ಬೆಂಗಳೂರು: ಶಿವಮೊಗ್ಗದ ಮಾಜಿ ಶಾಸಕ ಹಾಗೂ ರಾಜ್ಯ ಮಾಜಿ ಶಾಸಕರ ವೇದಿಕೆಯ ಅಧ್ಯಕ್ಷರಾಗಿದ್ದ ಎಚ್.ಎಂ. ಚಂದ್ರಶೇಖರಪ್ಪ (78) (H.M. Chandrashekarappa) ಅವರು ಅನಾರೋಗ್ಯದಿಂದ ಭಾನುವಾರ ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರರಾದ ಮಾಜಿ ಕಾರ್ಪೊರೇಟರ್ ಎಚ್.ಸಿ. ಯೋಗೀಶ್ ಹಾಗೂ ಉದ್ಯಮಿ ಶರಣ್ ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಪತ್ನಿ ಶಾರದ ಅವರು ಈ ಹಿಂದೆಯೇ ನಿಧನರಾಗಿದ್ದರು.
ಚಂದ್ರಶೇಖರಪ್ಪ ಅವರು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಶಿವಮೊಗ್ಗ ನಗರಸಭೆಯ ಅಧ್ಯಕ್ಷರಾಗಿ ಯಶಸ್ವಿ ಸೇವೆ ಸಲ್ಲಿಸಿದ್ದರು. 1997-98ರ ಅವಧಿಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು, ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಜಯಗಳಿಸಿ ವಿಧಾನಸಭಾ ಶಾಸಕರಾಗಿ ಆಯ್ಕೆಯಾಗಿದ್ದರು.
ಇನ್ನು ಶಾಸಕರಾಗಿದ್ದ ಅವಧಿಯಲ್ಲಿ ಶಿವಮೊಗ್ಗ ನಗರದ ಪ್ರಮುಖ ಯೋಜನೆಯಾದ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿರ್ಮಾಣ ಹಾಗೂ ಗಾಜನೂರು ಡ್ಯಾಂ ಹೊಸದಾಗಿ ಪುನರ್ ನಿರ್ಮಾಣಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ರಾಜಕೀಯದ ಜೊತೆಗೆ ಸಮಾಜಸೇವೆಯಲ್ಲೂ ಸಕ್ರಿಯರಾಗಿದ್ದ ಅವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು.