'Shakti' smart card: ʻಶಕ್ತಿʼ ಸ್ಮಾರ್ಟ್ ಕಾರ್ಡ್ ಗೆ ಅಂತಿಮ ಸಿದ್ಧತೆ: ಬೈರತಿ ಸುರೇಶ್
ಸೋಮವಾರ ವಿಧಾನಸೌಧದಲ್ಲಿ ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸುಮಾರು 2 ಕೋಟಿಗೂ ಅಧಿಕ ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಿಸುವ ಸಾಧ್ಯತೆಗಳಿವೆ. ಈ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ವಿಶೇಷ ಉದ್ದೇಶಿತ ವಾಹನ (SPV)ಯನ್ನು ರಚನೆ ಮಾಡಿ, ಇದರಡಿಯೇ ವಿತರಣಾ ಪ್ರಕ್ರಿಯೆ ನಡೆಸಲಾಗುತ್ತದೆ
-
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ʻಶಕ್ತಿʼ ಯೋಜನೆಯಡಿ ಸ್ಮಾರ್ಟ್ ಕಾರ್ಡ್(Smart Card) ವಿತರಣೆ ಬಗ್ಗೆ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್(Transport Minister Bairati Suresh) ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸುಮಾರು 2 ಕೋಟಿಗೂ ಅಧಿಕ ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಿಸುವ ಸಾಧ್ಯತೆಗಳಿವೆ. ಈ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ವಿಶೇಷ ಉದ್ದೇಶಿತ ವಾಹನ (SPV)ಯನ್ನು ರಚನೆ ಮಾಡಿ, ಇದರಡಿಯೇ ವಿತರಣಾ ಪ್ರಕ್ರಿಯೆ ನಡೆಸಲಾಗುತ್ತದೆ ಎಂದರು.
ಇದೇವೇಳೆ, ಸ್ಮಾರ್ಟ್ ಕಾರ್ಡ್'ನ ರೂಪುರೇಶೆಯನ್ನು ಅಂತಿಮಗೊಳಿಸಲು ವಹಿವಾಟು ಸಲಹೆಗಾರರ ಸಮಿತಿಯನ್ನು ನೇಮಕ ಮಾಡಲಾಗಿದೆ. ಈ ಸಮಿತಿಯು ಸ್ಮಾರ್ಟ್ ಕಾರ್ಡ್ ಸ್ವರೂಪ, ತಾಂತ್ರಿಕ ನೆರವು, ಟೆಂಡರ್ ಪ್ರಕ್ರಿಯೆ ಮತ್ತು ವಿತರಣೆ ಪ್ರಕ್ರಿಯೆಯನ್ನು ಹೇಗೆ ನಡೆಸಬೇಕೆಂಬುದರ ಬಗ್ಗೆ ಸಾರಿಗೆ ನಿಗಮಗಳಿಗೆ ಸಲಹೆ, ಮಾರ್ಗದರ್ಶನ ನೀಡಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: Minister Byrati Suresh: ಕುಡಿಯುವ ನೀರಿನ ವಿಚಾರದಲ್ಲಿ ರಾಜಕೀಯ ಬೇಡ: ಸಚಿವ ಬೈರತಿ ಸುರೇಶ್
ಪಿಪಿಪಿ ಮಾದರಿಯಲ್ಲಿ ಸ್ಮಾರ್ಟ್ ಕಾರ್ಡ್
ಸಮಿತಿಯು ಈ ತಿಂಗಳಾಂತ್ಯದಲ್ಲಿ ವರದಿ ನೀಡಲಿದ್ದು, ಇದರ ಆಧಾರದಲ್ಲಿ ಸ್ಮಾರ್ಟ್ ಕಾರ್ಡ್ ಪ್ರಕ್ರಿಯೆ ನಡೆಸಲಾಗುತ್ತದೆ. ಕೋಟ್ಯಂತರ ಸ್ಮಾರ್ಟ್ ಕಾರ್ಡ್ ವಿತರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಟೆಂಡರ್ ಕರೆಯಲಾಗುತ್ತದೆ.
ಮಹಿಳೆಯರಿಗೆ ಉಚಿತವಾಗಿ ಸ್ಮಾರ್ಟ್ ಕಾರ್ಡ್ ದೊರೆಯಲಿದೆ. ಪುರುಷರು ಪಾವತಿ ಆಧಾರದಲ್ಲಿ ಸ್ಮಾರ್ಟ್ ಕಾರ್ಡ್ ಖರೀದಿಸಬೇಕಾಗುತ್ತದೆ. ಹೀಗೆ ಮಹಿಳಾ ಮತ್ತು ಪುರುಷ ಪ್ರಯಾಣಿಕರೆಲ್ಲರನ್ನು ಒಟ್ಟುಗೂಡಿಸಿದರೆ ಸುಮಾರು 2.5 ಕೋಟಿಯಿಂದ 3 ಕೋಟಿ ಕಾರ್ಡ್'ಗಳು ಬೇಕಾಗುತ್ತವೆ ಎಂದು ಅಂದಾಜಿಸಲಾಗಿದೆ ಎಂದು ಬೈರತಿ ಸುರೇಶ್ ತಿಳಿಸಿದರು.
ಸ್ಮಾರ್ಟ್ ಕಾರ್ಡುಗಳನ್ನು ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ವಿತರಣೆ ಮಾಡಲಾಗುತ್ತದೆ. ಮಹಿಳೆಯರಿಗೆ ಉಚಿತವಾಗಿ ವಿತರಿಸಲಿದ್ದು, ಇದಕ್ಕೆ ತಗಲುವ ಸಂಸ್ಕರಣ ವೆಚ್ಚವನ್ನು ಸರ್ಕಾರ ಭರಿಸಲಿದ್ದರೆ, ಪುರುಷ ಪ್ರಯಾಣಿಕರು ಹಣ ಕೊಟ್ಟು ಖರೀದಿಸಬೇಕಾಗುತ್ತದೆ. ಸ್ಮಾರ್ಟ್ ಕಾರ್ಡ್'ಗಳ ತಾಂತ್ರಿಕ ನೆರವು ಸೇರಿದಂತೆ ಇನ್ನಿತರ ಸಹಕಾರವನ್ನು ಖಾಸಗಿ ಸಂಸ್ಥೆಯೇ ನಿರ್ವಹಣೆ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಎಲೆಕ್ಟ್ರಿಕ್ ವಾಹನಗಳಿಗೆ ಆದ್ಯತೆ
ಪರಿಸರ ಸಂರಕ್ಷಣೆಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದ್ದು, ಎಲೆಕ್ಟ್ರಿಕ್ ಬಸ್'ಗಳ ಖರೀದಿಯತ್ತ ಗಮನಹರಿಸಿದೆ. ಈ ಹಿನ್ನೆಲೆಯಲ್ಲಿ ಹಂತಹಂತವಾಗಿ ನಾಲ್ಕೂ ನಿಗಮಗಳಿಗೆ 4 ಸಾವಿರಕ್ಕೂ ಅಧಿಕ ಎಲೆಕ್ಟ್ರಿಕ್ ಬಸ್ ಗಳನ್ನು ಖರೀದಿಸಲಾಗುತ್ತದೆ ಎಂದರು.
ಸಭೆಯಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಆಯುಕ್ತರು ಮತ್ತು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಸೆಲ್ವಮಣಿ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಇದ್ದರು.