ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಹತ್ವದ ಜಾತಿ ಗಣತಿ (Caste Census) ವರದಿ ಕೊನೆಗೂ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ನೇತೃತ್ವದ ತಂಡವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ವರದಿಯನ್ನು ಹಸ್ತಾಂತರಿಸಿದೆ. ಮೇ 28ರಂದು ಸರ್ಕಾರಿ ರಜೆ ಇರುವ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ಇಂದು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
300 ಪುಟಗಳ ಸುದೀರ್ಘ ವರದಿ ಸಲ್ಲಿಕೆ
ವರದಿ ಸಲ್ಲಿಕೆಯ ಬಳಿಕ ಮಾತನಾಡಿದ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಅವರು, ನಮ್ಮ ಆಯೋಗವು ರಾಜ್ಯಾದ್ಯಂತ ಸಂಪೂರ್ಣವಾಗಿ ಮತ್ತು ಅತ್ಯಂತ ಪ್ರಾಮಾಣಿಕವಾಗಿ ಸರ್ವೆ ನಡೆಸಿ ಸುಮಾರು 300 ಪುಟಗಳ ಸುದೀರ್ಘ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ನೀಡಿದೆ. ಸದ್ಯಕ್ಕೆ ವರದಿಯಲ್ಲಿರುವ ಆಂತರಿಕ ನಿಖರ ಮಾಹಿತಿಗಳನ್ನು ಬಹಿರಂಗಪಡಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಆದರೆ, ಸರ್ಕಾರವು ಅತ್ಯಂತ ಆದಷ್ಟು ಬೇಗ ಈ ವರದಿಯನ್ನು ಅಧಿಕೃತವಾಗಿ ಸ್ವೀಕರಿಸಿ, ಜಾರಿ ಮಾಡಲಿದೆ ಎಂಬ ಭರವಸೆ ನಮಗಿದೆ, ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಈ ಮಹತ್ವದ ವರದಿಯನ್ನು ಸ್ವೀಕರಿಸುವ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಎಚ್.ಸಿ. ಮಹದೇವಪ್ಪ ಎಂ.ಸಿ. ಸುಧಾಕರ್, ಸತೀಶ್ ಜಾರಕಿಹೊಳಿ, ಮತ್ತು ಚಲುವರಾಯಸ್ವಾಮಿ ಅವರಲ್ಲದೆ, ಶಾಸಕರಾದ ಎನ್.ಎಚ್. ಕೋನರೆಡ್ಡಿ ಪಿ.ಎಂ. ನರೇಂದ್ರಸ್ವಾಮಿ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರು ಉಪಸ್ಥಿತರಿದ್ದರು.
ಮುಸ್ಲಿಮರೇ ಹೆಚ್ಚು!
ಸದ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ ಪ್ರಕಾರ, ರಾಜ್ಯದಲ್ಲಿ ಮುಸ್ಲಿಂ ಅತಿ ದೊಡ್ಡ ಸಮುದಾಯವಾಗಿದೆ. ಶೇ.14ರಷ್ಟು ಅಂದರೆ ಬರೋಬ್ಬರಿ 75.25 ಲಕ್ಷ ಜಸಂಖ್ಯೆ ಇದ್ದಾರೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ.
ಜಾತಿವಾರು ಜನಸಂಖ್ಯೆ ವಿವರ:
- ಮುಸ್ಲಿಂ ಶೇ.14 – 75 ರಿಂದ 80 ಲಕ್ಷ
- ವೀರಶೈವ ಲಿಂಗಾಯತ ಶೇ.11- 60 ರಿಂದ 65 ಲಕ್ಷ
- ಒಕ್ಕಲಿಗರು ಶೇ.10 – 55 ರಿಂದ 60 ಲಕ್ಷ
- ಕುರುಬರು ಶೇ.08 – 40 ರಿಂದ 45 ಲಕ್ಷ