ಬೆಂಗಳೂರು, ಜೂನ್ 24: ಹವಾಮಾನ ವೈಪರೀತ್ಯ ಹಾಗೂ ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವುದಾಗಿ ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಭರವಸೆ ನೀಡಿದ್ದಾರೆ. ನವದೆಹಲಿಯಲ್ಲಿ ಬುಧವಾರ ಸಂಜೆ ಚೌಹಾಣ್ ಅವರ ನಿವಾಸಕ್ಕೆ ತೆರಳಿ ಮಾವು ಬೆಳೆಗಾರರ ಸಂಕಷ್ಟದ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಚರ್ಚೆ ನಡೆಸಿದರು. ಈ ವೇಳೆ ಕುಮಾರಸ್ವಾಮಿ ಅವರ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಚೌಹಾಣ್ ಅವರು, ತಕ್ಷಣವೇ ಮಾವು ಬೆಳೆಗಾರರಿಗೆ ಅನುಕೂಲವಾಗುವ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪ್ರಸಕ್ತ ಹಂಗಾಮಿನಲ್ಲಿ ರೈತರು ಎದುರಿಸುತ್ತಿರುವ ಬೆಲೆ ಕುಸಿತ ಸಂಕಷ್ಟವನ್ನು ತಗ್ಗಿಸಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (ಎಂಐಎಸ್) ಮೂಲಕ ನೆರವಾಗಬೇಕು ಹಾಗೂ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಅಡಿಯಲ್ಲಿ ಬೆಂಬಲ ಬೆಲೆ ನೀಡಬೇಕು ಎಂದು ಕೇಂದ್ರ ಕೃಷಿ ಸಚಿವರನ್ನು ಸಚಿವ ಕುಮಾರಸ್ವಾಮಿ ಅವರು ಕೋರಿದರು. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾವೇರಿ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಾವು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಅವರು ಕೃಷಿ ಸಚಿವರಿಗೆ ವಿವರಿಸಿದರು.
ನಿರಂತರ ಬೆಲೆ ಕುಸಿತ ಮತ್ತು ಹೆಚ್ಚಾಗುತ್ತಿರುವ ಕೃಷಿ ವೆಚ್ಚಗಳಿಂದಾಗಿ ಮಾವು ಬೆಳೆಗಾರರು ಈ ವರ್ಷವೂ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ರೈತರು ಮತ್ತು ತೋಟಗಾರಿಕೆ ಕ್ಷೇತ್ರವನ್ನು ರಕ್ಷಿಸುವ ಉದ್ದೇಶದಿಂದ ತಾವು ಈ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದರು.
ಮಾವು ಬೆಳೆಗಾರರ ಸಮಸ್ಯೆಗಳ ಬಗ್ಗೆ ಹಾಗೂ ಬೆಲೆಕುಸಿತದ ಕುರಿತಂತೆ ತಾವು ಬರೆದಿರುವ ಪತ್ರವನ್ನು ಈಗಾಗಲೇ ಗಮನಿಸಿದ್ದೇನೆ ಎಂದು ಕೈಗಾರಿಕೆ ಸಚಿವರಿಗೆ ತಿಳಿಸಿದ ಕೃಷಿ ಸಚಿವರು; ರೈತರ ನೆರವಿಗೆ ಧಾವಿಸುವ ಉತ್ತಮ ನಿರ್ಧಾರವನ್ನು ತ್ವರಿತವಾಗಿ ಕೈಗೊಳ್ಳುವದಾಗಿ ಹೇಳಿದರು.
