ಚೆನ್ನಮ್ಮ ಅಂತ್ಯಕ್ರಿಯೆ; ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಸಚಿವ ಪ್ರಲ್ಹಾದ್ ಜೋಶಿ ಗೌರವ ಸಮರ್ಪಣೆ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮಅವರ ಅಂತ್ಯಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಭಾಗಿಯಾಗಿ ಗೌರವಾರ್ಪಣೆ ಸಲ್ಲಿಸಿದರು. ಸರಳ-ಸಜ್ಜನಿಕೆ ವ್ಯಕ್ತಿತ್ವದ ಮಾತೃಸ್ವರೂಪಿ ಚೆನ್ನಮ್ಮನವರ ಅಗಲಿಕೆ ದೇವೇಗೌಡರ ಕುಟುಂಬಕ್ಕಷ್ಟೇ ಅಲ್ಲ ನಾಡಿಗೇ ಅಪಾರ ನೋವುಂಟು ಮಾಡಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಕಂಬನಿ ಮಿಡಿದರು.
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ. -
ಹೊಳೆನರಸೀಪುರ, ಜು.20: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ (Chennamma) ಅವರ ಅಂತ್ಯಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಭಾಗಿಯಾಗಿ ಗೌರವಾರ್ಪಣೆ ಸಲ್ಲಿಸಿದರು. ಹೊಳೆನರಸೀಪುರದ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸೋಮವಾರ ಸಂಜೆ ನೆರವೇರಿದ ಅಂತ್ಯಕ್ರಿಯೆ ವೇಳೆ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ ಈರ್ವರೂ ಚೆನ್ನಮ್ಮ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಗೌರವಾರ್ಪಣೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ. ರೇವಣ್ಣ, ಸಂಸದ ಡಾ. ಮಂಜುನಾಥ್ ಅವರಿಗೆ ಸಾಂತ್ವನ ಹೇಳಿದರು. ದೇವೇಗೌಡರ ಕುಟುಂಬ ಮತ್ತು ದುಃಖತಪ್ತರೆಲ್ಲರಿಗೂ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಮತ್ತು ಚೆನ್ನಮ್ಮ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲೆಂದು ಪ್ರಾರ್ಥಿಸಿದರು.
ಸರಳ-ಸಜ್ಜನಿಕೆ ವ್ಯಕ್ತಿತ್ವದ ಮಾತೃಸ್ವರೂಪಿ ಚೆನ್ನಮ್ಮನವರ ಅಗಲಿಕೆ ದೇವೇಗೌಡರ ಕುಟುಂಬಕ್ಕಷ್ಟೇ ಅಲ್ಲ ನಾಡಿಗೇ ಅಪಾರ ನೋವುಂಟು ಮಾಡಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಕಂಬನಿ ಮಿಡಿದರು.
ಮಾತೃವಾತ್ಸಲ್ಯದ ಸಾಕಾರಮೂರ್ತಿಯಾಗಿದ್ದ ಚೆನ್ನಮ್ಮ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸುದೀರ್ಘ ಸಾರ್ವಜನಿಕ ಮತ್ತು ರಾಜಕೀಯ ಜೀವನದಲ್ಲಿ ಶಕ್ತಿಯಾಗಿ ನಿಂತಿದ್ದರು. ಸದಾ ಕಾಲ ಕುಟುಂಬಕ್ಕೆ ಬೆನ್ನೆಲುಬಾಗಿ ನಿಂತು ಆದರ್ಶ ಗೃಹಿಣಿಯಾಗಿ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಮರಿಸಿದರು.