ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ನರೇಗಾದಲ್ಲಿ ಅಕ್ರಮ ನಡೆದಿದೆ ಎನ್ನುವವರು ಬಹಿರಂಗ ಚರ್ಚೆಗೆ ಬರಲಿ: ಡಿಕೆಶಿ ಸವಾಲು

DK Shivakumar: ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ‌ಸುದ್ದಿಗಾರರೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು.

ಬೆಂಗಳೂರು, ಜ.26: ರಾಜ್ಯದಲ್ಲಿ ನರೇಗಾ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡುವವರು ಮಾಧ್ಯಮಗಳ ವೇದಿಕೆಯಲ್ಲಿ ನನ್ನ ಜತೆ ಚರ್ಚೆಗೆ ಬರಲಿ. ನಾನು ಅಥವಾ ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡರಲ್ಲಿ ಯಾರಾದರೂ ಬರುತ್ತೇವೆ ಎಂದು ವಿಪಕ್ಷಗಳ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ಸವಾಲು ಹಾಕಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಸೋಮವಾರ ಡಿಸಿಎಂ ಪ್ರತಿಕ್ರಿಯೆ ನೀಡಿದರು.

ಅಕ್ರಮವಾಗಿದ್ದರೆ, ಕನಕಪುರ ತಾಲೂಕಿಗೆ ಪ್ರಶಸ್ತಿ ಕೊಟ್ಟಿದ್ದು ಯಾಕೆ? ಅಕ್ರಮ ನಡೆದಿದ್ದರೆ ತನಿಖೆ ಮಾಡಲಿ, ಬಡವರ ಹೊಟ್ಟೆಗೆ ನಷ್ಟ ಮಾಡುವುದೇಕೆ? ಪ್ರತಿ ವರ್ಷ ನಾವು 6 ಸಾವಿರ ಕೋಟಿಯಷ್ಟು ಅನುದಾನದ ಕೆಲಸ ಮಾಡಿದ್ದು ಸರಿಯಲ್ಲವೇ? ಅಕ್ರಮ ಮಾಡಿದ್ದರೆ ಅಂತಹವರನ್ನು ಬಂಧಿಸಿ ಒಳಗೆ ಹಾಕಲಿ” ಎಂದರು.

ಪ್ರತಿ ತಾಲೂಕಿನಲ್ಲೂ ಕನಿಷ್ಠ ಐದು ಕಿ.ಮೀ. ಪಾದಯಾತ್ರೆ

"ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು" ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಮನರೇಗಾ ಉಳಿಸಲು ರಾಜಭವನ ಚಲೋ, ಗ್ರಾಮ್ ಜಿ ಕಾಯ್ದೆ ಹಿಂಪಡೆಯುವವರೆಗೂ ಹೋರಾಟ: ಡಿಕೆಶಿ

"20 ವರ್ಷಗಳ ಹಿಂದೆ ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ನಮಗೆಲ್ಲಾ ಆಶ್ಚರ್ಯ ಉಂಟು ಮಾಡಿದೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಪ್ರಾರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ ಈ ಹಕ್ಕು ಈಗ ಮೊಟಕಾಗಿದೆ. ಆದಕಾರಣ ಇಡೀ ದೇಶದ ಉದ್ದಗಲಕ್ಕೂ ಈ ಬಗ್ಗೆ ಹೋರಾಟ ರೂಪಿಸಲಾಗಿದೆ" ಎಂದರು.

“ನಾವು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಬೇಕಿತ್ತು. ಆದರೆ ನಾವು ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ನಮ್ಮ ಎಲ್ಲಾ ಶಾಸಕರು, ಪರಿಷತ್ ಸದಸ್ಯರು ಕಡ್ಡಾಯವಾಗಿ ಭಾಗವಹಿಸಬೇಕು. ಈ ಹೋರಾಟ ಪ್ರತಿ ಪಂಚಾಯ್ತಿಯಲ್ಲಿರುವ ನರೇಗಾ ಉದ್ಯೋಗ ಕಾರ್ಡ್ ಹೊಂದಿರುವವರಿಗೆ ಈ ಹೋರಾಟ ತಲುಪಬೇಕು. ರಾಜ್ಯ, ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಈ ಪ್ರತಿಭಟನೆ ನಡೆಸಲಾಗುವುದು. ನರೇಗಾ ಕಾರ್ಮಿಕರ ಜೊತೆಗೆ ಪಂಚಾಯಿತಿಗಳ ಹಾಲಿ, ಮಾಜಿ ಸದಸ್ಯರುಗಳು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ. ಜಿಲ್ಲಾ ಮಂತ್ರಿಗಳು ಹಾಗೂ ಶಾಸಕರ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಬೇಕು. ಎಲ್ಲಿ ಶಾಸಕರಿಲ್ಲವೋ ಅಲ್ಲಿ ವಿಧಾನ ಪರಿಷತ್ ಸದಸ್ಯರನ್ನು ನೇಮಿಸಲಾಗಿದೆ” ಎಂದು ಮಾಹಿತಿ ನೀಡಿದರು.