ಕರ್ನಾಟಕವು ಅತಿಹೆಚ್ಚು ಮಾವು ಬೆಳೆಯುವ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ರಾಜ್ಯದಲ್ಲಿ ಸುಮಾರು 1.45 ಲಕ್ಷ ಹೆಕ್ಟೇರ್ಗಳಲ್ಲಿ ಮಾವು ಕೃಷಿ ಮಾಡಲಾಗುತ್ತಿದ್ದು, ಪ್ರಸಕ್ತ ಋತುವಿನಲ್ಲಿ ಸುಮಾರು 10 ಲಕ್ಷ ಮೆಟ್ರಿಕ್ ಟನ್ ಮಾವು ಬೆಳೆಯಲಾಗಿದೆ. ಆದರೆ, ಬೆಲೆ ಕುಸಿತ ಹಾಗೂ ಪ್ರತಿಕೂಲಕರ ಹವಾಮಾನದಿಂದ ರೈತರು ಸಂಕಷ್ಟಕ್ಕೆ ತುತ್ತಾಗಿದ್ದಾರೆ ಎಂದು ಸಚಿವರು ಕೃಷಿ ಸಚಿವರ ಗಮನ ಸೆಳೆದರು.
ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಾವು ಅತ್ಯಂತ ಪ್ರಮುಖ ವಾಣಿಜ್ಯ ತೋಟಗಾರಿಕಾ ಬೆಳೆಯಾಗಿದೆ. ಮಾರುಕಟ್ಟೆಯ ಏರಿಳಿತಗಳು ಮತ್ತು ಅತಿಯಾದ ಪೂರೈಕೆ ಪರಿಸ್ಥಿತಿಗಳಿಂದಾಗಿ ಅನೇಕ ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಲಾಭದಾಯಕ ಮಟ್ಟಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ ಎಂಬ ಅಂಶವನ್ನು ಎಂದು ಕುಮಾರಸ್ವಾಮಿ ಅವರು ಕೃಷಿ ಸಚಿವರ ಗಮನಕ್ಕೆ ತಂದರು.
ಕರ್ನಾಟಕ ಕೃಷಿ ಬೆಲೆ ಆಯೋಗದ ಅಂದಾಜಿನ ಪ್ರಕಾರ ಮಾವಿನ ಕೃಷಿಯ (C-3) ವೆಚ್ಚವನ್ನು ಕ್ವಿಂಟಲ್ಗೆ ₹3,951 ಎಂದು ಅಂದಾಜಿಸಲಾಗಿದೆ. ಆದರೆ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳು ಈ ಮಟ್ಟಕ್ಕಿಂತ ಗಣನೀಯವಾಗಿ ಕಡಿಮೆ ಇರುವುದರಿಂದ ನೀರಾವರಿ, ಕಾರ್ಮಿಕರ ವೆಚ್ಚ ಮತ್ತು ಕೊಯ್ಲು ಕಾರ್ಯಾಚರಣೆಗಳಲ್ಲಿ ಗಣನೀಯ ವೆಚ್ಚದ ಹೊರತಾಗಿಯೂ ರೈತರು ದೊಡ್ಡ ಪ್ರಮಾಣದಲ್ಲಿ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದಾರೆ ಎಂದು ಅವರು ಕೃಷಿ ಸಚಿವರಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂತಸ ವ್ಯಕ್ತಪಡಿಸಿದ ಎಚ್.ಡಿ.ಕುಮಾರಸ್ವಾಮಿ ಅವರು; ಕೃಷಿ ಸಚಿವರ ಸಕಾರಾತ್ಮಕ ಸ್ಪಂದನೆಯಿಂದ ನನಗೆ ಬಹಳ ಸಂತೋಷವಾಗಿದೆ. ಅತ್ಯಂತ ತ್ವರಿತವಾಗಿ ರೈತರ ಪರವಾಗಿ ನಿರ್ಧಾರ ಕೈಗೊಳ್ಳುವುದಾಗಿ ಹಾಗೂ ಬೆಂಬಲ ಬೆಲೆ ಘೋಷಣೆ ಮಾಡುವದಾಗಿ ಭರವಸೆ ನೀಡಿದ್ದು ಸ್ವಾಗತಾರ್ಹ. ಅಲ್ಲದೆ, ಕಳೆದ ವರ್ಷವೂ ಕೃಷಿ ಸಚಿವರು ಅತ್ಯಂತ ಸಹನುಭೂತಿಯಿಂದ ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ರೈತರನ್ನು ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಂತಹ ಸಂಕಷ್ಟಗಳಿಂದ ಪಾರು ಮಾಡಲು ಕೇಂದ್ರ ಸರ್ಕಾರವು ಅವಿರತವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.