ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿದ ಕನ್ನಡಿಗರು ಸೇರಿ ಭಾರತೀಯರು ಸ್ವದೇಶಕ್ಕೆ ಹಿಂದಿರುಗಲು ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಸಮೀರ್ ಕುಮಾರ್ ಸಿನ್ಹಾ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಪತ್ರ ಬರೆದಿದ್ದಾರೆ.
ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರು ವಾಪಸ್ ಆಗಲು ಅಗತ್ಯ ವಿಮಾನಗಳ ವ್ಯವಸ್ಥೆ ಮಾಡಲು ವಿಮಾನಯಾನ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಬೇಕು. ವಿವಿಧ ವಿಮಾನಯಾನ ಸಂಸ್ಥೆಗಳಲ್ಲಿ ವಾಪಸಾತಿ ಟಿಕೆಟ್ಗಳನ್ನು ಕಾಯ್ದಿರಿಸಿದ್ದ ಅನೇಕರು ವಾಪಸ್ ಆಗಲು ಸಮಸ್ಯೆಯಾಗಿದೆ. ಹೀಗಾಗಿ ಪ್ರಯಾಣಿಕರು ಹಿಂದಿರುಗಲು ಅಗತ್ಯ ವ್ಯವಸ್ಥೆ ಕಲ್ಪಿಸಲು ವಿಮಾನಯಾನ ಸಂಸ್ಥೆಗಳೊಂದಿಗೆ ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.
ಇರಾನ್-ಇಸ್ರೇಲ್ ಯುದ್ಧದ ಕುರಿತಾಗಿ ಮೊದಲೇ ಭವಿಷ್ಯ ನುಡಿದಿದ್ದ ಟ್ರಾವೆಲ್ ಅಸ್ಟ್ರೋಲಜರ್; ಅಂದು ಹೇಳಿದ್ದೇನು?
ವಾಪಸಾತಿ ಟಿಕೆಟ್ ಬುಕ್ ಮಾಡಿ, ವೇಳಾಪಟ್ಟಿಯ ಪ್ರಕಾರ ಪ್ರಯಾಣಿಸಲು ಸಾಧ್ಯವಾಗದ ಪ್ರಯಾಣಿಕರಿಗೆ ಉಚಿತ ಬೋರ್ಡಿಂಗ್ ಮತ್ತು ವಸತಿ ವ್ಯವಸ್ಥೆ ಸೇರಿದಂತೆ ಅಗತ್ಯ ಸಹಾಯವನ್ನು ಒದಗಿಸಬೇಕು. ಟಿಕೆಟ್ ರಿ ಶೆಡ್ಯೂಲ್ ಮಾಡಲು ಅವಕಾಶ ಮತ್ತು ಹೆಚ್ಚುವರಿ ಶುಲ್ಕಗಳ ವಿನಾಯಿತಿ ನೀಡಬೇಕು. ಸಾಧ್ಯವಾದಷ್ಟು ಬೇಗ ಸಾಕಷ್ಟು ವಿಮಾನಗಳನ್ನು ವ್ಯವಸ್ಥೆ ಮಾಡಲಾಗಿದೆಯೆ ಮತ್ತು ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಇದರಿಂದಾಗಿ ಸಂಕಷ್ಟದಲ್ಲಿರುವ ಪ್ರಯಾಣಿಕರು ಸುರಕ್ಷಿತವಾಗಿ ವಾಪಸಾಗಲು ಅನುಕೂಲವಾಗುತ್ತದೆ. ಇದಕ್ಕಾಗಿ ಅಗತ್ಯವಿರುವ ಕಡೆಗಳಲ್ಲಿ ಸಮನ್ವಯವನ್ನು ಸುಗಮಗೊಳಿಸಲು ಕರ್ನಾಟಕ ಸರ್ಕಾರವು ಸಂಪೂರ್ಣ ಸಹಕಾರವನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ.