ರಾಜ್ಯ ಸರ್ಕಾರ ನೀಡಿದ ಭಾಷಣ ಓದಿದ ರಾಜ್ಯಪಾಲರು; ಸರ್ಕಾರದ ಸಾಧನೆಯ ಕುರಿತು ಹೇಳಿದ್ದೇನು?
ರಾಜ್ಯದಲ್ಲಿ 77 ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು. ರಾಜ್ಯದ ಅಭಿವೃದ್ಧಿ, ಜನಕಲ್ಯಾಣ ಕಾರ್ಯಕ್ರಮಗಳು ಮತ್ತು ಭವಿಷ್ಯದ ಗುರಿಗಳ ಬಗ್ಗೆ ರಾಜ್ಯಪಾಲರು ಮಾತನಾಡಿದ್ದಾರೆ. ಭಾಷಣದಲ್ಲಿ ರಾಜ್ಯ ಸರ್ಕಾರದ ಎರಡೂವರೆ ವರ್ಷಗಳ ಸಾಧನೆಗಳನ್ನು ಉಲ್ಲೇಖಿಸಲಾಯಿತು.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದಲ್ಲಿ 77 ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು. ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಡಿನ ಸಮಸ್ತ ಜನತೆಗೆ 77 ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ರಾಜ್ಯದ ಅಭಿವೃದ್ಧಿ, ಜನಕಲ್ಯಾಣ ಕಾರ್ಯಕ್ರಮಗಳು ಮತ್ತು ಭವಿಷ್ಯದ ಗುರಿಗಳ ಬಗ್ಗೆ ರಾಜ್ಯಪಾಲರು ಮಾತನಾಡಿದ್ದಾರೆ. ಭಾಷಣದಲ್ಲಿ ರಾಜ್ಯ ಸರ್ಕಾರದ ಎರಡೂವರೆ ವರ್ಷಗಳ ಸಾಧನೆಗಳನ್ನು ಉಲ್ಲೇಖಿಸಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ಯಾವುದೇ ತೀವ್ರ ಟೀಕೆಗಳನ್ನು ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಲಾಗಿಲ್ಲ.
ರಾಜ್ಯಪಾಲರ ಭಾಷಣದಲ್ಲೇನಿದೆ?
ಜನವರಿ 26ನೇ ತಾರೀಖು ಭಾರತದ ಚರಿತ್ರೆಯಲ್ಲಿ ಒಂದು ಅತ್ಯಂತ ನಿರ್ಣಾಯಕ ದಿನ. ಇದು ಸಾವಿರಾರು ವರ್ಷಗಳಿಂದ ರೂಪುಗೊಂಡಿದ್ದ ರಾಜಪ್ರಭುತ್ವ ಹಾಗೂ 17ನೇ ಶತಮಾನದಿಂದ ಅಸ್ತಿತ್ವಕ್ಕೆ ಬಂದಿದ್ದ ವಸಾಹತುಶಾಹಿ ಆಡಳಿತವನ್ನು ಕೊನೆಗೊಳಿಸಿ ಜನಪ್ರಭುತ್ವವನ್ನು ಪ್ರತಿಷ್ಠಾಪಿಸಿಕೊಂಡ ದಿನ. ತಾರತಮ್ಯವನ್ನು ಆಧರಿಸಿದ್ದ ವಸಾಹತುಶಾಹಿಯನ್ನು ಹಾಗೂ ಪುರಾತನ ಕಾನೂನುಗಳನ್ನು ಕಿತ್ತೆಸೆದು ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ವಿಚಾರದಲ್ಲಿ ಎಲ್ಲರೂ ಸಮಾನರು ಎನ್ನುವ ನವ ಭಾರತದ ಪರಿಕಲ್ಪನೆಯ ಸಂವಿಧಾನವನ್ನು ಜಾರಿಗೊಳಿಸಿದ ದಿನ. ಗಣತಂತ್ರ ವ್ಯವಸ್ಥೆಯನ್ನು ರೂಪುಗೊಳಿಸಿಕೊಳ್ಳುವುದಕ್ಕಾಗಿ ಅಸಂಖ್ಯಾತ ಜನರು ತ್ಯಾಗ-ಬಲಿದಾನಗಳನ್ನು ಮಾಡಿದ್ದಾರೆ. ಅವರೆಲ್ಲರನ್ನೂ ಈ ಅಮೃತ ಗಳಿಗೆಯಲ್ಲಿ ಗೌರವಪೂರ್ವಕವಾಗಿ ಸ್ಮರಿಸೋಣ.
ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಶತಶತಮಾನಗಳ ಕಾಲ ಹೋರಾಟ ಮಾಡಿ ನ್ಯಾಯ ಹಾಗೂ ಸ್ವಾತಂತ್ರ್ಯವನ್ನು ದಕ್ಕಿಸಿಕೊಟ್ಟಿದ್ದಾರೆ. ನಾವೆಲ್ಲರೂ ನಮ್ಮ ಹಿರಿಯರ ಶ್ರಮ ವ್ಯರ್ಥವಾಗದಂತೆ ಕಾಪಾಡಿಕೊಳ್ಳುವ ಪ್ರತಿಜ್ಞೆ ಮಾಡೋಣ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸ್ವಾತಂತ್ರ್ಯವನ್ನು, ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯವೆಂದು ಮೂರು ಮಾದರಿಗಳಲ್ಲಿ ವ್ಯಾಖ್ಯಾನಿಸಿದ್ದಾರೆ. “ನಾವು ಯಾವುದೇ ಕಾರಣಕ್ಕೂ ರಾಜಕೀಯ ಪ್ರಜಾಪ್ರಭುತ್ವದಿಂದ ಸಂತುಷ್ಟಗೊಳ್ಳಬಾರದು. ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನು ಸಾಮಾಜಿಕ ಪ್ರಜಾಪ್ರಭುತ್ವವಾಗಿಸಬೇಕು. ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬದುಕಿನ ಸಿದ್ಧಾಂತವಾಗಿ ಗುರುತಿಸಿಕೊಂಡ ಒಂದು ಜೀವನ ಕ್ರಮವಾಗಿದೆ. ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವದ ನಿಯಮಗಳನ್ನು ಪ್ರತ್ಯೇಕ ಅಂಶಗಳಾಗಿ ಪರಿಗಣಿಸಬಾರದು. ಇವುಗಳಲ್ಲಿ ಒಂದರಿಂದ ಇನ್ನೊಂದನ್ನು ಪ್ರತ್ಯೇಕಿಸಿದರೆ ಅದು ಪ್ರಜಾಪ್ರಭುತ್ವದ ಸೋಲಿಗೆ ಕಾರಣವಾಗುತ್ತದೆ. ಸ್ವಾತಂತ್ರ್ಯವು ಸಮಾನತೆಯಿಂದ ಪ್ರತ್ಯೇಕವಾಗುವುದಿಲ್ಲ, ಸಮಾನತೆಯು ಸ್ವಾತಂತ್ರ್ಯದಿಂದ ಪ್ರತ್ಯೇಕವಾಗುವುದಿಲ್ಲ ಅಥವಾ ಸ್ವಾತಂತ್ರ್ಯ ಮತ್ತು ಸಮಾನತೆಯು ಭ್ರಾತೃತ್ವದಿಂದ ಪ್ರತ್ಯೇಕವಾಗುವುದಿಲ್ಲ. ಸಮಾನತೆಯಿಲ್ಲದ ಸ್ವಾತಂತ್ರ್ಯವು ಹಲವರ ಮೇಲೆ ಕೆಲವರ ಸರ್ವಾಧಿಕಾರವಾಗಿ ಮೆರೆಯುತ್ತದೆ. ಸ್ವಾತಂತ್ರ್ಯವಿಲ್ಲದ ಸಮಾನತೆಯು ವ್ಯಕ್ತಿಗತ ಕ್ರಿಯಾಶೀಲತೆಯನ್ನು ಅಂತ್ಯಗೊಳಿಸುತ್ತದೆ. ಭ್ರಾತೃತ್ವವಿಲ್ಲದಿದ್ದರೆ, ಸ್ವಾತಂತ್ರ್ಯ ಹಾಗೂ ಸಮಾನತೆಗಳು ಯಾವುದೇ ವಿಷಯದ ಸಹಜ ನಡೆಯಾಗುವುದಿಲ್ಲ” ಎಂದಿದ್ದಾರೆ
: ರಾಜ್ಯಪಾಲರ ಕಚೇರಿಗೆ ಬಾಂಬ್ ಬೆದರಿಕೆ; ಆರ್ ಡಿಎಕ್ಸ್ ಬ್ಲಾಸ್ಟ್ ಮಾಡ್ತೇವೆಂದು ಇಮೇಲ್!
ಕರ್ನಾಟಕ ಸರ್ಕಾರವು ಸಂವಿಧಾನವು ಪ್ರಸ್ತಾಪಿಸಿರುವ ಈ ಮೂರೂ ವಿಷಯಗಳನ್ನು ಆದ್ಯತೆಯ ವಿಷಯಗಳನ್ನಾಗಿ ಪರಿಗಣಿಸಿದೆ. ರಾಜ್ಯದ ಪ್ರತಿ ಪ್ರದೇಶ ಹಾಗೂ ಪ್ರತಿ ಸಮುದಾಯಗಳ ಜನರ ಧ್ವನಿಗಳನ್ನು ಆಲಿಸಿ, ಅವುಗಳಿಗೆ ನ್ಯಾಯೋಚಿತ ಪರಿಹಾರ ನೀಡುವ ಕೆಲಸವನ್ನು ಮಾಡುತ್ತಿದೆ. ಸರ್ಕಾರದ ವಿವಿಧ ನೇಮಕಾತಿಗಳಲ್ಲಿ ಅಲಕ್ಷಿತರಿಗೆ ಪ್ರಾಧಾನ್ಯತೆ ನೀಡಲಾಗುತ್ತಿದೆ. ವಿವಿಧ ಜನಸಮುದಾಯಗಳ ಪರಿಸ್ಥಿತಿಗಳನ್ನು ಅರ್ಥ ಮಾಡಿಕೊಳ್ಳಲು ಆಯೋಗಗಳನ್ನು ರಚಿಸಿ ಅವುಗಳ ಶಿಫಾರಸುಗಳನ್ನು ಜಾರಿ ಮಾಡಲಾಗುತ್ತಿದೆ. ಹಾಗೆಯೇ ಪ್ರಾದೇಶಿಕ ಅಸಮಾನತೆಗಳನ್ನು ಹೋಗಲಾಡಿಸಲು ನಿರಂತರವಾಗಿ ಶ್ರಮಿಸಲಾಗುತ್ತಿದೆ. ಇದರ ಮೂಲಕ ಕರ್ನಾಟಕದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಚೈತನ್ಯ ಉದಯಿಸುತ್ತಿದೆ.
