HD Deve Gowda: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ʼಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ ಪ್ರಶಸ್ತಿ' ಪ್ರದಾನ
HD Deve Gowda: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ತೀವ್ರ ಭಾವೋದ್ವೇಗಕ್ಕೆ ಒಳಗಾದ ದೇವೇಗೌಡರು, ತಮಗೆ ನೀಡಲಾದ ಈ ಪ್ರಶಸ್ತಿಗೆ ಸಮಸ್ತ ಕನ್ನಡಿಗರ ಪ್ರೀತಿ, ವಿಶ್ವಾಸ ಕಾರಣ ಹಾಗೂ ನನ್ನ ಬದುಕಿನುದ್ದಕ್ಕೂ ನನ್ನ ಪಾಲಿನ ಶಕ್ತಿಯಾಗಿ ಉಳಿದಿರುವ ನನ್ನ ಶ್ರೀಮತಿ ಚನ್ನಮ್ಮ ಅವರಿಗೆ ನನ್ನ ಯಶಸ್ಸಿನ ಶ್ರೇಯಸ್ಸು ಸಲ್ಲಬೇಕು ಎಂದು ಹೇಳಿದರು.


ಬೆಂಗಳೂರು: ನಾಡಿನ ಸಂತಶ್ರೇಷ್ಠರ ಸಾನ್ನಿಧ್ಯದಲ್ಲಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ (HD Deve Gowda) ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ನಂಜಾವಧೂತ ಮಹಾಸ್ವಾಮೀಜಿ, ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ, ಆದಿಚುಂಚನಗಿರಿ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಠದ ಶ್ರೀ ನಿಶ್ಚಲಾನಂದ ಸ್ವಾಮೀಜಿ ಅವರು ದೇವೇಗೌಡರಿಗೆ ಗಂಗ ಸಾಮ್ರಾಟ ಶ್ರೀ ಪುರುಷ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿ ಸ್ವೀಕರಿಸಿ ತೀವ್ರ ಭಾವೋದ್ವೇಗಕ್ಕೆ ಒಳಗಾದ ದೇವೇಗೌಡರು, ತಮಗೆ ನೀಡಲಾದ ಈ ಪ್ರಶಸ್ತಿಗೆ ಸಮಸ್ತ ಕನ್ನಡಿಗರ ಪ್ರೀತಿ, ವಿಶ್ವಾಸ ಕಾರಣ ಹಾಗೂ ನನ್ನ ಬದುಕಿನುದ್ದಕ್ಕೂ ನನ್ನ ಪಾಲಿನ ಶಕ್ತಿಯಾಗಿ ಉಳಿದಿರುವ ನನ್ನ ಶ್ರೀಮತಿ ಚನ್ನಮ್ಮ ಅವರಿಗೆ ನನ್ನ ಯಶಸ್ಸಿನ ಶ್ರೇಯಸ್ಸು ಸಲ್ಲಬೇಕು ಎಂದು ಹೇಳಿದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ಎಲ್ಲಾ ಕನ್ನಡಿಗರು ಸೇರಿ ಹದಿನಾರು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಿಸಿಕೊಟ್ಟಿದ್ದರು. ಅದರ ಪರಿಣಾಮವಾಗಿ ನಾನು ಪ್ರಧಾನಿಯಾಗಲು ಸಾಧ್ಯವಾಯಿತು ಎಂದ ದೇವೇಗೌಡರು; ಇದು ನನ್ನ ಜೀವನದ ಸಂದ್ಯಾಕಾಲ. ನಾನು ಇನ್ನೇನು ಮಾಡಲು ಸಾಧ್ಯ. ಆದರೂ ರಾಷ್ಟ್ರದ, ನಾಡಿನ ಜನರಿಗೆ ಏನಾದರೂ ಕಿಂಚಿತ್ತಾದರೂ ಅಳಿಲು ಸೇವೆ ಮಾಡಬೇಕು ಎನ್ನುವುದು ನನ್ನ ಮಹದಾಸೆ. ಅದಕ್ಕಾಗಿ ಗೋದಾವರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ನ್ಯಾಯ ಮಾಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಹಾಗೂ ಮಾವಿಗೆ ಬೆಂಬಲ ಬೆಲೆ ಕೊಡಬೇಕು ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ಅವರು ಹೇಳಿದರು.
ಕರ್ನಾಟಕ ರಾಜ್ಯ ಎದುರಿಸುತ್ತಿರುವ ಜ್ವಲಂತ ನೀರಾವರಿ ಸಮಸ್ಯೆಗಳನ್ನು ಬಗೆಹರಿಸುವ ಶಕ್ತಿ ಇರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ ಎಂದು ಇದೇ ವೇಳೆ ಮಾಜಿ ಪ್ರಧಾನಿ ದೇವೇಗೌಡರು ಹೇಳಿದರು.

ನನಗೆ 93ನೇ ವಯಸ್ಸಿನಲ್ಲಿ, ಜೀವನದ ಕೊನೆ ದಿನಗಳಲ್ಲಿ ಈ ಹಂತದಲ್ಲಿ ನಿಮ್ಮ ಆಶೀರ್ವಾದ ನನಗೆ ಬಹಳ ಸಮಾಧಾನ ತಂದಿದೆ. 65 ವರ್ಷಗಳ ರಾಜಕಾರಣದಲ್ಲಿ ನನ್ನನ್ನು ಎಲ್ಲಾ ಸಮಾಜದವರು ಬೆಳೆಸಿದ್ದಾರೆ. ಪ್ರಧಾನಿಯಾಗಿ ರೈತನ ಮಗ ಕೆಲಸ ಮಾಡಿದ್ದಾನೆ. ನಾಲ್ಕು ಎಕರೆ ಜಮೀನು ಇಟ್ಟುಕೊಂಡಿದ್ದ ರೈತನ ಮಗ ಆ ಸ್ಥಾನಕ್ಕೆ ಹೋಗಬೇಕಾದರೆ ಈ ರಾಜ್ಯದ ಎಲ್ಲ ಸಮಾಜಗಳು ಸಹಾಯ ಮಾಡಿದ್ದಾರೆ. ಇದನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | SBI Recruitment 2025: ಬರೋಬ್ಬರಿ 2,964 ಹುದ್ದೆಗಳ ಭರ್ತಿಗೆ ಮತ್ತೊಮ್ಮೆ ಅರ್ಜಿ ಆಹ್ವಾನಿಸಿದ ಎಸ್ಬಿಐ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸುಪ್ರೀಂ ಕೋರ್ಟ್ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಹಾಗೂ ಇತರರು ಉಪಸ್ಥಿತರಿದ್ದರು.