾವಿ, ಬೀದರ್, ಮೈಸೂರು, ರಾಮನಗರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳಲ್ಲಿ ಎಫ್ಐಆರ್ ದಾಖಲಾಗಿವೆ. ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಹಾಗೂ ಸಹಕಾರ ಸಚಿವರು ಸೂಚಿಸಿದ್ದಾರೆ. ಇದನ್ನು ನಿಯಂತ್ರಿಸಲು ಸುಗ್ರೀವಾಜ್ಞೆ ಸಿದ್ಧಪಡಿಸಲಾಗಿದ್ದು, ಒಂದೆರಡು ದಿನಗಳಲ್ಲಿ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಪ್ರತಿ ಜಿಲ್ಲಾ ಕಚೇರಿಯಲ್ಲಿ ಇಂತಹ ಕಿರುಕುಳ ಪ್ರಕರಣಗಳಿಗೆ ದೂರು ನೀಡಲು ಸಹಾಯವಾಣಿ ಆರಂಭಿಸಲಾಗಿದೆ. ಇಂತಹ ಪ್ರಕರಣಗಳು ನಿಮ್ಮ ಗಮನಕ್ಕೆ ಬಂದರೆ ಕೂಡಲೇ ಈ ಸಹಾಯವಾಣಿಗೆ ಸಂಪರ್ಕಿಸಿ, ಬಡವರಿಗೆ ನೆರವಾಗಬೇಕು ಎಂದು ಕಾಂಗ್ರೆಸ್ ಪಕ್ಷ ಹಾಗೂ ಇತರ ಪಕ್ಷಗಳ ಕಾರ್ಯಕರ್ತರಿಗೂ ಮನವಿ ಮಾಡುತ್ತೇನೆ. ಮುಖ್ಯಮಂತ್ರಿಗಳು ತಮ್ಮ ವಿಶ್ರಾಂತಿ ಬಳಿಕ ಸದ್ಯದಲ್ಲೇ ಪೊಲೀಸ್ ಅಧಿಕಾರಿಗಳು, ಆಯುಕ್ತರ ಜತೆ ಸಭೆ ನಡೆಸಲಿದ್ದಾರೆ. ನಂತರ ಜಿಲ್ಲಾಧಿಕಾರಿಗಳ ಜತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ವಿತ್ತ ಸಚಿವೆ ರಾಜ್ಯಕ್ಕೆ ಕೊಟ್ಟಿರುವ ಕೊಡುಗೆಗಳ ಪಟ್ಟಿ ನೀಡಲಿ
ಕರ್ನಾಟಕ ದಿವಾಳಿಯಾಗಿದೆ ಎಂಬ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆ ಕುರಿತು ಮಾತನಾಡಿದ ಅವರು, ʼಕೇಂದ್ರ ಸರ್ಕಾರ ಎಷ್ಟು ಲಕ್ಷ ಕೋಟಿಗಟ್ಟಲೆ ಸಾಲ ಮಾಡಿದೆ ಎಂಬುದನ್ನು ಅರಿಯಬೇಕು. ನಮ್ಮ ರಾಜ್ಯ ಸರ್ಕಾರ ಅಷ್ಟು ದೊಡ್ಡ ಪ್ರಮಾಣದ ಸಾಲ ಮಾಡಿಲ್ಲ. ನಾವು ಈ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದಾಗ ಪ್ರಧಾನಮಂತ್ರಿಗಳು ಕೂಡ ನಮ್ಮ ರಾಜ್ಯ ದಿವಾಳಿಯಾಗಲಿದೆ ಎಂದು ಹೇಳಿದ್ದರು. ನಂತರ ನಡೆದ ಎಲ್ಲಾ ರಾಜ್ಯಗಳ ಚುನಾವಣೆಯಲ್ಲಿ ಅವರು ಗ್ಯಾರಂಟಿ ಯೋಜನೆ ನಕಲು ಮಾಡಿ ಯೋಜನೆಗಳನ್ನು ಘೋಷಿಸಿದ್ದಾರೆ. ನಮ್ಮ ಸರ್ಕಾರ ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಯಿಂದ ಬಳಲಿದ್ದ ಜನಸಾಮಾನ್ಯರಿಗೆ ನೆರವಾಗಲು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆಯೇ ಹೊರತು, ಮತಕ್ಕಾಗಿ ಅಲ್ಲ. ನಮ್ಮ ಸರ್ಕಾರದ ಆರ್ಥಿಕ ಪರಿಸ್ಥಿತಿ ಹಾಗೂ ದಿವಾಳಿ ವಿಚಾರ ಪಕ್ಕಕ್ಕಿರಲಿ. ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಕರ್ನಾಟಕ ರಾಜ್ಯಕ್ಕೆ ಅವರು ಯಾವ ಕೊಡುಗೆ ನೀಡಿದ್ದಾರೆ ಎಂದು ಮೊದಲು ಪಟ್ಟಿ ನೀಡಲಿʼ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ಯಾವ ಶಾಸಕರೂ ಸಂಪರ್ಕಿಸಿಲ್ಲ
ಜೆಡಿಎಸ್ ಶಾಸಕರು ನಿಮ್ಮ ಸಂಪರ್ಕದಲ್ಲಿ ಇದ್ದಾರಾ ಎಂದು ಕೇಳಿದಾಗ, ʼನಾನು ಜೆಡಿಎಸ್ ಶಾಸಕರ ವಿಚಾರವಾಗಿ ಮಾತನಾಡಿಲ್ಲ, ಜೆಡಿಎಸ್ ಕಾರ್ಯಕರ್ತರು ತಮ್ಮ ಭವಿಷ್ಯವನ್ನು ತಾವು ನೋಡಿಕೊಳ್ಳಬೇಕು ಎಂದು ಕರೆ ನೀಡಿದ್ದೇನೆ. ಆ ಕಾರ್ಯಕರ್ತರು ಕೂಡ ಎಷ್ಟು ದಿನ ಎಂದು ಕಾಯಲು ಸಾಧ್ಯ? ಅವರಿಗೂ ಜಾತ್ಯಾತೀತ ಸಿದ್ಧಾಂತದ ರಾಷ್ಟ್ರೀಯ ಪಕ್ಷದ ಅಗತ್ಯವಿದೆ. ಅನೇಕ ಕಾರ್ಯಕರ್ತರು ನಮ್ಮ ಪಕ್ಷ ಸೇರಲು ಮುಂದಾಗಿದ್ದಾರೆʼ ಎಂದು ತಿಳಿಸಿದರು.
ಶಾಸಕರು ನಿಮ್ಮ ಪಕ್ಷ ಸೇರಲು ಮುಂದೆ ಬಂದರೆ ಎಂದು ಕೇಳಿದಾಗ, ʼಆ ವಿಚಾರ ಮುಂದೆ ನೋಡೋಣ. ನಾನು ಅದರ ಬಗ್ಗೆ ಆಲೋಚನೆ ಮಾಡಿಲ್ಲ. ಯಾವ ಶಾಸಕರು ನಮ್ಮ ಸಂಪರ್ಕದಲ್ಲಿ ಇಲ್ಲ. ನಾನು ಯಾರ ಜತೆಗೂ ಮಾತನಾಡಿಲ್ಲ. ಇದೆಲ್ಲವೂ ಸುಳ್ಳು ಸುದ್ದಿʼ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | Micro Finance: ಮೈಕ್ರೋಫೈನಾನ್ಸ್ ಹಾವಳಿ ತಡೆಯಲು ಸುಗ್ರೀವಾಜ್ಞೆ ಕರಡು ಮುಖ್ಯಮಂತ್ರಿಗೆ ರವಾನೆ
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸಿಎಂ ಬದಲಾವಣೆಯ ದಿನಾಂಕ ಘೋಷಣೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ʼನನಗೂ ಜ್ಯೋತಿಷ್ಯ ಕೇಳುವ ಚಟ ಇದೆ. ಈಗ ಅಶೋಕ್ ಅವರು ಜ್ಯೋತಿಷ್ಯ ಹೇಳುವ ಬೋರ್ಡ್ ಹಾಕಿಕೊಂಡಿದ್ದಾರೆ. ಸಮಯ ಬಿಡುವು ಮಾಡಿಕೊಂಡು ನಾನು ಅವರ ಬಳಿ ಹೋಗಿ ಶಾಸ್ತ್ರ ಕೇಳುತ್ತೇನೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದರು.