ಬೆಂಗಳೂರು, ಮೇ 21: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಒತ್ತಾಯಿಸಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಗುರುವಾರ ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ನೀಟ್ ಪರೀಕ್ಷೆಯ ಪ್ರಶ್ನೆ ಸೋರಿಕೆಯಾಗಿದ್ದು, ಇದಕ್ಕೆ ಜವಾಬ್ದಾರರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಾಗಲಿ ಅಥವಾ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಾಗಲಿ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ. ಧರ್ಮೇಂದ್ರ ಪ್ರಧಾನ್ ಅವರು ನೀಟ್ ಪರೀಕ್ಷೆಗೆ ಮತ್ತೊಂದು ದಿನಾಂಕ ನಿಗದಿ ಮಾಡಿ ಕೈ ತೊಳೆದುಕೊಂಡಿದ್ದು , ಈ ಜವಾಬ್ದಾರಿಯನ್ನು ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಹೊರಬೇಕು ಎಂದರು.
ಸಿಇಟಿ ಪರೀಕ್ಷೆ ಪಾರದರ್ಶಕವಾಗಿತ್ತು
ಕರ್ನಾಟಕ ಮತ್ತಿತರೆ ರಾಜ್ಯಗಳಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಬಯಸುವವರಿಗೆ ಸಿಇಟಿ ಪರೀಕ್ಷೆ ಪಾರದರ್ಶಕವಾಗಿ ನಡೆಯುತ್ತಿತ್ತು. ನರೇಂದ್ರ ಮೋದಿ ಅವರು 2014 ರಲ್ಲಿ ಪ್ರಧಾನಿಗಳಾದ ನಂತರ ಹಿಂದೆ ಇದ್ದ ಪದ್ಧತಿಯನ್ನು ಬದಲಾಯಿಸಿ 2016ರಲ್ಲಿ ನೀಟ್ ಪರೀಕ್ಷೆಯನ್ನು ಜಾರಿಗೆ ತಂದರು. ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ನೀಟ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಒಂದು ವರ್ಷದಿಂದ ತಯಾರಿ ಮಾಡಿಕೊಂಡಿರುತ್ತಾರೆ. ಅನೇಕರು ಕೋಚಿಂಗ್ ಸೆಂಟರ್ ಗಳಲ್ಲಿ ತರಬೇತಿ ಪಡೆಯಲು ಸಾವಿರಾರು ರೂ ವೆಚ್ಚ ಮಾಡಿರುತ್ತಾರೆ. ಹಣವಿದ್ದವರು ಕೋಚಿಂಗ್ ಪಡೆಯುತ್ತಾರೆ, ಹಣ ಇಲ್ಲದ ಬಡವರು, ಗ್ರಾಮೀಣ ಪ್ರದೇಶದ ಮಕ್ಕಳು ಕೋಚಿಂಗ್ ಪಡೆಯಲಾಗುವುದಿಲ್ಲ ಎಂದರು.
ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆಗೊಳಿಸಿದ ಕಾಂಗ್ರೆಸ್ ನಾಯಕರು
ಮೋದಿ ಸರ್ಕಾರದಲ್ಲಿ ಬೇಧ ಭಾವ
ಮೋದಿ ಸರ್ಕಾರ ಬಂದ ನಂತರ ಬೇಧಭಾವ ಉಂಟು ಮಾಡುತ್ತಿದ್ದಾರೆ. ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಮಕ್ಕಳ ಬಗ್ಗೆ ಅಲಕ್ಷ್ಯ ಮಾಡುತ್ತಿದ್ದಾರೆ ಎನ್ನಲು ಇದು ಸಾಕ್ಷಿ ಎಂದರು.
