ಬೆಂಗಳೂರು: ಶಿವಾಜಿನಗರದಲ್ಲಿ ಕರ್ತವ್ಯ ನಿರತ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಅಧಿಕಾರಿಗಳ ಹಾಗೂ ಸಿಬ್ಬಂದಿಯ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮರ್ಷಿಯಲ್ ಸ್ಟ್ರೀಟ್ (Footpath Encroachment) ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಪ್ರಮುಖ ಆರೋಪಿ ಬಸವರಾಜ ಪಡುಕೋಟೆ ಸೇರಿದಂತೆ ಒಟ್ಟು 11 ಮಂದಿಯನ್ನು ಬಂಧಿಸಿದ್ದಾರೆ. ಶಿವಾಜಿನಗರ ಬಸ್ ನಿಲ್ದಾಣದ ಸಮೀಪ ಜಿಬಿಎ ಅಧಿಕಾರಿಗಳು ಫುಟ್ಪಾತ್ ಮೇಲಿನ ಅಕ್ರಮ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು.
ಈ ವೇಳೆ ದಿಢೀರ್ ಪ್ರತ್ಯಕ್ಷರಾದ ಸ್ಥಳೀಯ ವ್ಯಾಪಾರಿ ಬಸವರಾಜ ಪಡುಕೋಟೆ ಹಾಗೂ ಆತನ ಬೆಂಬಲಿಗರ ಪಡೆ, ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿ ತೀವ್ರ ವಾಗ್ವಾದಕ್ಕಿಳಿದಿದ್ದರು. ಮಾತು ಬೆಳೆದು ಕಡೆಗೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದರು. ಬಸ್ ಸ್ಟ್ಯಾಂಡ್ ಬಳಿ ಬೆಳಿಗ್ಗೆಯಿಂದ ತೆರವು ಕಾರ್ಯಾಚರಣೆ ನಡೆಯುತ್ತಿದ್ದಾಗ, ಮಧ್ಯಾಹ್ನ 12:30ರ ಸುಮಾರಿಗೆ ಇನ್ನೋವಾ ಕಾರಿನಲ್ಲಿ ಬಂದ ಬಸವರಾಜ್ ಪಡುಕೋಟೆ ಹಾಗೂ ಆತನ ಗ್ಯಾಂಗ್ ಏಕಾಏಕಿ ಅಧಿಕಾರಿಗಳ ಮೇಲೆ ಮುಗಿಬಿದ್ದಿದೆ.
ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ಮಾಧವ್ ರಾವ್ ಅವರ ಮೇಲೆ ಅಪರಿಚಿತರು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದು, ತಳ್ಳಿದ ರಭಸಕ್ಕೆ ಅಧಿಕಾರಿ ಕೆಳಗೆ ಬಿದ್ದಿದ್ದಾರೆ. ಅಲ್ಲದೆ ಹೆಲ್ಮೆಟ್ ಹಾಗೂ ಪ್ಲಾಸ್ಟಿಕ್ ಚೇರ್ಗಳಿಂದ ಮನಸೋಇಚ್ಛೆ ಹೊಡೆಯಲಾಗಿದೆ. ಕಾರ್ಯಾಚರಣೆ ವೇಳೆ ಸ್ಥಳದಲ್ಲಿ ನಾಲ್ಕು ಜನ ಪೊಲೀಸರಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನೆ ವೀಡಿಯೋ ಮಾಡುತ್ತಾ ನಿಂತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸೂಕ್ಷ್ಮ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುವಾಗ ಪೊಲೀಸರು ಅಲರ್ಟ್ ಆಗಿರಬೇಕಿತ್ತು ಎಂದು ಜಿಬಿಎ ಸಿಬ್ಬಂದಿ ಆಕ್ರೋಶ ಹೊರಹಾಕಿದ್ದರು.
ಶಿವಾಜಿನಗರದಲ್ಲಿ ಫುಟ್ಪಾತ್ ತೆರವು ಮಾಡಲು ಹೋದ ಜಿಬಿಎ ಅಧಿಕಾರಿಗಳ ಮೇಲೆ ಭೀಕರ ಹಲ್ಲೆ!
ಇದೀಗ ಪ್ರಕರಣ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಪ್ರಕರಣದ ಪ್ರಮುಖ ರೂವಾರಿ ಬಸವರಾಜ ಪಡುಕೋಟೆ ಸೇರಿದಂತೆ ಕಿರಣ್, ಬಸವರಾಜ್, ರಂಜಿತ್, ರಂಗಸ್ವಾಮಿ, ಮುಜಾಹಿದ್ ಅಹಮದ್, ಕೊಟ್ರೇಶ್ ಹಾಗೂ ಪರಶುರಾಮ್ ಸೇರಿ 11 ಮಂದಿಯನ್ನು ಬಂಧಿಸಿದ್ದಾರೆ.