ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ (DK Shivakumar Oath ceremony) ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ವಿವಿಧ ರಾಜಕೀಯ ನಾಯಕರು ಸೇರಿ ಗಣ್ಯರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಡಿಕೆಶಿಗೆ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.
ಜನಪರ ಕೆಲಸಗಳಿಗೆ ಈ ಅವಕಾಶ ಬಳಸಿಕೊಳ್ಳಿ: ಎಚ್ಡಿಕೆ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ, ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಮಗೆ ದೊರೆತಿರುವ ಈ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.
ನಿಮ್ಮ ಅಧಿಕಾರಾವಧಿಯು ನಾಡಿಗೆ ಶಾಂತಿ, ಸಮೃದ್ಧಿ ತರಲಿ: ಬಿಎಸ್ವೈ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿ, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನಾಡಿನ ಹಿತರಕ್ಷಣೆ, ಸರ್ವತೋಮುಖ ಅಭಿವೃದ್ಧಿ ಹಾಗೂ "ಸರ್ವರಿಗೂ ಸಮಬಾಳು, 'ಸರ್ವರಿಗೂ ಸಮಪಾಲು, ಸಾಮಾಜಿಕ ನ್ಯಾಯ' ತತ್ವದಡಿಯಲ್ಲಿ ಸಮಾಜದ ಕಟ್ಟಕಡೆಯ ಪ್ರಜೆಯ ಕಲ್ಯಾಣಕ್ಕಾಗಿ ಶ್ರಮಿಸಲು ಭಗವಂತನು ತಮಗೆ ಪೂರ್ಣ ಶಕ್ತಿ, ಆಯುರಾರೋಗ್ಯ ಕರುಣಿಸಲಿ. ರಾಜ್ಯದ ಒಳಿತಿನ ವಿಷಯದಲ್ಲಿ ನಮ್ಮ ಸಕಾರಾತ್ಮಕ ಸಹಕಾರ ಯಾವಾಗಲೂ ಇರಲಿದ್ದು, ನಿಮ್ಮ ಅಧಿಕಾರಾವಧಿಯು ನಾಡಿಗೆ ಶಾಂತಿ, ಸಮೃದ್ಧಿ ತರಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.