ವೈದ್ಯಕೀಯ ಪ್ರವೇಶ ಪರೀಕ್ಷೆ ಕೇಂದ್ರೀಕೃತವಾಗಬಾರದು
ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿರುವ ವಿಷಯ. ಒಕ್ಕೂಟದ ವ್ಯವಸ್ಥೆಯಲ್ಲಿ ಆಯಾ ರಾಜ್ಯಗಳಿಗೆ ಸ್ವಾತಂತ್ರ್ಯ ನೀಡಬೇಕು. ಅದು ಬಿಟ್ಟು ಕೇಂದ್ರೀಕರಿಸುವ ಕೆಲಸ ಮಾಡಬಾರದು ಎಂದರು.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಗಳು ಮರುಕಳಿಸಿವೆ
ಕಳೆದ ಬಿಜೆಪಿ ಸರ್ಕಾರದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಇಂಜಿನಿಯರ್, ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಎಡಿಜಿಪಿಯಾಗಿದ್ದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಜೈಲಿಗೆ ಹೋಗಿರುವುದು ಕರ್ನಾಟಕದ ಇತಿಹಾಸದಲ್ಲಿ ಎಂದಿಗೂ ನಡೆದಿರಲಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಇಂತಹ ಪ್ರಶ್ನೆ ಪತ್ರಿಕೆ ಸೋರಿಕೆಗಳು ಬಹಳಷ್ಟು ನಡೆದಿವೆ. ಇದರ ಹೊಣೆಗಾರಿಕೆಯನ್ನು ಪ್ರಧಾನಿ ಮೋದಿ ಅವರು ಹೊರಬೇಕಿದೆ. ಆದರೆ ಅವರು ಪ್ರಸ್ತುತ ಇಟಲಿ ದೇಶಕ್ಕೆ ವಿದೇಶ ಪ್ರವಾಸದಲ್ಲಿದ್ದಾರೆ ಎಂದರು.
ಶೇ. 69ರಷ್ಟು ಯುವಜನತೆ ನಿರುದ್ಯೋಗಿಗಳಾಗಿದ್ದಾರೆ
ದೇಶದ ಜನರಿಗೆ ಚಿನ್ನ ಖರೀದಿಸಬೇಡಿ, ಪೆಟ್ರೋಲ್, ಡೀಸೆಲ್ ಮಿತವ್ಯಯ ಮಾಡಿ, ವಿದೇಶ ಪ್ರವಾಸ ಮಾಡಬೇಡಿ ಎಂದು ಕರೆ ನೀಡಿ, ತಾವು ಮಾತ್ರ ಐದು ದೇಶಗಳ ವಿದೇಶಿ ಪ್ರವಾಸದಲ್ಲಿದ್ದಾರೆ. ದೇಶದಲ್ಲಿ 20 ರಿಂದ 29 ವಯೋಮಾನದ ಯುವಕ- ಯುವತಿಯರಲ್ಲಿ ಶೇ. 67ರಷ್ಟು ಯುವಜನತೆ ನಿರುದ್ಯೋಗಿಗಳಾಗಿದ್ದಾರೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ಒದಗಿಸುವ ಮೂಲಕ ಕಳೆದ 12 ವರ್ಷಗಳ ಪ್ರಧಾನಿ ಮೋದಿಯವರ ಆಡಳಿತದಲ್ಲಿ 24 ಕೋಟಿ ಉದ್ಯೋಗಗಳು ಸೃಷ್ಠಿಯಾಗಬೇಕಿತ್ತು. ಆದರೆ ಈವರೆಗೆ 2 ಕೋಟಿಯಷ್ಟೂ ಉದ್ಯೋಗವನ್ನು ಕೊಡಲಾಗಲಿಲ್ಲ ಎಂದರು.
