ಇನ್ಮುಂದೆ 10 ಗಂಟೆಯೊಳಗೆ ಸರ್ಕಾರಿ ನೌಕರರ ಹಾಜರಾತಿ ಕಡ್ಡಾಯ! ಸಿಎಂ ಖಡಕ್ ಆದೇಶ
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿದ್ದಂತೆ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ರಾಜ್ಯದ ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಸರಿಯಾದ ಸಮಯಕ್ಕೆ ಆಫೀಸ್ಗಳಿಗೆ ಬರುವುದು ಕಡ್ಡಾಯ ಮಾಡಿ ಆದೇಶ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯೊಳಗೆ ಹಾಜರಾಗಬೇಕು ಎಂದು ಸಿಎಂ ಸೂಚಿಸಿದ್ದಾರೆ.
ಸಂಗ್ರಹ ಚಿತ್ರ -
ಬೆಂಗಳೂರು: ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿದ್ದಂತೆ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ರಾಜ್ಯದ ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಸರಿಯಾದ ಸಮಯಕ್ಕೆ ಆಫೀಸ್ಗಳಿಗೆ ಬರುವುದು ಕಡ್ಡಾಯ (Karnataka Govt Employees Rules) ಮಾಡಿ ಆದೇಶ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯೊಳಗೆ ಹಾಜರಾಗಬೇಕು ಎಂದು ಸಿಎಂ ಸೂಚಿಸಿದ್ದಾರೆ. ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದಿಂದ ಬಯೋಮೆಟ್ರಿಕ್ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಚೆಕ್ ಇನ್, ಚೆಕ್ ಔಟ್ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದ್ದು, ಸಿಎಂ ಡಿ.ಕೆ ಶಿವಕುಮಾರ್ ಅವರ ಸೂಚನೆ ಮೇರೆ ಆದೇಶ ಹೊರಡಿಸಿದ್ದಾರೆ.
ಆದೇಶದಲ್ಲೇನಿದೆ?
ಸಿಎಂ ಡಿಕೆ ಶಿವಕುಮಾರ್ ಹೊರಡಿಸಿರುವ ಆದೇಶದಂತೆ, ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಪ್ರಸ್ತುತ ಇ-ಆಡಳಿತ ಇಲಾಖೆಯು ಸಿದ್ಧಪಡಿಸಿರುವ 'ಕರ್ತವ್ಯ App' ನಲ್ಲಿ ಈಗಾಗಲೇ HRMS ನಲ್ಲಿ ಲಭ್ಯವಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಮಾಹಿತಿಯನ್ನು ನೋಂದಾಯಿಸಲಾಗಿದೆ. ಈ ನಿಯಮವನ್ನು ಕೇವಲ ಆದೇಶಕ್ಕೆ ಸೀಮಿತಗೊಳಿಸದೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಇ-ಆಡಳಿತ ಇಲಾಖೆಯು ಅತ್ಯಾಧುನಿಕ AI (ಕೃತಕ ಬುದ್ಧಿಮತ್ತೆ) ತಂತ್ರಾಂಶವನ್ನು ಬಳಸಿಕೊಳ್ಳುತ್ತಿದೆ. ಪ್ರತಿದಿನ ಬೆಳಗ್ಗೆ 10 ಗಂಟೆಗೆ ಹಾಜರಾತಿ ದಾಖಲಿಸದ ಅಧಿಕಾರಿ ಮತ್ತು ಸಿಬ್ಬಂದಿಗಳ ಜಿಲ್ಲಾವಾರು ಹಾಗೂ ಕಚೇರಿವಾರು ಮಾಹಿತಿಯನ್ನು AI ತಂತ್ರಾಂಶವು ಸ್ವಯಂಚಾಲಿತವಾಗಿ ವರದಿ ಸಿದ್ಧಪಡಿಸಲಿದೆ. ಈ AI ಜನರೇಟೆಡ್ ವರದಿಯನ್ನು ಆಯಾ ಇಲಾಖೆಯ ಮುಖ್ಯಸ್ಥರ ವೈಯಕ್ತಿಕ ಲಾಗಿನ್ ಡ್ಯಾಶ್ ಬೋರ್ಡ್ಗೆ ನೇರವಾಗಿ ಕಳುಹಿಸಲಾಗುತ್ತದೆ.