ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ( MLC N. Ravikumar) ವಿರುದ್ಧ ಬೆಂಗಳೂರಿನ 42ನೇ ಅಡಿಷನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACJM) ಸಂದೀಪ್ ಪಾಟೀಲ್ ಅವರು, ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ್ದಾರೆ.
ಕಳೆದ ವರ್ಷ ಕಲಬುರಗಿಯಲ್ಲಿ ನಡೆದ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿತ್ತು. ಆದರೆ ರವಿ ಕುಮಾರ್ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ ಕಠಿಣ ಕ್ರಮ ಕೈಗೊಂಡಿದ್ದು, ಬಂಧನ ವಾರಂಟ್ ಹೊರಡಿಸಿದೆ. ಪ್ರಕರಣ ಸಂಬಂಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ರವಿಕುಮಾರ್ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಆದರೆ, ವಿಚಾರಣೆ ನಡೆಸಿದ್ದ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು. ಅಧೀನ ನ್ಯಾಯಾಲಯದಿಂದ ಸಮನ್ಸ್ ಬಂದಿದ್ದರೂ ಕೋರ್ಟ್ಗೆ ಗೈರಾದ ಕಾರಣ ಈಗ ಎಸಿಜೆಎಂ ನ್ಯಾಯಾಲಯವು ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಿದೆ. ಕಲಬುರಗಿ ಜಿಲ್ಲಾಧಿಕಾರಿಯಾಗಿದ್ದ ಫೌಜಿಯಾ ತರುನ್ನಮ್ ಅವರನ್ನು ಪಾಕಿಸ್ತಾನದಿಂದ ಬಂದವರು ಎಂಬುದಾಗಿ ಬಿಂಬಿಸುವಂತೆ ಹೇಳಿಕೆ ನೀಡಿದ್ದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಮುಸ್ಲಿಂ ಸಮುದಾಯಕ್ಕೆ ಸೇರಿದ್ದಾರೆ ಎಂಬ ಕಾರಣಕ್ಕೆ ಒಬ್ಬ ಐಎಎಸ್ ಅಧಿಕಾರಿಗೆ ಈ ರೀತಿಯಲ್ಲಿ ಹೇಳಿಕೆ ನೀಡುವುನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದು ತಿಳಿಸಿತ್ತು.
ಅಲ್ಲದೆ, ಎಲ್ಲರಿಗೂ ಸ್ವಯಂ ಗೌರವ ಇರಲಿದೆ. ಬೇಕಾದಂತೆ ಮಾತನಾಡುವುದಕ್ಕೆ ಅವಕಾಶವಿರುವುದಿಲ್ಲ. ಈ ರೀತಿಯ ಹೇಳಿಕೆಗಳನ್ನು ನೀಡುವವರಿಗೆ ಕ್ಷಮಿಸಲು ಸಾಧ್ಯವಿಲ್ಲ. ರಾಜಕೀಯ ನಾಯಕರು, ರಾಜ್ಯದ ಜನರ ಕಲ್ಯಾಣಕ್ಕಾಗಿ ಏನು ಮಾಡಿದರೆ ಉತ್ತಮ ಎಂಬುದರ ಬಗ್ಗೆ ಮಾತನಾಡುತ್ತಿಲ್ಲ. ರಾಜಕೀಯ ನಾಯಕರಿಗೆ ನಾಲಿಗೆ ಹಿಡಿತದಲ್ಲಿರಬೇಕು. ಏನು ಬೇಕಾದರೂ ಮಾತನಾಡಬಹುದು ಎನ್ನುವುದಕ್ಕೆ ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿತ್ತು.