ಸಂವಿಧಾನದ ಮುಖ್ಯ ಆಶಯದಂತೆ ಅತ್ಯಂತ ಹಿಂದುಳಿದವರ ಬಲವರ್ಧನೆಗಾಗಿ ರಾಜ್ಯದ ಜನರಿಗೆ ಆರ್ಥಿಕ ಚೈತನ್ಯ ನೀಡುವುದಕ್ಕಾಗಿ ರಾಜ್ಯವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಜನ ಕಲ್ಯಾಣಗಳಿಗಾಗಿ ರಾಜ್ಯವು ವರ್ಷಕ್ಕೆ 1.12 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ.
ಗ್ಯಾರಂಟಿ ಯೋಜನೆಗಳಿಗಾಗಿ ಈವರೆಗೆ 1.13 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವನ್ನು ವಿನಿಯೋಗಿಸಲಾಗಿದೆ. ಇದರ ಪರಿಣಾಮವಾಗಿ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ, ಕುಟುಂಬಗಳು ಆರ್ಥಿಕವಾಗಿ ಸಬಲವಾಗುತ್ತಿವೆ ಎಂದು ಹಲವಾರು ಅಧ್ಯಯನಗಳು ಹೇಳಿವೆ. ಮಹಿಳಾ ಸಮುದಾಯದಲ್ಲಿ ಹೊಸ ಆರ್ಥಿಕ ಸಾಮಾಜಿಕ ಉತ್ಸಾಹ ಬಂದಿದೆ. ದೇಶದಲ್ಲಿ ಗ್ರಾಹಕ ಬೆಲೆ ಸೂಚ್ಯಂಕಗಳು ಆರೋಗ್ಯಕರವಾಗಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಇವೆಲ್ಲದರ ಜೊತೆಗೆ ಮಹಿಳೆಯರ ಸುರಕ್ಷತೆಯ ವಿಚಾರದಲ್ಲಿ ಬೆಂಗಳೂರು ನಗರವು ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆಯೆಂದು ಸಮೀಕ್ಷೆಗಳು ಹೇಳುತ್ತಿವೆ. ಈ ಸಂಗತಿಯು ರಾಜ್ಯದ ಹೆಮ್ಮೆಯ ಸಂಗತಿಯಾಗಿದೆ.
ಕುಟುಂಬ ಸರ್ವೆ ದತ್ತಾಂಶದ ಪ್ರಕಾರ, 2024-25ನೇ ಸಾಲಿನಲ್ಲಿ ರಾಜ್ಯದಲ್ಲಿ 1.37 ಕೋಟಿ ಕುಟುಂಬಗಳು ಸರ್ಕಾರದ ಒಂದಲ್ಲಾ ಒಂದು ಯೋಜನೆಯಿಂದ ನೇರ ಆರ್ಥಿಕ ಸೌಲಭ್ಯ ಪಡೆದಿವೆ. ಸರ್ಕಾರವು ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ನೇರವಾಗಿ ಕಟ್ಟಕಡೆಯ ಫಲಾನುಭವಿಯ ಬ್ಯಾಂಕ್ ಖಾತೆಗೆ ತಲುಪುವಂತೆ ನೋಡಿಕೊಳ್ಳುತ್ತಿದೆ.
ಸರ್ಕಾರವು ʼಯೂನಿವರ್ಸಲ್ ಬೇಸಿಕ್ ಇನ್ಕಂʼ ಎಂಬ ತತ್ವದ ಆಧಾರದ ಮೇಲೆ ತಂದಿರುವ ಗ್ಯಾರಂಟಿ ಯೋಜನೆಗಳು ಮಹಿಳೆಯರ ಬದುಕಿನಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿವೆಯೆಂದು ಸಮೀಕ್ಷೆಗಳಿಂದ ತಿಳಿದು ಬಂದಿದೆ. ಮಕ್ಕಳ ಶಿಕ್ಷಣ, ಆರೋಗ್ಯ, ಉತ್ತಮ ಆಹಾರ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಬೇಕಾದ ಆರ್ಥಿಕ ಚಟುವಟಿಕೆಗಳಿಗೆ ಕರ್ನಾಟಕವು ಜಾರಿಗೆ ತಂದಿರುವ ಕಾರ್ಯಕ್ರಮಗಳು ಕಾರಣವಾಗಿವೆ. ಇವುಗಳ ಜೊತೆಗೆ ʼಅಕ್ಕʼ ಕಾರ್ಯ ಪಡೆಗಳನ್ನು ರಚಿಸಿ ಅವುಗಳ ಮೂಲಕ 25ಕ್ಕೂ ಹೆಚ್ಚು ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಇವುಗಳಷ್ಟೇ ಅಲ್ಲದೆ ಕರ್ನಾಟಕವು ಇಡೀ ದೇಶದಲ್ಲಿಯೇ ಮಹಿಳಾ ಕಾರ್ಮಿಕರ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಗಮನದಲ್ಲಿಟ್ಟುಕೊಂಡು ಅತ್ಯಂತ ಕ್ರಾಂತಿಕಾರಕವಾದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಮಹಿಳಾ ಕಾರ್ಮಿಕರಿಗೆ ವಾರ್ಷಿಕವಾಗಿ 12 ದಿನಗಳ ವೇತನ ಸಹಿತ ಋತುಚಕ್ರ ರಜೆಯನ್ನು ನೀಡಲಾಗುತ್ತಿದೆ.
