ಬೆಂಗಳೂರು: ಕರ್ನಾಟಕ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ ಪ್ರಕರಣವೊಂದು (Cyber Crime) ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ವೈಟ್ಫೀಲ್ಡ್ನ ಪ್ರತಿಷ್ಠಿತ ಕ್ರಿಪ್ಟೋ ಕರೆನ್ಸಿ ಎಕ್ಸ್ಚೇಂಜ್ ಕಂಪನಿಯಾದ ನೆಬಿಲೊ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ಸರ್ವರ್ ಹ್ಯಾಕ್ ಮಾಡಿ, ಸೈಬರ್ ಖದೀಮರು 378 ಕೋಟಿ ರೂ. ಕಳವು ಮಾಡಿದ್ದಾರೆ. ಈ ಸಂಬಂಧ ವೈಟ್ಫೀಲ್ಡ್ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ನೆಬಿಲೊ ಟೆಕ್ನಾಲಜೀಸ್ ಕಂಪನಿ ನೌಕರ ರಾಹುಲ್ ಅಗರ್ವಾಲ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ರಾಹುಲ್ನ ಲ್ಯಾಪ್ಟಾಪ್ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ನೆಬಿಲೊ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಕ್ರಿಪ್ಟೊ ಕರೆನ್ಸಿ ಎಕ್ಸಚೇಂಜ್ ಮಾಡುವ ಕಂಪನಿಯಾಗಿದೆ. ಸೈಬರ್ ವಂಚಕರು ಎರಡು ಬಾರಿ ಸರ್ವರ್ ಹ್ಯಾಕ್ ಮಾಡಿದ್ದಾರೆ. ಮೊದಲಿಗೆ ನಸುಕಿನ ಜಾವ 2:37ಕ್ಕೆ ಕಂಪನಿಯ ಸರ್ವರ್ ಹ್ಯಾಕ್ ಮಾಡಿ, ವ್ಯಾಲೆಟ್ನಿಂದ 1 USDT ಅನ್ನು ಮತ್ತೊಂದು ವ್ಯಾಲೆಟ್ಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ನಂತರ, ಬೆಳಗ್ಗೆ 9:40 ಮತ್ತೆ ಸರ್ವರ್ ಹ್ಯಾಕ್ ಮಾಡಿ, ವ್ಯಾಲೆಟ್ನಿಂದ 44 ಮಿಲಿಯನ್ USDT (ಅಂದಾಜು 3,78,00,00,000 ರೂಪಾಯಿ) ವರ್ಗಾವಣೆ ಮಾಡಿಕೊಂಡಿದ್ದಾರೆ.
ಹಣ ಕಳುವು ಆಗುತ್ತಿದ್ದಂತೆ, ನೆಬಿಲೊ ಟೆಕ್ನಾಲಜಿಸ್ ಕಂಪನಿ ಆಂತರಿಕ ತನಿಖೆ ನಡೆಸಿತ್ತು. ತನಿಖೆ ವೇಳೆ ತನ್ನದೇ ಕಂಪನಿಯ ನೌಕರ ರಾಹುಲ್ ಅಗರ್ವಾಲ್ ಅವರ ಲ್ಯಾಪ್ಟ್ಯಾಪ್ ಮೂಲಕ ಸರ್ವರ್ ಹ್ಯಾಕ್ ಮಾಡಲಾಗಿದೆ ಎಂಬುವುದು ಗೊತ್ತಾಗಿದೆ. ರಾಹುಲ್ ಅಗರ್ವಾಲ್ ಅವರು ಕಂಪನಿ ನೀಡಿದ ಲ್ಯಾಪ್ಟಾಟ್ ಬಳಸಿಕೊಂಡು ಮತ್ತೊಂದು ಕಂಪನಿಯಲ್ಲಿ ಪಾರ್ಟ್ಟೈಮ್ ಕೆಲಸ ಮಾಡಿದ್ದರು. ರಾಹುಲ್ ಅಗರ್ವಾಲ್ ಮತ್ತೊಂದು ಕಂಪನಿಯಲ್ಲಿ ಕೆಲಸ ಮಾಡಿ 15 ಲಕ್ಷ ರೂ. ಹಣ ಪಡೆಯುತ್ತಿದ್ದರು. ಬೇರೆ ಕಂಪನಿಯಲ್ಲಿ ಕೆಲಸ ಮಾಡುವ ವೇಳೆ ಸೈಬರ್ ವಂಚಕರು, ಇವರ ಲ್ಯಾಪ್ಟಾಪ್ ಹ್ಯಾಕ್ ಮಾಡಿ ಸರ್ವರ್ಗೆ ಎಂಟ್ರಿಯಾಗಿ, 44 ಮಿಲಿಯನ್ ಡಾಲರ್ ದೋಚಿದ್ದಾರೆ.
ಈ ಸುದ್ದಿಯನ್ನೂ ಓದಿ | Fraud Case: ಚಾಮರಾಜನಗರ: ಉದ್ಯಮಿಗೆ 3.70 ಲಕ್ಷ ರೂ. ವಂಚಿಸಿ ಪೊಲೀಸರೇ ನಾಪತ್ತೆ!
ಒಂದೇ ಪ್ರಕರಣದಲ್ಲಿ 378 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಕ್ರಿಪ್ಟೋ ಕರೆನ್ಸಿ ಕಳುವುಗೊಂಡಿರುವ ಈ ಘಟನೆ, ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ಕ್ರೈಂ ಎನ್ನಲಾಗಿದೆ.