"ಪ್ರತಿವರ್ಷ 6 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ಮನರೇಗಾ ಅಡಿ ನಡೆಯುತ್ತಿದ್ದವು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ದೊರೆಯುತ್ತಿತ್ತು. ವಿಧಾನಸಭೆಯಲ್ಲೂ ಇದರ ಬಗ್ಗೆ ಪ್ರತಿಭಟನೆ ಹಾಗೂ ನಿರ್ಣಯ ತೆಗೆದುಕೊಳ್ಳಲು ನಾವು ಸಜ್ಜಾಗಿದ್ದೇವೆ" ಎಂದರು‌.

"ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು" ಎಂದರು.

ಕೃಷಿ ಕರಾಳ ಕಾಯ್ದೆ ಹಿಂಪಡೆದಂತೆ ಗ್ರಾಮ್ ಜಿ ಕಾಯ್ದೆ ಹಿಂಪಡೆಯುವವರೆಗೆ ಹೋರಾಟ

ಯಾವ ರೀತಿಯ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಕೇಳಿದಾಗ, "ಮನರೇಗಾವನ್ನು ನಾಶ ಮಾಡುವ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗುವುದು. ರೈತರ ಕರಾಳ ಕಾಯ್ದೆಗಳನ್ನು ಹೇಗೆ ಹಿಂಪಡೆಯಲಾಯಿತೋ ಅದೇ ರೀತಿ ಇದನ್ನೂ ಹಿಂಪಡೆಯಬೇಕು. ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಲಾಗುವುದು" ಎಂದರು.

ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರು ಯಾರು ಬರುತ್ತಾರೆ ಎಂದು ಕೇಳಿದಾಗ, “ಸುರ್ಜೇವಾಲ ಅವರು ಇದ್ದಾರೆ, ಮುಖ್ಯಮಂತ್ರಿಗಳು ರಾಷ್ಟ್ರೀಯ ನಾಯಕರಲ್ಲವೇ? ನಾನು ಹಳ್ಳಿಯ ನಾಯಕನಲ್ಲವೇ?” ಎಂದು ತಿಳಿಸಿದರು.

ಜೆಡಿಎಸ್ ಮನರೇಗಾ ಬದಲಾವಣೆ ಬಗ್ಗೆ ವಿರೋಧ ವ್ಯಕ್ತಪಡಿಸದೇ ಇರುವ ಬಗ್ಗೆ ಕೇಳಿದಾಗ, "ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಸಹ ಬಾಯಿ ಬಿಡುತ್ತಿಲ್ಲ. ಹೊಸ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ. ಗ್ರಾಮೀಣ ಭಾಗದ ಜನಪ್ರತಿನಿಧಿಯಾಗಿ ನನ್ನ ಅನುಭವದಲ್ಲಿ ಹೇಳುವುದಾದರೆ ಇದರ ಅನುಷ್ಠಾನ ಅಸಾಧ್ಯ" ಎಂದರು.

"ಈ ಯೋಜನೆಗೆ ಅನುದಾನ ಒದಗಿಸಿ ಕೊಡುವವರು ಯಾರು? ಕೇಂದ್ರವೇ ಅನುದಾನ ಒದಗಿಸಿಕೊಡಲಿ. ಕೆಲವು ನಾಯಕರು ಚರ್ಚೆಗೆ ಬರುತ್ತೇವೆ ಎಂದು ಹೇಳಿದ್ದಾರೆ. ನಾವು ಸದನದಲ್ಲಿ ಅವರ ಚರ್ಚೆಗೆ ಉತ್ತರ ನೀಡಲು ಸಿದ್ಧರಿದ್ದೇವೆ" ಎಂದರು.

2028 ಕ್ಕೆ ಮುಖ್ಯಮಂತ್ರಿಯಾಗುತ್ತೇನೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಇಂತಹ ಒಳ್ಳೆ ದಿನ ಏಕೆ ಅಶುಭ ಮಾತನ್ನಾಡುವುದು, ಆ ವಿಚಾರ ಬೇಡ ಬಿಡಿ" ಎಂದರು.

