State Film Awards: ಬಾಕಿ ಉಳಿದಿರುವ ಐದು ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆ.ವಿ.ಪ್ರಭಾಕರ್
State Film Awards: ಐದು ವರ್ಷಗಳಿಂದ ರಾಜ್ಯ ಸಿನಿಮಾ ಪ್ರಶಸ್ತಿಗಳು ಸ್ಥಗಿತಗೊಂಡಿದ್ದವು. ನಾವು ಈಗಾಗಲೇ 2019 ರ ಪ್ರಶಸ್ತಿ ಘೋಷಣೆಯಾಗಿದ್ದು, ಬಾಕಿ ಇರುವ ಐದೂ ವರ್ಷಗಳ ಪ್ರಶಸ್ತಿಯನ್ನೂ ಇದೇ ವರ್ಷ ನೀಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.


ಬೆಂಗಳೂರು: ಬಾಕಿ ಉಳಿದಿರುವ ಐದು ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು (State Film Awards) ಇದೇ ವರ್ಷ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದರು.
ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ʼಸೊಸೆ ತಂದ ಸೌಭಾಗ್ಯʼ ಸಿನಿಮಾದಿಂದ ಪಿಆರ್ಒ ಕ್ಷೇತ್ರಕ್ಕೆ ಆಗಮಿಸಿದ ರಾಘವೇಂದ್ರ ಚಿತ್ರವಾಣಿ ಈಗ ಕನ್ನಡ ಚಿತ್ರರಂಗದ ಸೌಭಾಗ್ಯ ಆಗಿದೆ ಎಂದು ಮೆಚ್ಚುಗೆ ಸೂಚಿಸಿದರು.
ಈ ವಾರ ಸಿನಿಮಾ ಜಗತ್ತಿಗೆ ಸಂಭ್ರಮದ ವಾರ. 2019ನೇ ಸಾಲಿನ ರಾಜ್ಯ ಸಿನಿಮಾ ಪ್ರಶಸ್ತಿಗಳು ಹಾಗೂ ನೆನ್ನೆ ಅನಂತನಾಗ್ ಅವರೂ ಸೇರಿ ಸಿನಿಮಾ ಕ್ಷೇತ್ರದ ದಿಗ್ಗಜರಿಗೆ ಪದ್ಮ ಪ್ರಶಸ್ತಿಗಳು ಲಭಿಸಿವೆ. ಇದು ಸಂಭ್ರಮದ ವಾರ ಎಂದರು.
ಐದು ವರ್ಷಗಳಿಂದ ರಾಜ್ಯ ಸಿನಿಮಾ ಪ್ರಶಸ್ತಿಗಳು ಸ್ಥಗಿತಗೊಂಡಿದ್ದವು. ನಾವು ಈಗಾಗಲೇ 2019 ರ ಪ್ರಶಸ್ತಿ ಘೋಷಣೆಯಾಗಿದ್ದು, ಬಾಕಿ ಇರುವ ಐದೂ ವರ್ಷಗಳ ಪ್ರಶಸ್ತಿಯನ್ನೂ ಇದೇ ವರ್ಷ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಸಿನಿಮಾ PRO ಗಳಿಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ನಿರ್ದೇಶಕರನ್ನಾಗಿಸಲು ಮತ್ತು ಸರ್ಕಾರದ ಸಿನಿಮಾ ಪ್ರಶಸ್ತಿಗೆ ಪರಿಗಣಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸುವುದಾಗಿ ಭರವಸೆ ನೀಡಿದ ಅವರು, ನಟಿ ಜಯಂತಿ ಅವರ ಹೆಸರಿನ ಪ್ರಶಸ್ತಿ ಸ್ಥಾಪಿಸಲು ಈಗಾಗಲೇ ಸರ್ಕಾರಿ ಆದೇಶ ಆಗಿದೆ. ಇನ್ನು ನಟ ಶಿವರಾಜ್ ಕುಮಾರ್ ಅವರು ಬದುಕಿನ ಯುದ್ಧ ಗೆದ್ದು ಬಂದಿರುವುದು ನಮಗೆಲ್ಲಾ ಸಂಭ್ರಮದ ಕ್ಷಣ ಎಂದು ತಿಳಿಸಿದರು.
ವಾಣಿಜ್ಯ ಮಂಡಳಿ ಅಧ್ಯಕ್ಷರಾದ ನರಸಿಂಹಲು, ಹಿರಿಯ ಪತ್ರಕರ್ತೆ ವಿಜಯಮ್ಮ, ಹಿರಿಯ ಪತ್ರಕರ್ತರಾದ ಸದಾಶಿವ ಶೆಣೈ, ನಿರ್ದೇಶಕರಾದ ಇಂದ್ರಜಿತ್ ಲಂಕೇಶ್, ನಟಿ ರಾಗಿಣಿ, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ಉಮೇಶ್ ಬಣಕಾರ್, ಸಂಜಯ್ ಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಸುದ್ದಿಯನ್ನೂ ಓದಿ | ಭ್ರಷ್ಟಾಚಾರ ರಹಿತ ಸಮಾಜ ನಿರ್ಮಿಸಲು ಶಿಕ್ಷಕರು ಮಹತ್ವದ ಪಾತ್ರ ನಿರ್ವಹಿಸಬೇಕು: ಜಸ್ಟಿಸ್ ಸಂತೋಷ್ ಹೆಗ್ಡೆ