ಬೆಂಗಳೂರು, ನ.22: ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (Kassia Bangalore) ವತಿಯಿಂದ 70ನೇ ಕನ್ನಡ ರಾಜ್ಯೋತ್ಸವದ (Kannada Rajyotsava 2025) ಅಂಗವಾಗಿ ಕಾಸಿಯಾ ಕನ್ನಡ ಹಬ್ಬವನ್ನು ಶನಿವಾರ ಆಯೋಜಿಸಲಾಗಿತ್ತು. ಇದರ ಭಾಗವಾಗಿ 8, 9 ಮತ್ತು 10ನೇ ತರಗತಿಯ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ನೂರಾರು ಶಾಲಾ ಮಕ್ಕಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ದೇಶದ ಆರ್ಥಿಕತೆಗೆ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳ ಕೊಡುಗೆ ವಿಷಯದ ಕುರಿತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಇದೇ ವೇಳೆ ಕನ್ನಡ ನಾಡಿನ ಪರಂಪರೆಯನ್ನು ಬಿಂಬಿಸುವ ಚಿತ್ರ ಕಲಾ ಸ್ಪರ್ಧೆಯನ್ನೂ ನಡೆಸಲಾಯಿತು.
ಕಾಸಿಯಾ ಪ್ರತಿ ವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸುತ್ತದೆ. ನಾಡಿನ ಗಣ್ಯರಿಗೆ ಅಭಿನಂದನೆ ಸಲ್ಲಿಸುವುದು, ಮಕ್ಕಳಲ್ಲಿ ಕನ್ನಡ ನಾಡು-ನುಡಿಯ ಬಗ್ಗೆ ಆಸಕ್ತಿ, ಶ್ರದ್ಧೆ ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಕಾಸಿಯಾ ಹಮ್ಮಿಕೊಂಡಿದೆ ಎಂದು ಅಧ್ಯಕ್ಷರಾದ ಬಿ.ಆರ್ ಗಣೇಶ್ ರಾವ್ ಅವರು ವಿಶ್ವವಾಣಿಗೆ ತಿಳಿಸಿದರು.
ಇದನ್ನೂ ಓದಿ : ಕನ್ನಡ ಚಿತ್ರಗಳ ಪ್ರೋತ್ಸಾಹಕ್ಕೆ ರಾಜ್ಯ ಸರ್ಕಾರದಿಂದಲೇ ಒಟಿಟಿ
ಕಾಸಿಯಾದ ಖಜಾಂಚಿ ಆರ್. ದುರೈ, ಉಪ ಸಮಿತಿಯ ಚೇರ್ಮನ್ ಶಿವಕುಮಾರ್, ಸಂಜಯ್ ಪಾಲಿಮರ್ ಸಂಸ್ಥೆಯ ಸಂಜಯ್, ಕಾಸಿಯಾದ ಮಾಜಿ ಜಂಟಿ ಕಾರ್ಯದರ್ಶಿ ಶ್ರೇಯಾನ್ಸ್ ಕುಮಾರ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.