ಬೆಂಗಳೂರು: ಬಿಡದಿ ಬಳಿ ಅನಿತಾ ಕುಮಾರಸ್ವಾಮಿ (Anitha Kumaraswamy) ಅವರಿಗೆ ಸೇರಿದ ಸುಮಾರು 100 ಎಕರೆ ಜಮೀನು ಇದೆ ಎಂಬ ಸಚಿವ ಎಂ.ಬಿ.ಪಾಟೀಲ್ ಅವರ ಹೇಳಿಕೆಗೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ನನ್ನ ಹಾಗೂ ನನ್ನ ಕುಟುಂಬದ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡಿದರೆ ಕಾನೂನು ಮೂಲಕ ಉತ್ತರ ಕೊಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ನನ್ನ ಹೆಸರಿನಲ್ಲಿರುವುದು 32 ಎಕರೆ ಜಮೀನು ಮಾತ್ರ, ಸಚಿವರಾದ ಎಂ.ಬಿ.ಪಾಟೀಲ್ ಅವರು ಹೇಳಿರುವಂತೆ 100 ಎಕರೆ ಅಲ್ಲ. ರಾಜಕೀಯ ದುರುದೇಶಕ್ಕಾಗಿ ಮನೆಯವರನ್ನು ಎಳೆದು ತಂದು ಸುಳ್ಳು ಪ್ರಚಾರ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ.
ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚಿಸುವ ಕೀಳು ಮಟ್ಟಕ್ಕೆ ಯಾರೂ ಹೋಗಬಾರದು. ಅನಗತ್ಯವಾಗಿ ನನ್ನ ಬಗ್ಗೆ, ನನ್ನ ಕುಟುಂಬದ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡಿದರೆ ಕಾನೂನು ಮೂಲಕ ಅಂಥವರಿಗೆ ಉತ್ತರ ಕೊಡುತ್ತೇನೆ ಎಂದು ಸಚಿವರ ವಿರುದ್ಧ ಕಿಡಿಕಾರಿದ್ದಾರೆ.
ಸಚಿವ ಎಂ.ಬಿ.ಪಾಟೀಲ್ ಏನು ಹೇಳಿದ್ದರು?
ಬಿಡದಿ ಟೌನ್ಶಿಪ್ ನಿರ್ಮಾಣ ವಿಚಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ. ಈ ಯೋಜನೆಯನ್ನು ಸ್ವತಃ ಕುಮಾರಸ್ವಾಮಿ ಅವರೇ ಪ್ರಾರಂಭಿಸಿದ್ದರು. ಹಾಗಿದ್ದ ಮೇಲೆ ಈಗೇಕೆ ವಿರೋಧ ಮಾಡುತ್ತಿದ್ದಾರೆ? ಎಂದು ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದರು.
ಅಲ್ಲದೇ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರಿಗೆ ಸೇರಿದ ಸುಮಾರು 100 ಎಕರೆ ಜಮೀನು ಸಹ ಈ ಯೋಜನೆಯ ವ್ಯಾಪ್ತಿಯಲ್ಲಿ ಬರುತ್ತದೆ. ಈಗ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ನಾಟಕ ಎಂದು ಟೀಕಿಸಿದ್ದರು. ಸಚಿವರ ಹೇಳಿಕೆ ಇದೀಗ ಅನಿತಾ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.