26 ನಿಗಮಗಳ ಅಧ್ಯಕ್ಷ ಸ್ಥಾನ ಅವಧಿ ಮುಕ್ತಾಯವಾಗಿರುವ ಬಗ್ಗೆ ಕೇಳಿದಾಗ, “2 ವರ್ಷ ಅಥವಾ ಮುಂದಿನ ಆದೇಶ ಬರುವವರೆಗೂ ಎಂದು ಸರ್ಕಾರ ತಿಳಿಸಿದೆ. ಮುಂದಿನ ಆದೇಶ ಬರುವವರೆಗೂ ಶಾಸಕರು ತಮ್ಮ ಸ್ಥಾನದಲ್ಲಿ ಕೆಲಸ ಮುಂದುವರಿಸಿಕೊಂಡು ಹೋಗಲಿದ್ದಾರೆ. ಇದು ಪಕ್ಷದ ತೀರ್ಮಾನ” ಎಂದು ತಿಳಿಸಿದರು.

ನಮ್ಮ ಸೇವೆ ಜನರಿಗಾಗಿಯೇ ಹೊರತು ಕುಟುಂಬಕ್ಕಾಗಿ ಅಲ್ಲ

ತಂದೆಗಾಗಿ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಕುಮಾರಸ್ವಾಮಿ ಹೇಳಿರುವ ಬಗ್ಗೆ ಕೇಳಿದಾಗ, "ನಾವು ಸೇವೆ ಮಾಡುತ್ತಿರುವುದು ನಾಡಿನ ಜನತೆಗಾಗಿ. ಕುಟುಂಬಕ್ಕಾಗಿಯಲ್ಲ. ಕುಟುಂಬದ ಆಸೆ, ಭಾವನೆಗಳು, ತೊಂದರೆಯಲ್ಲಿ ಇರುವದರ ಬಗ್ಗೆ ಅವರು ಮಾತನಾಡಿಕೊಳ್ಳಲಿ. ನಾವು ಈ ದೇಶದ ಜನತೆಯ ಹಿತಕ್ಕಾಗಿ ರಾಜಕಾರಣ ಮಾಡುತ್ತಿದ್ದೇವೆ" ಎಂದರು‌.

ಹಾಸನ ಜೆಡಿಎಸ್ ಸಮಾವೇಶದ ಉದ್ದಕ್ಕೂ ತಮ್ಮನ್ನು ನೆನಪಿಸಿಕೊಂಡಿದ್ದರ ಬಗ್ಗೆ ಕೇಳಿದಾಗ, "ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಅವರಿಗೆ ಶಕ್ತಿ ಬರುವುದಿಲ್ಲ, ಜೀವ ಬರುವುದಿಲ್ಲ, ಧೈರ್ಯ ಬರುವುದಿಲ್ಲ. ಅದಕ್ಕೆ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ" ಎಂದರು.

ಮನೆಗೆ ನುಗ್ಗಿ ಬಂಧಿಸಲಾಯಿತು ಎನ್ನುವ ದೇವೆಗೌಡರ ಹೇಳಿಕೆ ಬಗ್ಗೆ ಕೇಳಿದಾಗ, "ಈ ದೇಶದಲ್ಲಿ ಏನೇನು ಕಾನೂನು ಇದೆಯೋ ಅದೆಲ್ಲವೂ ಎಲ್ಲರಿಗೂ ಒಂದೇ. ಯಾರಿಗೆ ಏನೇನು ಕಾನೂನು ಮಾಡಬೇಕು ಅನ್ನೋದಕ್ಕೆ ನೀವೇ ಉತ್ತರ ನೀಡಬೇಕು" ಎಂದು ಹೇಳಿದರು.

ತಮ್ಮ ಭಾಷಣದ ವೇಳೆ ಸದನದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ರಾಷ್ಟ್ರಪತಿಯವರಿಗೆ ರಾಜ್ಯಪಾಲರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, "ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ರಾಜ್ಯಪಾಲರು ಭಾಷಣ ಓದಿ, ರಾಷ್ಟ್ರಗೀತೆ ಆಗುವ ತನಕ ಇರಬಹುದಿತ್ತು. ರಾಜ್ಯಪಾಲರಿಗೆ ನರೇಗಾ ಬಗೆಗಿನ ಭಾಷಣ ಓದುವುದಕ್ಕೆ ಇಷ್ಟವಿಲ್ಲದಿದ್ದರೆ ಹಾಗೆ ಇರಬಹುದಿತ್ತು. ಜತೆಗೆ ಸಾಕಷ್ಟು ಬೇರೆ ಅವಕಾಶಗಳೂ ಇದ್ದವು. ರಾಜ್ಯಪಾಲರು ಸರ್ಕಾರ ನೀಡಿದ ಭಾಷಣ ಓದುವುದು ಸಂವಿಧಾನ ರಕ್ಷಣೆಯ ಕರ್ತವ್ಯ. ನಮ್ಮಲ್ಲಿ ಅಲ್ಲದೇ ಬೇರೆ ರಾಜ್ಯಗಳಲ್ಲೂ ಇದೇ ರೀತಿ ಆಗಿದೆ" ಎಂದರು.