ಕರ್ನಾಟಕವು ಇದೇ ಸಂದರ್ಭದಲ್ಲಿ ಉದ್ಯೋಗ ಸೃಜನೆ, ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಕಡೆಗೂ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. 2025-26ರ ಬಜೆಟ್ನಲ್ಲಿ ಬಂಡವಾಳ ವೆಚ್ಚಗಳಿಗಾಗಿ 83,200 ಕೋಟಿ ರೂಪಾಯಿಗಳನ್ನು ಒದಗಿಸಿ ವೆಚ್ಚ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಸುಮಾರು 1.5 ಲಕ್ಷ ಕೋಟಿ ರೂ.ಗಳ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಮುಂದಿನ ದಿನಮಾನಗಳಲ್ಲಿ ಇವುಗಳಿಂದಾಗಿ ಅಭಿವೃದ್ಧಿಯು ವೇಗಗೊಳ್ಳುತ್ತದೆ.
ಕರ್ನಾಟಕವು ಇಂದು ಸೆಮಿ ಕಂಡಕ್ಟರ್, ಏರೊ ಸ್ಪೇಸ್, ಕಮ್ಯುನಿಕೇಶನ್ ಎಕ್ಯುಪಮೆಂಟ್ಸ್ ಕ್ವಾಂಟಮ್ ತಂತ್ರಜ್ಞಾನ ಮುಂತಾದ ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದ ಜಗತ್ತಿನ ದೊಡ್ಡ ಕಂಪೆನಿಗಳು ಇಲ್ಲಿ ಹೂಡಿಕೆ ಮಾಡುತ್ತಿವೆ.
ಕಾನೂನು ಸುವ್ಯವಸ್ಥೆ ಸಮರ್ಪಕವಾಗಿದ್ದು ಅಭಿವೃದ್ಧಿಯು ವೇಗಗೊಳ್ಳಬೇಕಾದರೆ ಜನರ ಆಸ್ತಿ ದಾಖಲೆಗಳು ಸಮರ್ಪಕವಾಗಿರಬೇಕು. ಅದಕ್ಕಾಗಿ ರಾಜ್ಯವು ನಿರಂತರವಾಗಿ ಶ್ರಮಿಸುತ್ತಿದೆ. ಕಂದಾಯ ನ್ಯಾಯಾಲಯಗಳಲ್ಲಿ ಬಹು ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಶೇ.80ಕ್ಕೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಈಗ ಕಂದಾಯ ನ್ಯಾಯಾಲಯಗಳನ್ನು ಆನ್ಲೈನ್ ಮುಖಾಂತರ ನಿರ್ವಹಿಸಲು ಅವಕಾಶ ಕಲ್ಪಿಸಿ ಪಾರದರ್ಶಕಗೊಳಿಸಲಾಗಿದೆ. 91,163 ಫೋಡಿಗಳನ್ನು ಪೂರ್ಣಗೊಳಿಸಿ ದಾಖಲೆಗಳನ್ನು ಕಾಲೋಚಿತಗೊಳಿಸಲಾಗಿದೆ. ಇವುಗಳ ಜೊತೆಯಲ್ಲಿ ದಾಖಲೆರಹಿತ 4,050 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಿ 1,11,111 ಲಕ್ಷ ಸಂಖ್ಯೆಯ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ಒದಗಿಸಲಾಗಿದೆ. ಇನ್ನುಳಿದ ಒಂದು ಲಕ್ಷ ಹಕ್ಕು ಪತ್ರಗಳು ವಿತರಣೆಗೆ ಸಿದ್ಧವಾಗಿವೆ. ರೈತಾಪಿ ಸಮುದಾಯಗಳ ಹಿತರಕ್ಷಣೆಯ ದೃಷ್ಟಿಯಿಂದ ಕಂದಾಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟೈಸ್ ಮಾಡಲಾಗುತ್ತಿದೆ.
ಜನರ ಅನುಕೂಲಕ್ಕಾಗಿ ʼಬಿʼ ಖಾತಾಗಳನ್ನು ʼಎʼ ಖಾತಾಗಳನ್ನಾಗಿ ಪರಿವರ್ತಿಸಲು ಅನುಮೋದನೆ ನೀಡಲಾಗಿದೆ. ಇದರಿಂದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಜನರಿಗೆ ಅನುಕೂಲವಾಗುತ್ತಿದೆ. ಇ-ಸ್ವತ್ತು ವ್ಯವಸ್ಥೆಯನ್ನೂ ಜಾರಿಗೆ ತರಲಾಗಿದ್ದು, ಈ ವ್ಯವಸ್ಥೆಯಿಂದ ಅಸಂಖ್ಯಾತ ಜನರಿಗೆ ಅನುಕೂಲವಾಗುತ್ತಿದೆ. ಆಡಳಿತವನ್ನು ಸರಳ ಮತ್ತು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ರಾಜ್ಯವು ಕೆಲಸ ಮಾಡುತ್ತಿರುವುದರಿಂದ ಬದಲಾದ ಕಾಲಘಟ್ಟದ ಅಗತ್ಯಗಳಿಗೆ ಅನುಗುಣವಾಗಿ ಕಟ್ಟಡಗಳ ಸೆಟ್ ಬ್ಯಾಕನ್ನು ಕಡಿಮೆ ಮಾಡಲಾಗಿದೆ.
ಕರ್ನಾಟಕವು ಇಡೀ ದೇಶದಲ್ಲಿಯೆ ಶಿಕ್ಷಣ ಕ್ಷೇತ್ರದ ಅತಿ ದೊಡ್ಡ ಸಂಕೀರ್ಣವಾಗಿ ವಿಕಾಸ ಹೊಂದುತ್ತಿದೆ. ಅತಿ ಹೆಚ್ಚು ಸಂಖ್ಯೆಯ ಮೆಡಿಕಲ್, ನರ್ಸಿಂಗ್, ಇಂಜಿನಿಯರಿಂಗ್, ಕೃಷಿ, ತೋಟಗಾರಿಕೆ, ಮ್ಯಾನೇಜ್ಮೆಂಟ್ ಕಾಲೇಜುಗಳು, ವಿಶ್ವವಿದ್ಯಾಲಯಗಳು ಇಲ್ಲಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿವೆ. ರಾಜ್ಯವು ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ತರಗತಿಗಳನ್ನು ಪ್ರಾರಂಭಿಸುತ್ತಿದೆ. ನಮ್ಮ ರಾಜ್ಯದಲ್ಲಿ ಸುಮಾರು 8.5 ಲಕ್ಷ ಮಕ್ಕಳು ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳಲ್ಲಿದ್ದು, ಉನ್ನತ ಗುಣಮಟ್ಟದ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಪ್ರೊ. ಸುಖ್ ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿಯು ನೀಡಿದ್ದ ವರದಿಯನ್ನು ಅನುಷ್ಠಾನಗೊಳಿಸುವ ಕಾರ್ಯವನ್ನು ಪ್ರಾರಂಭಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ವ್ಯವಸ್ಥೆ ಸುಧಾರಿಸಲು ʼಅಕ್ಷರ ಆವಿಷ್ಕಾರʼ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಆ ಭಾಗದ ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಲು ಡಾ.ಛಾಯಾ ದೇಗಾಂವಕರ್ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿಯು ಇತ್ತೀಚೆಗಷ್ಟೆ ವರದಿ ನೀಡಿದೆ. ಪ್ರಸ್ತುತ ಇಲ್ಲಿ ಕ್ರಾಂತಿಕಾರಕ ಮಾದರಿಯ 300 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ.
ನಮ್ಮ ರಾಜ್ಯದಲ್ಲಿ ಕೌಶಲ್ಯಯುತ ಶಿಕ್ಷಣಕ್ಕೆ ಅತಿ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗುತ್ತಿದೆ. ಆದ್ದರಿಂದಲೆ ಹೊಸದಾಗಿ ಜಿಟಿಟಿಸಿಗಳು, ಪಾಲಿಟೆಕ್ನಿಕ್ ಕಾಲೇಜುಗಳು, ಸ್ಕಿಲ್ ಪಾರ್ಕ್ಗಳು, ಎಂಎಸ್ಡಿಸಿಗಳನ್ನು ಪ್ರಾರಂಭಿಸಲಾಗುತ್ತಿದೆ. ಶಾಲೆ ಮತ್ತು ಕಾಲೇಜುಗಳಲ್ಲಿಯೂ ಕೌಶಲ್ಯ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ.
ಕರ್ನಾಟಕ ರಾಜ್ಯವು ಆರೋಗ್ಯ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದು, ಜನಸಂಖ್ಯೆಗೆ ಅನುಗುಣವಾಗಿ ಇಡೀ ದೇಶದಲ್ಲಿಯೇ ಅತಿ ಹೆಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಆಸ್ಪತ್ರೆಗಳು ಮತ್ತು ಮೆಡಿಕಲ್ ಕಾಲೇಜುಗಳನ್ನು ಹೊಂದಿದೆ. ಸರ್ಕಾರವು ಹೊಸ ಮೆಡಿಕಲ್ ಕಾಲೇಜುಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುತ್ತಲೇ ಇದೆ. ಬೆಂಗಳೂರು, ಮೈಸೂರು, ಕಲ್ಬುರ್ಗಿ, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಮಂಗಳೂರು, ದಾವಣಗೆರೆ, ಉಡುಪಿ, ಶಿವಮೊಗ್ಗ, ತುಮಕೂರು ಮುಂತಾದ ನಗರಗಳು ಹೆಲ್ತ್ ಹಬ್ಗಳಾಗಿ ರೂಪುಗೊಳ್ಳುತ್ತಿವೆ.
ರಾಜ್ಯದಲ್ಲಿರುವ ಮೂಲ ಸೌಕರ್ಯಗಳನ್ನು ಬಳಸಿಕೊಂಡು ಜನರ ಮನೆಗಳಿಗೆ ತೆರಳಿ ಆರೋಗ್ಯ ತಪಾಸಣೆ ಮಾಡುವ ನೂತನ ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆಯು ಜಾರಿಗೊಳಿಸಿದೆ. ಅಪೌಷ್ಟಿಕತೆಯ ಸಮಸ್ಯೆಯನ್ನು ಹೋಗಲಾಡಿಸಲು ಹಲವು ಉಪಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಆಹಾರ ಕಲಬೆರಕೆಯ ವಿರುದ್ಧ ಸಮರ ಸಾರಲಾಗಿದೆ. ಕಲಬೆರಕೆಯಂಥ ಕ್ರಿಮಿನಲ್ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರುವ ಕಾರಣದಿಂದಾಗಿ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವುದರಲ್ಲಿ ಮುಂಚೂಣಿಯಲ್ಲಿದ್ದೇವೆ. 2025ರ ಇಂಡಿಯಾ ಜಸ್ಟೀಸ್ ವರದಿಯ ಪ್ರಕಾರ ನ್ಯಾಯ ನೀಡಿಕೆಯಲ್ಲಿ ರಾಜ್ಯವು ಮೊದಲ ಸ್ಥಾನದಲ್ಲಿದೆ. ಕುವೆಂಪು ಅವರ ಆಶಯದಂತೆ ʼಸರ್ವ ಜನಾಂಗದ ಶಾಂತಿಯ ತೋಟʼವೆಂಬ ಹೆಗ್ಗಳಿಕೆಯನ್ನು ಕರ್ನಾಟಕವು ರಕ್ಷಿಸುತ್ತಾ ಬಂದಿದೆ. ಸೌಹಾರ್ದ ವಾತಾವರಣವನ್ನು ಇನ್ನಷ್ಟು ಬಲವಾಗಿಸಲು ವಿಶೇಷ ಕಾರ್ಯಪಡೆಗಳನ್ನು ಸ್ಥಾಪಿಸಲಾಗಿದೆ. ಇದರಿಂದಾಗಿ ನಿರಂತರವಾಗಿ ಕೋಮು ಸೂಕ್ಷ್ಮತೆ ಇರುವ ಪ್ರದೇಶಗಳಲ್ಲಿ ಶಾಂತಿ ನೆಲೆಸುವಂತಾಗಿದೆ. ಸಮಾಜಕ್ಕಾಗಿ ದುಡಿಯುವ ಪೊಲೀಸರ ಮಣಭಾರದ ಸ್ಲೋಚ್ ಹ್ಯಾಟುಗಳ ಭಾರವನ್ನು ಇಳಿಸಿ ಹೊಸ ಪೀಕ್ ಕ್ಯಾಪುಗಳನ್ನು ನೀಡಲಾಗಿದೆ. ಇದರಿಂದ ಅವರ ಕಾರ್ಯ ಕ್ಷಮತೆ ಹೆಚ್ಚುವುದು ಸಾಧ್ಯವಾಗಿದೆ.
ಹೊಸ ಕಾಲಘಟ್ಟದಲ್ಲಿ ಡ್ರಗ್ಸ್ ಎಂಬ ಮನುಷ್ಯ ವಿರೋಧಿ ದುರಂತಕಾರಿ ಪಿಡುಗು ನಮ್ಮ ಯುವ ಜನರನ್ನು ಬಲಿ ಪಡೆಯುತ್ತಿದೆ. ಇದನ್ನು ತಪ್ಪಿಸಲು ರಾಜ್ಯವು ಈ ಪಿಡುಗಿಗೆ ಕಾರಣರಾದವರನ್ನು ನರಹತ್ಯೆಗೆ ಸಮನಾದ ಅಪರಾಧ ಮಾಡಿದವರು ಎಂದು ತೀರ್ಮಾನಿಸಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಲು ಅಗತ್ಯವಿರುವ ಕಾನೂನುಗಳನ್ನು ರೂಪಿಸುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಮೇಲಿನ ದೌರ್ಜನ್ಯಗಳನ್ನು ತಡೆಯಲು 33 ಹೊಸ ಡಿಸಿಆರ್ಇ ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಬಿಗಿ ಮಾಡುವ ನಿಟ್ಟಿನಲ್ಲಿ 12 ಹೊಸ ಠಾಣೆಗಳು ಪ್ರಾರಂಭವಾಗಿವೆ. ಎಲ್ಲಾ ಸಿಇಎನ್ ಪೊಲೀಸ್ ಠಾಣೆಗಳನ್ನು ಸೈಬರ್ ಪೊಲೀಸ್ ಠಾಣೆಗಳಾಗಿ ಬದಲಾಯಿಸಲಾಗಿದೆ. ಈ ಎಲ್ಲ ಉಪಕ್ರಮಗಳ ಉದ್ದೇಶ ನಮ್ಮ ರಾಜ್ಯವನ್ನು ಇನ್ನಷ್ಟು ಉತ್ತಮವಾದ ಕಾನೂನು ಸುವ್ಯವಸ್ಥೆ ಹೊಂದಿದ ರಾಜ್ಯವನ್ನಾಗಿಸುವುದೇ ಆಗಿದೆ.
ಜ್ಞಾನ-ವಿಜ್ಞಾನ ವಲಯಗಳು, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಕೈಗಾರಿಕಾ ಪರವಾದ ವಾತಾವರಣಗಳಿಂದಾಗಿ ರಾಜ್ಯವು ಐಟಿ-ಬಿಟಿ ಕ್ಷೇತ್ರಗಳಲ್ಲಿಇಡೀ ದೇಶದಲ್ಲಿಯೇ ಮುಂಚೂಣಿ ಸ್ಥಾನದಲ್ಲಿದೆ. ಅಲ್ಲದೆ, ಭಾರತದ ನವೋದ್ಯಮಗಳ ರಾಜಧಾನಿಯಾಗಿ ರೂಪುಗೊಳ್ಳುತ್ತಿದೆ. ಇದನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ʼಕರ್ನಾಟಕ ನವೋದ್ಯಮ ನೀತಿʼಯನ್ನು ಜಾರಿಗೆ ತರಲಾಗಿದೆ. ಬೆಂಗಳೂರಿನ ಆಚೆಗೂ ತಂತ್ರಜ್ಞಾನವನ್ನು ಕೊಂಡೊಯ್ಯಲು ʼಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮʼ [ಲೀಪ್] ವನ್ನು ರೂಪಿಸಿ 1,000 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಇದರಿಂದಾಗಿ ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಉದ್ಯೋಗಗಳು ಸೃಜನೆಯಾಗಬಹುದೆಂಬ ನಿರೀಕ್ಷೆಯಿದೆ. 2035ರ ವೇಳೆಗೆ 20 ಡಾಲರ್ ಬಿಲಿಯನ್ ಕ್ವಾಂಟಮ್ ಆರ್ಥಿಕತೆಯನ್ನು ನಿರ್ಮಿಸಲು ʼಕರ್ನಾಟಕ ಕ್ವಾಂಟಮ್ ರೋಡ್ಮ್ಯಾಪʼನ್ನು ಬಿಡುಗಡೆ ಮಾಡಲಾಗಿದೆ.
2025 ರಲ್ಲಿ ಉತ್ತಮ ಮಳೆಯಾದ ಕಾರಣ ಈ ವರ್ಷ ಅತ್ಯುತ್ತಮ ಕೃಷಿ ಬೆಳೆಗಳನ್ನು ಬೆಳೆಯಲಾಗಿದೆ. ಅತಿವೃಷ್ಟಿಯೂ ಸಹ ರೈತರ ಬೆಳೆಗಳಿಗೆ ಹಾನಿ ಮಾಡಿತು. ಮಳೆಯಿಂದ ಹಾನಿಯಾದ ಬೆಳೆಗಳಿಗಾಗಿ ರೈತರಿಗೆ ಪರಿಹಾರ ನೀಡಲು ಸರ್ಕಾರವು 2,250 ಕೋಟಿ ರೂ.ಗಳನ್ನು ವಿನಿಯೋಗಿಸಿದೆ. ಇದರ ಜೊತೆಗೆ 2,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ವಿಮೆಯನ್ನು ರೈತರಿಗೆ ಸಿಗುವಂತೆ ಮಾಡಲಾಗಿದೆ.
ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶ; ಸಿಎಂ ಸಿದ್ದರಾಮಯ್ಯ
ಈ ವರ್ಷ ರೈತರು ಬೆಳೆದ ಮಾವು, ಮೆಕ್ಕೆಜೋಳ ಮುಂತಾದವುಗಳಿಗೆ ಬೆಲೆ ಕಡಿಮೆಯಾಯಿತೆಂದು ಹಾಗೂ ಕಬ್ಬಿಗೆ ಸಿಗುತ್ತಿರುವ ದರ ಸಾಲದ್ದೆಂದು ಪ್ರತಿಭಟನೆ ಮಾಡಿದರು. ಸರ್ಕಾರವು ಕೂಡಲೆ ರೈತರ ಪರವಾಗಿ ನಿಂತು ಸಮಸ್ಯೆಗಳನ್ನು ಪರಿಹರಿಸಿತು. ಕಬ್ಬು ಬೆಳೆದ ರೈತರಿಗೆ ಇಂತಿಷ್ಟೇ ಬೆಲೆ ನೀಡಬೇಕೆಂದು ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ಸೂಚನೆಗಳನ್ನು ನೀಡಿ ಸರ್ಕಾರವು ಸಹ ಸುಮಾರು 300 ಕೋಟಿ ರೂ.ಗಳಿಗೂ ಹೆಚ್ಚಿನ ನೆರವನ್ನು ರೈತರಿಗೆ ನೀಡಲು ನಿರ್ಧರಿಸಿತು. ಇದೇ ಸಂದರ್ಭದಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ಜನವರಿಯ ಬದಲಾಗಿ ಡಿಸೆಂಬರಿನಲ್ಲಿಯೇ ತೆರೆಯಬೇಕೆಂದು ಒತ್ತಡ ಬಂದ ಕಾರಣ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸಿ ಖರೀದಿ ಕೇಂದ್ರಗಳನ್ನು ತೆರೆದಿದೆ.
