Pralhad Joshi: ಬೆಂಗಳೂರು ಕಾಲ್ತುಳಿತಕ್ಕೆ ರಾಜ್ಯ ಸರ್ಕಾರದ ಹೊಣೆಗೇಡಿತನ ಕಾರಣ: ಪ್ರಲ್ಹಾದ್ ಜೋಶಿ
ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ರಾಜ್ಯ ಸರ್ಕಾರ ಸೂಕ್ತ ಬಿಗಿ, ಭದ್ರತೆ ಕೈಗೊಂಡಿಲ್ಲ. ಆರ್ಸಿಬಿ ಅಭಿಮಾನಿಗಳನ್ನು ನಿಭಾಯಿಸುವಲ್ಲಿ ರೂಪುರೇಷೆ, ಸಿದ್ಧತೆ ನಡೆಸದಿರುವುದೇ ಈ ದುರಂತಕ್ಕೆ ಕಾರಣವಾಗಿದೆ. ಬಿಗಿ ಭದ್ರತೆ, ತುರ್ತು ಸೇವೆಗಳನ್ನು ಒದಗಿಸುವಲ್ಲಿ ಅತ್ಯಂತ ಬೇಜವಾಬ್ದಾರಿಯಾಗಿ ವರ್ತಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ.

ನವದೆಹಲಿ: ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ಘಟಿಸಿದ ದುರಂತಕ್ಕೆ ರಾಜ್ಯ ಸರ್ಕಾರದ ಹೊಣೆಗೇಡಿತನವೇ ಕಾರಣ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿರುವುದು ನಿಜಕ್ಕೂ ದಾರುಣ ಘಟನೆ ಎಂದು ವಿಷಾದ ವ್ಯಕ್ತಪಡಿಸಿರುವ ಸಚಿವರು, ಇದರಲ್ಲಿ ರಾಜ್ಯ ಸರ್ಕಾರದ ಅಡಳಿತ ವೈಫಲ್ಯವೇ ಎದ್ದು ಕಾಣುತ್ತಿದೆ ಎಂದು ದೂರಿದ್ದಾರೆ.
ಕ್ರಿಕೆಟ್ ಗೆಲುವಿನ ಸಂಭ್ರಮಾಚರಣೆ ಎಲ್ಲೆಡೆಯಂತೆ ಬೆಂಗಳೂರಿನಲ್ಲೂ ಸಹಜವಾಗಿ ನಡೆದಿದೆ. 18 ವರ್ಷಗಳ ಬಳಿಕ ಆರ್ಸಿಬಿ ಗೆಲುವು ಸಾಧಿಸಿದ ಸಂಭ್ರಮ ಮುಗಿಲು ಮುಟ್ಟಿತ್ತು. ಆದರೆ ರಾಜ್ಯ ಸರ್ಕಾರ ಈ ವೇಳೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.
ಸಂಭ್ರಮಾಚರಣೆ ವೇಳೆ ರಾಜ್ಯ ಸರ್ಕಾರ ಸೂಕ್ತ ಬಿಗಿ, ಭದ್ರತೆ ಕೈಗೊಂಡಿಲ್ಲ. ಆರ್ಸಿಬಿ ಅಭಿಮಾನಿಗಳನ್ನು ನಿಭಾಯಿಸುವಲ್ಲಿ ರೂಪುರೇಷೆ, ಸಿದ್ಧತೆ ನಡೆಸದಿರುವುದೇ ಈ ದುರಂತಕ್ಕೆ ಕಾರಣವಾಗಿದೆ. ಬಿಗಿ ಭದ್ರತೆ, ತುರ್ತು ಸೇವೆಗಳನ್ನು ಒದಗಿಸುವಲ್ಲಿ ಅತ್ಯಂತ ಬೇಜವಾಬ್ದಾರಿಯಾಗಿ ವರ್ತಿಸಿದೆ ಎಂದು ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | ಬೆಂಗಳೂರು ಕಾಲ್ತುಳಿಕ್ಕೆ ಡಿಕೆಶಿ ಕಾರಣ; ಅವರನ್ನು ಸಚಿವ ಸಂಪುಟದಿಂದ ಹೊರ ಹಾಕಿ: ಎಚ್ಡಿಕೆ ಆಗ್ರಹ
ಸೂಕ್ತ ವ್ಯವಸ್ಥೆ, ಯೋಜನೆ ಮತ್ತು ಜನಸಂದಣಿ ಪ್ರದೇಶದಲ್ಲಿ ನಿಯಂತ್ರಣ ಮಾಡದಿರುವ ಪರಿಣಾಮ ಇಂತಹ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಸರ್ಕಾರ ಸ್ವಲ್ಪ ಎಚ್ಚರ ವಹಿಸಿದ್ದರೆ ಈ ದುರಂತ ತಪ್ಪಿಸಬಹುದಿತ್ತು. ರಾಜ್ಯ ಸರ್ಕಾರವೇ ಇದರ ಹೊಣೆ ಹೊರಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.