ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಜೀವ ಬೆದರಿಕೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು (Congress leader Rajeev Gowda) ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಎಫ್ಐಆರ್ ದಾಖಲಾದ ಬಳಿಕ ಕಳೆದ 13 ದಿನಗಳಿಂದ ನಾಪತ್ತೆಯಾಗಿದ್ದ ಕೈ ಮುಖಂಡನನ್ನು ಕೇರಳದ ಗಡಿಯಲ್ಲಿ ಬಂಧಿಸಲಾಗಿದೆ.
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕೈ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದ. ಈ ಸಂಬಂಧ ಪೌರಾಯುಕ್ತೆ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿತ್ತು. ದೂರಿನ ಬಳಿಕ ರಾಜೀವ್ ಗೌಡ ತಲೆಮರೆಸಿಕೊಂಡಿದ್ದ.
ಕೈ ಮುಖಂಡನ ಬಂಧನಕ್ಕೆ ವ್ಯಾಪಕ ಆಗ್ರಹ ಕೇಳಿಬಂದಿದ್ದರಿಂದ ಸಿಎಂ ಸಿದ್ದರಾಮಯ್ಯ ಅವರು ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಬಳಿಕ ರಾಜೀವ್ ಗೌಡ ವಿರುದ್ಧ ಪೊಲೀಸರು ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದರು. ಇನ್ನು ಮಂಗಳೂರಿನ ಬಳಿ ರಾಜೀವ್ ಗೌಡ ಇರಬಹುದು ಎಂದು ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಅಲ್ಲಿ ತಪಾಸಣೆ ನಡೆಸಲಾಗಿತ್ತು. ಬಳಿಕ ಸೋಮವಾರ ಮಧ್ಯಾಹ್ನ ಕೇರಳಕ್ಕೆ ಪರಾರಿಯಾಗಲು ಮುಂದಾಗಿದ್ದ ಆತನನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಆತನನ್ನು ಚಿಕ್ಕಬಳ್ಳಾಪುರಕ್ಕೆ ಕರೆತರಲಾಗುತ್ತಿದೆ ಎಂದು ತಿಳಿದುಬಂದಿದೆ.
ಕೋರ್ಟ್ನಿಂದ ಜಾಮೀನು ವಜಾ
ಪ್ರಕರಣದಲ್ಲಿ ಬಂಧನ ಭೀತಿಯಿಂದ ರಾಜೀವ್ ಗೌಡ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ. ಆದರೆ, ಚಿಂತಾಮಣಿಯ 2ನೇ ಅಪರ ಜಿಲ್ಲಾಸತ್ರ ನ್ಯಾಯಾಲಯ ಶನಿವಾರ ಅರ್ಜಿ ವಜಾಗೊಳಿಸಿತ್ತು. ಇನ್ನು ನಾಪತ್ತೆಯಾಗಿದ್ದ ರಾಜೀವ್ ಗೌಡ ಬಂಧನಕ್ಕೆ ಪೊಲೀಸರ ಎರಡು ಪ್ರತ್ಯೇಕ ತಂಡ ರಚನೆ ಮಾಡಲಾಗಿತ್ತು.
ಜಿಮ್ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತಾಂತರ ಜಾಲ; ಪೊಲೀಸ್ ಸೇರಿ ಆರು ಮಂದಿಯ ಬಂಧನ
ಕಾಂಗ್ರೆಸ್ನಿಂದ ಅಮಾನತು
ರಾಜೀವ್ ಗೌಡ ವಿರುದ್ಧ ಪ್ರತಿಭಟನೆ, ಆಕ್ರೋಶ ಜೋರಾಗಿದ್ದರಿಂದ ಕಾಂಗ್ರೆಸ್ ಪಕ್ಷದಿಂದ ಆಮಾನತುಗೊಳಿಸಿ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಕಳೆದ ಶುಕ್ರವಾರ ಆದೇಶ ಹೊರಡಿಸಿತ್ತು. ರಾಜೀವ್ ಗೌಡ, ಶಿಡ್ಲಘಟ್ಟ ಕ್ಷೇತ್ರದ ವಿಧಾನಸಭೆ ಚುನಾವಣೆಯ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾನೆ.