ಬೆಂಗಳೂರು: ಸುಡು ಬಿಸಿಲಿನಿಂದ ಹೈರಾಣಾಗಿದ್ದ ಬೆಂಗಳೂರಿಗೆ ಮಳೆರಾಯ (Bengaluru Rains) ತಂಪೆರೆದಿದ್ದಾನೆ. ರಾಜಧಾನಿಯ ಹಲವೆಡೆ ಸೋಮವಾರ ಸಂಜೆ ಭಾರಿ ಮಳೆಯಾಗಿದ್ದು, ಹಲವಡೆ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದು, ಮರಗಳು ಧರೆಗುರುಳಿ ವಾಹನ ಸಂಚಾರರು ಪರದಾಡುವಂತಾಗಿದೆ.
ನಗರದಲ್ಲಿ ಸಂಜೆ ಆಗುತ್ತಿದ್ದಂತೆ ದಟ್ಟ ಮೋಡ ಆವರಿಸಿಕೊಂಡಿತ್ತು. ಅದಾದ ಸ್ವಲ್ಪ ಹೊತ್ತಿನಲ್ಲೇ ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಚಾಮರಾಜಪೇಟೆ, ಮಲ್ಲೇಶ್ವರಂ, ಶೇಷಾದ್ರಿಪುರಂ, ಹೆಬ್ಬಾಳ, ಯಶವಂತಪುರ, ರಾಜಾಜಿನಗರ, ವಿಧಾನಸೌಧ, ಶಿವಾಜಿನಗರ ಸೇರಿ ವಿವಿಧೆಡೆ ಭಾರೀ ಮಳೆ ಸುರಿದಿದೆ.

ಮಳೆ ಅಬ್ಬರಕ್ಕೆ ಟೌನ್ ಹಾಲ್ ಮುಂಭಾಗದ ರಸ್ತೆ, ಪ್ಯಾಲೇಸ್ ರಸ್ತೆ ಕೆರೆಯಂತೆ ಕಾಣುತ್ತಿತ್ತು. ನಾಗವಾರ ಜಂಕ್ಷನ್ ನಲ್ಲಿ ಮಳೆ ನೀರು ನಿಂತಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಕಾರ್ತಿಕ್ ನಗರದಲ್ಲಿ ಮಳೆ ನೀರು ನಿಂತಿರುವುದರಿಂದ ಮಹದೇವಪುರ ಕಡೆಗೆ ನಿಧಾನಗತಿಯ ಸಂಚಾರವಿದೆ. ಇನ್ನು ಮಾಲ್ ಆಫ್ ಏಷಿಯಾ ಬ್ಯಾಕ್ ಗೇಟ್ ಹತ್ತಿರ ಇರುವ ರೈಲ್ವೆ ಅಂಡರ್ ಪಾಸ್ನಲ್ಲಿ ನೀರು ನಿಂತು ತಾತ್ಕಾಲಿಕವಾಗಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
Health Tips: ಬ್ರೇಕ್ಫಾಸ್ಟ್ ಸ್ಕಿಪ್ ಮಾಡ್ತಿದ್ದೀರಾ? ಈ ಆರೋಗ್ಯ ಸಮಸ್ಯೆ ಕಾಡಬಹುದು ಎಚ್ಚರ!
ನಾಳೆಯೂ ವಿವಿಧ ಜಿಲ್ಲೆಗಳಲ್ಲಿ ಗುಡುಗುಸಹಿತ ಮಳೆ
ಮೇ 19ರಂದು ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ದಕ್ಷಿಣ ಒಳನಾಡಿನ ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.