ಪ್ರಸ್ತುತ ಸರ್ಕಾರವು ರೈತರ ಪಂಪ್ಸೆಟ್ಟುಗಳಿಗೆ ಹಗಲು ಹೊತ್ತಿನಲ್ಲೂ 7 ಗಂಟೆಗಳ ಕಾಲ ನಿರಂತರವಾಗಿ ತ್ರೀಫೇಸ್ ವಿದ್ಯುತ್ ಪೂರೈಸಲು ಪ್ರಯತ್ನಿಸುತ್ತಿದೆ. ಬದಲಾದ ಪರಿಸ್ಥಿತಿಯಲ್ಲಿ ರೈತರು ಬೆಳೆದ ಕಬ್ಬು ಕಟಾವು ಯಂತ್ರಗಳಿಗೆ ದೊಡ್ಡ ಪ್ರಮಾಣದ ಪ್ರೋತ್ಸಾಹ ಧನವನ್ನು ನೀಡಿ ಯಂತ್ರಗಳನ್ನು ಒದಗಿಸಲಾಗುತ್ತಿದೆ. ಈಗ ರಾಗಿ, ಭತ್ತ, ಮೆಕ್ಕೆಜೋಳ ಮುಂತಾದ ಬೆಳೆಗಳನ್ನು ಕಟಾವು ಮಾಡಲು ರೈತರು ಯಂತ್ರಗಳನ್ನೇ ಅವಲಂಬಿಸಿದ್ದಾರೆ. ಕೃಷಿ ಯಂತ್ರೋಪಕರಣ ಯೋಜನೆಯ ಮೂಲಕ ಸರ್ಕಾರ ಅವುಗಳಿಗೂ ನೆರವು ನೀಡುತ್ತಿದೆ. ನಮ್ಮ ಸರ್ಕಾರವು 2025-26 ಸೇರಿಸಿದಂತೆ ಸುಮಾರು 10,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ಸಬ್ಸಿಡಿ ಹಾಗೂ ಇನ್ನಿತರೆ ರೂಪದಲ್ಲಿ ರೈತರಿಗೆ ನೀಡಲಾಗಿದೆ.
ಹಾಲು ಉತ್ಪಾದಕರಿಗೆ ಉತ್ತಮ ದರಗಳು ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ. ಅಲ್ಲದೆ, ಹಿಂದೆ ಬಾಕಿ ಇದ್ದ ಪ್ರೋತ್ಸಾಹ ಧನವೂ ಸೇರಿದಂತೆ ರಾಜ್ಯದ 9.07 ಲಕ್ಷ ಹಾಲು ಉತ್ಪಾದಕರಿಗೆ 4,130 ಕೋಟಿ ರೂ.ಗಳನ್ನು ಸರ್ಕಾರ ರೈತರ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಿದೆ.
ಆಕಸ್ಮಿಕವಾಗಿ ಮರಣ ಹೊಂದಿದ ಜಾನುವಾರುಗಳಿಗೆ ಪರಿಹಾರ ಕೊಡುವ ಪ್ರಕ್ರಿಯೆ ನಿಂತು ಹೋಗಿತ್ತು. ಪ್ರಸ್ತುತ ಸರ್ಕಾರ `ಅನುಗ್ರಹ ಯೋಜನೆ`ಯಲ್ಲಿ 95.41 ಕೋಟಿ ರೂ.ಗಳನ್ನು ಒದಗಿಸಿ ರೈತರ ಪರ ನಿಂತಿತು.
ರಾಜ್ಯದಲ್ಲಿ 77 ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು. ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಡಿನ ಸಮಸ್ತ ಜನತೆಗೆ 77 ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ಕರ್ನಾಟಕವು ಪರಿಶಿಷ್ಟ ಸಮುದಾಯಗಳ ಬಲವರ್ಧನೆಯ ವಿಚಾರದಲ್ಲಿ ಬೇರೆ ರಾಜ್ಯಗಳಿಗಿಂತ ಬಹಳ ಮುಂದೆ ಇದೆ. ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅಧಿನಿಯಮಗಳನ್ನು ಜಾರಿಗೊಳಿಸಿದ ರಾಜ್ಯ ಕರ್ನಾಟಕ. ಬಡ್ತಿ ಮೀಸಲಾತಿಯನ್ನು ಜಾರಿಗೊಳಿಸಿರುವುದು ಸಹ ಇಲ್ಲಿಯೇ. ಎಸ್ಸಿ/ಎಸ್ಟಿ ಗುತ್ತಿಗೆದಾರರಿಗೆ ಮೀಸಲಾತಿ ಹಾಗೂ ಕೈಗಾರಿಕಾ ನಿವೇಶನಗಳಲ್ಲಿ ಮೀಸಲಾತಿ, ಸಾಲ ನೀಡಿಕೆ, ವಿದೇಶಿ ವಿದ್ಯಾಭ್ಯಾಸಕ್ಕಾಗಿ ಪ್ರಬುದ್ಧ ವಿದ್ಯಾರ್ಥಿ ವೇತನ ಯೋಜನೆ, ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳನ್ನು ಸ್ಥಾಪನೆಯಂತಹ ಉಪಕ್ರಮಗಳನ್ನು ಕೈಕೊಳ್ಳಲಾಗಿದೆ. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಒಳ ಮೀಸಲಾತಿ ವಿಷಯವೂ ಬಗೆಹರಿದು ಅನುಷ್ಠಾನದ ಹಂತಕ್ಕೆ ಬಂದಿದೆ. ಪಿಟಿಸಿಎಲ್ ಅಧಿನಿಯಮದ ಸಂಬಂಧದಲ್ಲಿ ಉದ್ಭವಿಸಿದ್ದ ಸಮಸ್ಯೆಗಳನ್ನು ಪರಿಹರಿಸಲಾಗಿದೆ.