DK Shivakumar: ವಿಪತ್ತು ನಿರ್ವಹಣೆ ಕಾಯ್ದೆಯಡಿ ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ: ಡಿ.ಕೆ.ಶಿವಕುಮಾರ್
DK Shivakumar: ಯಲಹಂಕದ ಮಾನ್ಯತಾ ಟೆಕ್ ಪಾರ್ಕ್ ಬಳಿ ಮಳೆ ಪ್ರವಾಹಕ್ಕೆ ಕಾರಣವಾದ ರಾಜಕಾಲುವೆ ಹಾಗೂ ನಾಲೆಗಳನ್ನು ಗುರುವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಪರಿಶೀಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.


ಬೆಂಗಳೂರು: ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಯಲಹಂಕದ ಮಾನ್ಯತಾ ಟೆಕ್ ಪಾರ್ಕ್ ಬಳಿ ಮಳೆ ಪ್ರವಾಹಕ್ಕೆ ಕಾರಣವಾದ ರಾಜಕಾಲುವೆ ಹಾಗೂ ನಾಲೆಗಳನ್ನು ಗುರುವಾರ ಪರಿಶೀಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಹಾಗೂ ಮುಖ್ಯಮಂತ್ರಿಗಳು ಈಗಾಗಲೇ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೇವೆ. ಇದು ಬಹಳ ಮುಖ್ಯವಾದ ಜಂಕ್ಷನ್. ಇಲ್ಲಿಂದ ಸಮಸ್ಯೆ ಆರಂಭವಾಗಿ ನಂತರ ಉಳಿದ ಪ್ರದೇಶಗಳಲ್ಲಿ ಸಮಸ್ಯೆಯಾಗುತ್ತಿದೆ. ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಅಡ್ಡಿಪಡಿಸುತ್ತಿದ್ದಾರೆ. ನಮ್ಮ ಅಧಿಕಾರಿಗಳಿಗೂ ಸಹಕಾರ ನೀಡುತ್ತಿರಲಿಲ್ಲ. ಹೀಗಾಗಿ ಸಮಸ್ಯೆಗೆ ಕಾರಣವಾಗಿರುವ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕಟ್ಟಡ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಶಾಶ್ವತ ಪರಿಹಾರ ನೀಡಲಾಗುವುದು
ನಮಗೆ ಯಾರ ಆಸ್ತಿಯನ್ನು ನಷ್ಟ ಮಾಡಲು ಇಷ್ಟವಿಲ್ಲ. ಯಾರಿಗೂ ಅನ್ಯಾಯ ಮಾಡಲು ಬಯಸುವುದಿಲ್ಲ. ನೀರು ಸರಾಗವಾಗಿ ಹರಿಯಬೇಕು. ಹೀಗಾಗಿ ನಾನೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕಾಮಗಾರಿ ಮುಂದುವರಿಸಲು ನನ್ನ ಮುಂದೆ ಎಲ್ಲರೂ ಒಪ್ಪಿಕೊಂಡಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯುವುದು ಮುಖ್ಯ ಎಂದು ತಿಳಿಸಿದರು.
ಆಯುಕ್ತರಿಗೆ ಅಧಿಕಾರ
ಮಳೆ ನೀರು ಸರಾಗವಾಗಿ ಹರಿಯುವುದು ಇಲ್ಲಿ ಮುಖ್ಯವೇ ಹೊರತು ಇನ್ಯಾರೂ ಅಲ್ಲ. ನಾವು ಯಾವುದೇ ಕಟ್ಟಡಗಳಿಗೆ ಅಡಚಣೆ ಮಾಡಲು ಬಯಸುವುದಿಲ್ಲ. ನಾವು ಬೆಂಗಳೂರಿನ ಘನತೆ ಹಾಳಾಗಲು ಬಿಡುವುದಿಲ್ಲ. ಹೀಗಾಗಿ ಈ ಭಾಗದ ಭೂಮಾಲೀಕರಿಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದೇವೆ. ತಾಂತ್ರಿಕ ಕಾರಣಗಳಿಂದಾಗಿ ತಪ್ಪಾಗಿದ್ದರೆ ನಾವು ಅದಕ್ಕೆ ಪರಿಹಾರ ನೀಡುತ್ತೇವೆ. ನಮಗೆ ಈ ವಿಚಾರವಾಗಿ ಶಾಶ್ವತ ಪರಿಹಾರ ಬೇಕಾಗಿದೆ. ಇದಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದು, ನಾವು ನಮ್ಮ ಕೆಲಸ ಮುಂದುವರಿಸುತ್ತೇವೆ. ನಮ್ಮ ಪಾಲಿಕೆ ಆಯುಕ್ತರು ಹಾಗೂ ಕಾರ್ಯದರ್ಶಿಗಳಿಗೆ ಈ ವಿಚಾರದಲ್ಲಿ ಇರುವ ಅಡಚಣೆಗಳನ್ನು ತೆರವುಗೊಳಿಸಲು ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.
ನಕ್ಷೆಗಳ ವಿಚಾರವಾಗಿ ಇರುವ ಗೊಂದಲದ ಬಗ್ಗೆ ಕೇಳಿದಾಗ, ʼನಕ್ಷೆಗಳ ಗೊಂದಲ ಏನೇ ಇದ್ದರೂ ನೀರು ಹರಿಯಲು ಜಾಗ ಮಾಡಲೇಬೇಕುʼ ಎಂದು ತಿಳಿಸಿದರು. ಕಸದ ಸೆಸ್ ಕಡಿಮೆ ಮಾಡಬೇಕು ಎಂಬ ಬಿಜೆಪಿ ಆಗ್ರಹದ ಬಗ್ಗೆ ಕೇಳಿದಾಗ, ʼಅವರ ಕಾಲದಲ್ಲಿ ತೆಗೆದುಕೊಂಡ ತೀರ್ಮಾನವನ್ನು ನಾವು ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಅವರು ಏನು ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಪರಿಶೀಲಿಸಿ ನಂತರ ಅವರೊಂದಿಗೆ ಮಾತನಾಡುತ್ತೇನೆ. ಅವರ ಅಭಿಪ್ರಾಯಕ್ಕೂ ಗೌರವ ನೀಡುತ್ತೇನೆʼ ಎಂದು ತಿಳಿಸಿದರು.
ನೀರಾವರಿ ಇಲಾಖೆಯಲ್ಲಿ ಹೆಚ್ಚು ಎಂಜಿನಿಯರ್ಗಳಿಲ್ಲ
ಜಲಸಂಪನ್ಮೂಲ ಇಲಾಖೆ ಎಂಜಿನಿಯರ್ಗಳ ವರ್ಗಾವಣೆ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದ ಬಗ್ಗೆ ಕೇಳಿದಾಗ, ʼಜಲಸಂಪನ್ಮೂಲ ಇಲಾಖೆಯಲ್ಲಿ ಹೆಚ್ಚು ಎಂಜಿನಿಯರ್ಗಳಿಲ್ಲ. ನಮಗೆ ತುರ್ತಾಗಿ ಎಂಜಿನಿಯರ್ಗಳು ಬೇಕು. ಹೀಗಾಗಿ ನಮ್ಮ ಇಲಾಖೆಯಿಂದ ಯಾರನ್ನೂ ಬೇರೆಡೆಗೆ ಕಳಿಸಬೇಡಿ ಎಂದು ಪತ್ರ ಬರೆದಿದ್ದೇನೆ. ನಮ್ಮ ಇಲಾಖೆಗೆ ಬಂದು ಬಡ್ತಿ ಪಡೆದು ನಂತರ ಲೋಕೋಪಯೋಗಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಇತರ ಇಲಾಖೆಗಳಿಗೆ ವರ್ಗಾವಣೆ ಪಡೆಯುತ್ತಾರೆʼ ಎಂದು ಅವರು ಸ್ಪಷ್ಟನೆ ನೀಡಿದರು.
ಈ ಸುದ್ದಿಯನ್ನೂ ಓದಿ | CM Siddaramaiah: ಬಿ.ಕೆ.ಹರಿಪ್ರಸಾದ್ ಜೊತೆ ಸಿಎಂ ಬ್ರೇಕ್ಫಾಸ್ಟ್ ಮೀಟಿಂಗ್- ಮಂಗಳೂರಿನಲ್ಲಿ ಸೌಹಾರ್ದ ನೆಲೆಸುವ ಕುರಿತು ಚರ್ಚೆ
ನಿಮ್ಮ ಅನುಮತಿ ಇಲ್ಲದೆ ಯಾರು ವರ್ಗಾವಣೆ ಮಾಡಿದ್ದಾರೆ ಎಂದು ಕೇಳಿದಾಗ, ʼಉನ್ನತ ಮಟ್ಟದಲ್ಲಿ ಈ ರೀತಿ ವರ್ಗಾವಣೆ ಮಾಡಲು ಅವಕಾಶ ಇದೆ. ಅನೇಕ ಶಾಸಕರು ತಮಗೆ ಬೇಕಾದವರನ್ನು ಬೇರೆ ಇಲಾಖೆಗೆ ಕಳಿಸಿಕೊಡಿ ಎಂದು ಒತ್ತಡ ಹಾಕುತ್ತಾರೆ. ನೀರಾವರಿ ಇಲಾಖೆಯಲ್ಲಿ ಕೆಲಸ ಮಾಡಲು ಎಂಜಿನಿಯರ್ಗಳು ಮುಂದೆ ಬರುತ್ತಿಲ್ಲ. ಈ ದೃಷ್ಟಿಯಿಂದ ನನ್ನ ಗಮನಕ್ಕೆ ತರದೆ ಯಾರನ್ನೂ ವರ್ಗಾವಣೆ ಮಾಡಬೇಡಿ ಎಂದು ಹೇಳಿದ್ದೇನೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.