ನವದೆಹಲಿ, ಜೂ.25: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy), ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಚರ್ಚೆ ನಡೆಸಿದ ಫಲವಾಗಿ ಕೇಂದ್ರ ಸರ್ಕಾರ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸಿದೆ. ವಾತಾವರಣ ವೈಪರಿತ್ಯ ಮತ್ತು ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದ ಮಾವು ಬೆಳೆಗಾರರಿಗೆ ನೆರವಿನ ಹಸ್ತ ಚಾಚಿರುವ ಕೇಂದ್ರವು, ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಅಡಿಯಲ್ಲಿ 1.30 ಲಕ್ಷ ಮೆಟ್ರಿಕ್ ಟನ್ ಮಾವಿಗೆ ಪ್ರತಿ ಕ್ವಿಂಟಲ್ಗೆ ₹1,750 ನೆರವು ಘೋಷಿಸಿದೆ.
ಈ ಸಂಬಂಧ ಸಚಿವ ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಬುಧವಾರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ತ್ವರಿತವಾಗಿ ಮಾವು ಬೆಳೆಗಾರರ ರಕ್ಷಣೆಗೆ ಧಾವಿಸಬೇಕು ಎಂದು ಮನವಿ ಮಾಡಿದ್ದರು. ಕುಮಾರಸ್ವಾಮಿ ಅವರು ಮನವಿಗೆ ಸ್ಪಂದಿಸಿದ್ದ ಚೌಹಾಣ್ ಅವರು, ಮಾವು ಬೆಳೆಗಾರರಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ.
ಅಲ್ಲದೆ, ಇದೇ ಜೂನ್ 17ರಂದು ಸಚಿವ ಚೌಹಾಣ್ ಅವರಿಗೆ ಪತ್ರ ಬರೆದಿದ್ದ ಬೃಹತ್ ಕೈಗಾರಿಕೆ ಸಚಿವರು, ಮಾವು ಬೆಳೆಗಾರರ ನೆರವಿಗೆ ಬರುವಂತೆ ಕೋರಿದರು. ಬೆಲೆ ಕೊರತೆ ಪಾವತಿ ಯೋಜನೆ (PDPS) ಯಡಿ ನೆರವಾಗುವಂತೆ ಕೇಳಿದ್ದರು. ತದನಂತರ ಕೋಲಾರ ಜಿಲ್ಲೆಯಲ್ಲಿ ಮಾವು ಬೆಳೆಗಾರರು ಪ್ರತಿಭಟನೆ ಶುರು ಮಾಡುತ್ತಿದ್ದಂತೆಯೇ ತುರ್ತಾಗಿ ಬುಧವಾರ ಸಂಜೆ ಕೃಷಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಅದರ ಫಲವಾಗಿ ಆರ್ಥಿಕ ನೆರವಿನ ಘೋಷಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ಈ ಉಪಕ್ರಮದ ಮೂಲಕ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳ ಮಾವು ಬೆಳೆಗಾರರಿಗೆ ನೆರವಾಗಲಿದೆ.
ಕೃಷಿ ಸಚಿವರಿಗೆ ಧನ್ಯವಾದ ತಿಳಿಸಿರುವ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (MIS)ಯಡಿ ಬೆಲೆ ಕೊರತೆ ಪಾವತಿ ಯೋಜನೆ (PDPS) ಜಾರಿಗೆ ತ್ವರಿತವಾಗಿ ನಿರ್ಧಾರ ಕೈಗೊಂಡಿದೆ. ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯ ಮಾರ್ಗಸೂಚಿಯಂತೆ ಪ್ರಸಕ್ತ ಹಂಗಾಮಿನಲ್ಲಿ ತೋತಾಪುರಿ ಮಾವಿಗೆ ಬೆಲೆ ಕೊರತೆ ಪಾವತಿ ಜಾರಿಗೆ ಬರಲಿದೆ. ಗರಿಷ್ಠ 1,30,000 ಮೆಟ್ರಿಕ್ ಟನ್ ವರೆಗೆ ಅನ್ವಯ ಆಗುವಂತೆ ಪ್ರತೀ ಕ್ವಿಂಟಲ್ಗೆ ₹1,750 ಸಹಾಯಧನ ಘೋಷಣೆ ಮಾಡಲಾಗಿದ್ದು, ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಹೊರಡಿಸಿದೆ.
ಕಾಂಗ್ರೆಸ್ ಸರ್ಕಾರದ ಕಳ್ಳಾಟ ತೆರೆದಿಟ್ಟ ಸಿಎಜಿ ವರದಿ: ಪ್ರಲ್ಹಾದ್ ಜೋಶಿ
ಕೃಷಿ ಸಚಿವರಿಗೆ ಧನ್ಯವಾದ ತಿಳಿಸಿದ ಎಚ್ಡಿಕೆ
ನನ್ನ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಕೃಷಿ ಸಚಿವರು ಅತ್ಯಂತ ತ್ವರಿತವಾಗಿ ಮಾವು ಬೆಳೆಗಾರರಿಗೆ ಅನುಕೂಲವಾಗುವ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅವರ ಸ್ಪಂದನೆಗೆ ನನ್ನ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ನಾಯಕತ್ವದಲ್ಲಿ ರೈತರನ್ನು ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಂತಹ ಸಂಕಷ್ಟಗಳಿಂದ ಸಕಾಲದಲ್ಲಿ ಪಾರು ಮಾಡಲು ಕೇಂದ್ರ ಸರ್ಕಾರವು ಅವಿರತವಾಗಿ ಶ್ರಮಿಸುತ್ತಿದೆ ಮತ್ತು ಬದ್ಧವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.