ಬಿಜೆಪಿ ಆರ್ಎಸ್ಎಸ್ನವರಿಂದ ದ್ವೇಷ ಹುಟ್ಟುಹಾಕುವ ಹುನ್ನಾರ
ಸಮಾಜದಲ್ಲಿ ಹಿಂದು-ಮುಸ್ಲಿಂ ನಡುವೆ ದ್ವೇಷ ಹುಟ್ಟುಹಾಕುವ ವ್ಯವಸ್ಥಿತವಾದ ಹುನ್ನಾರವನ್ನು ಬಿಜೆಪಿ, ಆರ್ಎಸ್ಎಸ್ ಹಾಗೂ ಎಬಿವಿಪಿ ಮಾಡುತ್ತಿದೆ. ದೇಶದಲ್ಲಿ 2016ರಿಂದ ಇಲ್ಲಿಯವರೆಗೆ 5 ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಆದ್ದರಿಂದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೇವಲ ನೀಟ್ ಪರೀಕ್ಷೆಯನ್ನು ಮುಂದೂಡುವ ಜತೆಗೆ, ಪ್ರಕರಣದ ಹೊಣೆ ಹೊತ್ತು ರಾಜೀನಾಮೆಯನ್ನು ಹೊರಬೇಕು. ಆದರೆ ಬಿಜೆಪಿಯವರು ಭಂಡತನ ಪ್ರದರ್ಶಿಸಿ ರಾಜಿನಾಮೆ ಕೊಡಲು ಮನಸ್ಸು ಮಾಡುತ್ತಿಲ್ಲ. ಕೇಂದ್ರ ಶಿಕ್ಷಣ ಸಚಿವರು ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡುವವರೆಗೂ ಇಲ್ಲಿನ ಹೋರಾಟವನ್ನು ಮುಂದುವರೆಸಬೇಕು ಎಂದರು.
ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ- ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ
ಸತತ ಪರಿಶ್ರಮ ನೀಡಿದ್ದ ವಿದ್ಯಾರ್ಥಿಗಳು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಕರಣದಿಂದ ಹತಾಶರಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿತ್ತು. ಅವರು ರಾಜಿನಾಮೆಯನ್ನು ಕೊಡಬೇಕೆಂದು ಒತ್ತಾಯ ಮಾಡಿದರು. ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣರಾದ ಪ್ರಕರಣದ ರೂವಾರಿಗಳನ್ನು ಕೊಲೆಗಾರರೆಂದು ಪರಿಗಣಿಸಿ ಶಿಕ್ಷೆ ನೀಡಬೇಕು. ಪ್ರಧಾನಿ ಮೋದಿ ಅವರು ತಮ್ಮ ವಿದೇಶಿ ಪ್ರವಾಸವನ್ನು ಮೊಟಕುಗೊಳಿಸಿ, ನೀಟ್ ಪರೀಕ್ಷೆ ಬರೆದ ಯುವಜನರ ಬೇಷರತ್ ಕ್ಷಮೆ ಯಾಚಿಸಬೇಕು ಎಂದರು.
2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ
ನೀಟ್ ಪರೀಕ್ಷೆ ನಡೆಸುವ ಅಧಿಕಾರ ರಾಜ್ಯಗಳಿಗೆ ನೀಡಲಿ
ಇನ್ನು ಮುಂದೆ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಗಳನ್ನು ನಡೆಸದೇ, ಈ ಜವಾಬ್ದಾರಿಯನ್ನು ಆಯಾ ರಾಜ್ಯಗಳಿಗೆ ಪರೀಕ್ಷೆ ನಡೆಸುವ ಅಧಿಕಾರವನ್ನು ಕೊಡಬೇಕೆನ್ನುವ ಒತ್ತಾಯ ಮಾಡುವುದಾಗಿ ತಿಳಿಸಿದರು. ಇಂದು ರಾಜೀವ್ ಗಾಂಧಿ ಅವರ 35ನೇ ಪುಣ್ಯತಿಥಿಯಾಗಿದ್ದು, ಅವರ ಆದರ್ಶಗಳನ್ನು ಎಲ್ಲರೂ ಪಾಲನೆ ಮಾಡಬೇಕಿದೆ ಎಂದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕಾರ್ಯದರ್ಶಿ ಅಭಿಷೇಕ್ ದತ್ತಾ, ರಾಷ್ಟ್ರೀಯ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ಉದಯ ಬಾನು, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ, ಸಚಿವರು, ಶಾಸಕರು, ಉಪಸ್ಥಿತರಿದ್ದರು.