ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಾಯಕರ ಜತೆ ಮಹತ್ವದ ಸಭೆ ಬಳಿಕ ಸಿಎಂ ಸಿದರಾಮಯ್ಯ (CM Siddaramaiah) ಅವರು ಆಪ್ತ ಸಚಿವರೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ತಡರಾತ್ರಿ ಅವರು ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ಹೈಕಮಾಂಡ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ಕರ್ನಾಟಕದ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೆ, ಮತ್ತೊಂದೆಡೆ ಮಾತ್ರ ಕರ್ನಾಟಕದಲ್ಲಿ ಸಿಎಂ ಬದಲಾವಣೆ (Karnataka CM Row) ಮಾಡಲು ಕಾಂಗ್ರೆಸ್ ವರಿಷ್ಠರು ಒಲವು ತೋರಿದ್ದಾರೆ ಎಂಬ ಚರ್ಚೆ ಕೂಡ ನಡೆಯುತ್ತಿದೆ.
ಇಂದು ನಡೆದ ಹೈಕಮಾಂಡ್ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆಆಪ್ತರ ಜತೆ ಚರ್ಚಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೈಕಮಾಂಡ್ ಷರತ್ತಿಗೆ ಸಿಎಂ ಸಿದ್ದರಾಮಯ್ಯ ಒಪ್ಪಿದ್ದಾರಾ? ಅಥವಾ ಇಲ್ವಾ ಎಂಬುವುದು ಅವರು ಬೆಂಗಳೂರಿಗೆ ವಾಪಸ್ ಆದ ಮೇಲೆ ತಿಳಿದುಬರಲಿದೆ.
ನಿಮ್ಮ ಊಹಾಪೋಹಾ ಸತ್ಯವಲ್ಲ: ಕೆ.ಸಿ. ವೇಣುಗೋಪಾಲ್
ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು, ಕಾಂಗ್ರೆಸ್ ನಾಯಕರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರೂ ಹಾಜರಾಗಿದ್ದರು. ರಾಜ್ಯ ಸಭೆ, ವಿಧಾನ ಪರಿಷತ್ ಚುನಾವಣೆ ಬಗ್ಗೆ ಮಾತ್ರ ಸಭೆಯಲ್ಲಿ ಚರ್ಚೆಯಾಗಿದೆ. ಬೇರೆ ಏನೂ ಚರ್ಚೆಯಾಗಿಲ್ಲ. ನಿಮ್ಮ ಊಹಾಪೋಹಾ ಯಾವುದೂ ಸತ್ಯವಲ್ಲ ಎಂದು ಹೇಳಿದ್ದರು.
ಕರ್ನಾಟಕದ ರಾಜ್ಯಸಭಾ ಮತ್ತು ವಿಧಾನ ಪರಿಷತ್ ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಇತರ ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯೊಂದಿಗೆ ಅಧಿಕೃತವಾಗಿ ಪ್ರಕಟಿಸಲಾಗುವುದು. ಇಂದಿನ ಸಭೆಯಲ್ಲಿ ನಾವು ಈ ವಿಷಯವನ್ನು ಮಾತ್ರ ತೀರ್ಮಾನಿಸಿದ್ದೇವೆ ಎಂದು ಹೇಳುವ ಮೂಲಕ ಕರ್ನಾಟಕ ಸಿಎಂ ಬದಲಾವಣೆಯ ಊಹಾಪೋಹಗಳಿಗೆ ಅವರು ತೆರೆ ಎಳೆದಿದ್ದರು.