ಬೆಂಗಳೂರು, ಜ.8: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಹೋಟೆಲ್ ಅಶೋಕಾದಲ್ಲಿ ಗುರುವಾರ ನಡೆದ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.
ಇದು ಬಿಜೆಪಿಯವರ ಹುನ್ನಾರ. ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ಬಂತು. ಇದು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋಗ ಒದಗಿಸುವುದು ಯೋಜನೆ ಉದ್ದೇಶ. ವರ್ಷದಲ್ಲಿ ನೂರು ದಿನ ಉದ್ಯೋಗ ಅವಕಾಶ ಈ ಯೋಜನೆಯಲ್ಲಿ ಸಿಗುತ್ತಿತ್ತು. ಈ ಉದ್ಯೋಗವನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ. ಉದ್ಯೋಗದ ಹಕ್ಕು ಇಲ್ಲವಾಗಿಸಿದೆ ಎಂದು ಕಿಡಿಕಾರಿದರು.
ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ. ಈ ಮೂಲಜ ಮತ್ತೆ ಗಾಂಧಿಯವರನ್ನು ಕೊಲೆ ಮಾಡಲಾಗಿದೆ. ಇದು ಸಂಘ ಪರಿವಾರದವರು ಹೇಳಿ ಕೊಟ್ಟಿರುವ ಪಾಠ. 28 ಕೋಟಿ ದಲಿತರಿಗೆ ಇದರಿಂದ ಅನ್ಯಾಯವಾಗಿದೆ. ನಮ್ಮ ಹೋರಾಟ ತೀವ್ರವಾಗಿ ಇರಬೇಕು. ಬಡವರ ಉದ್ಯೋಗದ ಹಕ್ಕು ಕಸಿದುಕೊಂಡವರಿಗೆ ಪಾಠ ಕಲಿಸಬೇಕು. ಬಡವರು ಆರ್ಥಿಕವಾಗಿ ಸಬಲರಾಗುವುದನ್ನು ಸಂಘ ಪರಿವಾರ ಸಹಿಸುವುದಿಲ್ಲ.
ವಿಬಿ ಜಿ ರಾಮ್ ಜಿ ಬಗ್ಗೆ ಕೇಂದ್ರದ ವಿರುದ್ಧ ಕಾನೂನು ಹೋರಾಟಕ್ಕೆ ರಾಜ್ಯ ಸಚಿವ ಸಂಪುಟ ತೀರ್ಮಾನ
ಮನರೇಗಾ ಕಾಯಿದೆ ಮತ್ತೆ ಜಾರಿ ಅಗುವ ರೀತಿ ಜನಾಂದೋಲನ ನಡೆಯಬೇಕು. ಪ್ರತಿ ಗ್ರಾಮ ಪಂಚಾಯಿತಿ ಸದಸ್ಯ ನರೇಗಾದಲ್ಲಿ ಕೆಲಸ ಮಾಡುತ್ತಿರುವವರನ್ನ ತಲುಪಬೇಕು. ಈ ವಿಷಯದ ಬಗ್ಗೆ ಜನರನ್ನೂ ಜಾಗೃತಗೊಳಿಸುವ ಕೆಲಸವನ್ನು ಶಾಸಕರು ಮಾಡಬೇಕು. ನಮ್ಮ ಹೋರಾಟ ಜನಾಂದೋಲನವಾಗಿ ರೂಪುಗೊಳ್ಳುವಂತಹ ವಾತಾವರಣ ನಿರ್ಮಾಣ ಆಗಬೇಕಿದೆ. ಕಾಂಗ್ರೆಸ್ ಜಾರಿಗೆ ತಂದ ಕಾರ್ಯಕ್ರಮವನ್ನು ರದ್ಧು ಮಾಡಿ ಉದ್ಯೋಗದ ಹಕ್ಕು ಕಸಿದುಕೊಂಡಿರುವುದು ಸಂವಿಧಾನ ಬಾಹಿರ ಕೆಲಸ ಎಂದು ತಿಳಿಸಿದರು.