ದೇಶದ ಹಾಗೂ ನಾಡಿನ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು

"ದೇಶದ ಹಾಗೂ ನಾಡಿನ ಸಮಸ್ತ ಜನತೆಗೆ 77 ನೇ ಗಣರಾಜ್ಯೋತ್ಸವದ ಶುಭಾಶಯಗಳು. ಈ ದೇಶದ ಸಂವಿಧಾನವನ್ನು ಉಳಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವಂತೆ ಮಾಡಲಾಗಿದೆ. ಈ ಮೂಲಕ ಹೊಸ ಪೀಳಿಗೆಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಪ್ರತಿ ಹಂತದಲ್ಲೂ ಬದ್ಧವಾಗಿ ಕೆಲಸ ಮಾಡುತ್ತಿದೆ" ಎಂದರು.

ಕನಕೋತ್ಸವ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ಆಹ್ವಾನ

“ಕನಕಪುರದಲ್ಲಿ ಕಳೆದ 15 ವರ್ಷಗಳಿಂದ ಕನಕೋತ್ಸವ ಆಚರಿಸುತ್ತಿದ್ದು, ಈ ಬಾರಿ ವಿಭಿನ್ನವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. 72 ಸಾವಿರ ಮಹಿಳೆಯರು ಪಂಚ ಗ್ಯಾರಂಟಿ ಯೋಜನೆ ಬಗ್ಗೆ ರಂಗೋಲಿ ಬಿಡಿಸಿದ್ದಾರೆ. 56 ಸಾವಿರ ಮಹಿಳೆಯರು ಗ್ರಾಮೀಣ ಪ್ರದೇಶದಲ್ಲಿ ರಂಗೋಲಿ ಬಿಡಿಸಿದ್ದು, ಪಟ್ಟಣ ಪ್ರದೇಶದಲ್ಲಿ 17 ಸಾವಿರ ಮಹಿಳೆಯರಿಗೆ ರಂಗೋಲಿ ಬಿಡಿಸಲು 28ರಂದು ಸ್ಪರ್ಧೆ ಆಯೋಜಿಸಲಾಗಿದೆ” ಎಂದು ತಿಳಿಸಿದರು.

“ರಾಜ್ಯದ ಎಲ್ಲಾ ತಾಲ್ಲೂಕು ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷರುಗಳಿಗೆ ಹಾಗೂ ಸದಸ್ಯರಿಗೆ ಈ ಕನಕೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡುತ್ತಿದ್ದು, ಈ ಕಾರ್ಯಕ್ರಮವನ್ನು ಯಾವ ರೀತಿ ಮಾಡಿದ್ದೇವೆ ಎಂಬುದನ್ನು ನೋಡಬೇಕು. ಮಹಿಳೆಯರು ರಂಗೋಲಿ ಮೂಲಕ ಹೇಗೆ ತಮ್ಮ ಭಾವನೆ ವ್ಯಕ್ತಪಡಿಸಿದ್ದಾರೆ. ಈ ರಂಗೋಲಿಗಳು ನನ್ನ ಮನ ಮುಟ್ಟಿವೆ” ಎಂದರು.

ವಿಬಿ ಜಿ ರಾಮ್ ಜಿ ಮಸೂದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

“ಇದೇ 31ರವರೆಗೆ ಕನಕೋತ್ಸವ ಕಾರ್ಯಕ್ರಮವನ್ನು ವಿಭಿನ್ನವಾಗಿ ಆಚರಿಸಲಾಗುತ್ತಿದ್ದು, ಯುವಕರಿಗೆ ಕ್ರೀಡೆ, ಕಲೆ, ಸಾಂಸ್ಕೃತಿಕ, ಶೈಕ್ಷಣಿಕ ಆಸಕ್ತಿಗೆ ಪ್ರೋತ್ಸಾಹ ನೀಡಲು ಮುಂದಾಗಿದ್ದೇವೆ. ಈ ವರ್ಷದಿಂದ ಚನ್ನಪಟ್ಟಣ ಹಾಗೂ ರಾಮನಗರ, ಮಾಗಡಿ, ಕುಣಿಗಲ್ ನಲ್ಲಿ ಇದನ್ನು ಆರಂಭಿಸಲಾಗಿದ್ದು, ಇದನ್ನು ರಾಜ್ಯದ ಇತರೆ ತಾಲ್ಲೂಕುಗಳಿಗೆ ತೆಗೆದುಕೊಂಡು ಹೋಗಬೇಕು. ಮುಂದಿನ ದಿನಗಳಲ್ಲಿ ಇದಕ್ಕೆ ಹೊಸ ರೂಪ ನೀಡಿ, ಹೊಸ ಯೋಜನೆ ತರಲು ಮುಂದಾಗಿದ್ದೇವೆ” ಎಂದು ತಿಳಿಸಿದರು.