ಬೆಂಗಳೂರು: ಗುರುವಾರ ಬೆಳಗ್ಗೆ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ (Bengaluru Metro Green Line) ತಾಂತ್ರಿಕ ಸಮಸ್ಯೆಯಿಂದಾಗಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ. ಈ ಕುರಿತು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಕಟಣೆ ಹೊರಡಿಸಿ, "ತಾಂತ್ರಿಕ ಸಮಸ್ಯೆಯನ್ನು ನಮ್ಮ ತಾಂತ್ರಿಕ ತಂಡ ಆದ್ಯತೆಯ ಮೇರೆಗೆ ಪರಿಹರಿಸುತ್ತಿದ್ದು, ಸಾಧ್ಯವಾದಷ್ಟು ಬೇಗ ಸಾಮಾನ್ಯ ಸೇವೆಯನ್ನು ಪುನಃ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ" ಎಂದು ತಿಳಿಸಲಾಗಿದೆ.
ಹಸಿರು ಮಾರ್ಗ ಮೆಟ್ರೋ ಸೇವೆಯಲ್ಲಿ ಪ್ರಸ್ತುತ ವಿಳಂಬ ಉಂಟಾಗಿದೆ. ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ನಮ್ಮ ತಾಂತ್ರಿಕ ಸಿಬ್ಬಂದಿ ಆದ್ಯತೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದು, ಸಾಧ್ಯವಾದಷ್ಟು ಬೇಗ ಸಾಮಾನ್ಯ ಮೆಟ್ರೋ ಸಂಚಾರವನ್ನು ಪುನಃಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ. ಎಂದು BMRCL ಟ್ವೀಟ್ ಮೂಲಕ ತಿಳಿಸಿದೆ. ಆಫೀಸ್ಗೆ ಹೊರಡಬೇಕಾದ ಸಮಯದಲ್ಲಿ ಈ ರೀತಿ ಸಮಸ್ಯೆಯಾಗಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಆಕ್ರೋಶ
ಇತ್ತೀಚಿನ ದಿನಗಳಲ್ಲಿ ನಮ್ಮ ಮೆಟ್ರೋದಲ್ಲಿ ತಾಂತ್ರಿಕ ದೋಷ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಮೆಟ್ರೋ ರೈಲು ಸೇವೆಯಲ್ಲಿ ಉಂಟಾದ ಅಡಚಣೆಗಳ ಬಗ್ಗೆ ತನಿಖೆ ನಡೆಸಿ. ಹಾಗೇ, ಅದನ್ನ ಸರಿಪಡಿಸಲು ನೀವು ತೆಗೆದುಕೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಿ ಎಂದು ಬಿಎಂಆರ್ಸಿಎಲ್ (ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್) ಗೆ ಕೇಂದ್ರ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು ಖಡಕ್ ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
Bengaluru Metro: ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ನಲ್ಲಿ ಕೆಟ್ಟು ನಿಂತ ಮೆಟ್ರೋ ರೈಲು; ಪ್ರಯಾಣಿಕರ ಪರದಾಟ
ಪ್ರಯಾಣಿಕರ ಸುರಕ್ಷತೆ ಮತ್ತು ಅನುಕೂಲತೆಯೇ BMRCLನ ಪ್ರಥಮ ಆದ್ಯತೆಯಾಗಬೇಕು. ನಮ್ಮ ಮೆಟ್ರೋದ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಜವಾಬ್ದಾರರಾಗಿರುವ ಪ್ರಾಧಿಕಾರವಾಗಿ, ಸುರಕ್ಷಿತ, ವಿಶ್ವಾಸಾರ್ಹ ಮತ್ತು ಅಡೆತಡೆಯಿಲ್ಲದ ಮೆಟ್ರೋ ಸೇವೆಗಳನ್ನು ಒದಗಿಸಬೇಕು. ಇದರ ಸಂಪೂರ್ಣ ಜವಾಬ್ದಾರಿ ರಾಜ್ಯ ಸರ್ಕಾರದ್ದು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಹಾಗೇ, ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು, ಕ್ರಮ ವಹಿಸಬೇಕು ಎಂದು ರಾಜ್ಯ ಸರ್ಕಾರವನ್ನ ಅವರು ಒತ್ತಾಯಿಸಿದ್ದಾರೆ.