ಮನರೇಗಾದಲ್ಲಿ ಕಾಂಗ್ರೆಸ್ ಅವಧಿಯಲ್ಲಿ 11 ಲಕ್ಷ ಕೋಟಿ ಭ್ರಷ್ಟಾಚಾರ: ಜೋಶಿ ಆರೋಪ
2013ರಲ್ಲಿ ಸಿಎಜಿ ಪ್ರಕಾರ ದೇಶದಲ್ಲಿ 4.33 ಲಕ್ಷ ನಕಲಿ ಜಾಬ್ ಕಾರ್ಡ್ಗಳಿದ್ದವು. ಮೊದಲು ಜೆಸಿಬಿಯಿಂದ ಕೆಲಸ ಮಾಡಿಸುತ್ತಿದ್ದರು. ಈಗ ಈ ಎಲ್ಲಾ ಅಕ್ರಮ, ಲೋಪಗಳಿಗೂ ತೆರೆ ಎಳೆಯಲೆಂದೇ ʼವಿಬಿಜಿ ರಾಮ್ ಜಿ ಕಾಯ್ದೆʼ ತಂದಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (ಸಂಗ್ರಹ ಚಿತ್ರ) -
ಬೆಂಗಳೂರು, ಜ.8: ಕಾಂಗ್ರೆಸ್ ಅವಧಿಯಲ್ಲಿ ʼಮನರೇಗಾದಲ್ಲಿ ₹11 ಲಕ್ಷ ಕೋಟಿ ಮೊತ್ತದ ಭ್ರಷ್ಟಾಚಾರ ಆಗಿದೆ ಎಂದು ಆರೋಪಿಸಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು, ಇಂಥ ಅಕ್ರಮ, ವ್ಯಾಪಕ ಭ್ರಷ್ಟಾಚಾರ ತಡೆಯಲೆಂದೇ ಕೇಂದ್ರ ಸರ್ಕಾರ ʼವಿಬಿ ಜಿ ರಾಮ್ ಜಿ ಕಾಯ್ದೆʼ ಜಾರಿ ತಂದಿದೆ. ಆದರೆ, ಕಾಂಗ್ರೆಸ್ಗೆ ಇದೇ ದೊಡ್ಡ ಸಮಸ್ಯೆಯಾಗಿದೆʼ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಸಚಿವರು ಮಾತನಾಡಿದರು.
ʼವಿಬಿ ಜಿ ರಾಮ್ ಜಿ ಕಾಯ್ದೆʼಯಲ್ಲಿ ಎಐ ತಂತ್ರಜ್ಞಾನ, ಜಿಪಿಎಸ್ ಟ್ರ್ಯಾಕಿಂಗ್ ಅಳವಡಿಸಿದ್ದು, ಕೆಲಸದ ಗುಣಮಟ್ಟವನ್ನೂ ಪರೀಕ್ಷಿಸಲಾಗುತ್ತಿದೆ. ಮನರೇಗದಲ್ಲಿ ಹಣ ಹೊಡೆಯುತ್ತಿದ್ದ ಕಾಂಗ್ರೆಸ್ನ ಮಧ್ಯವರ್ತಿಗಳಿಗೆ ಇದುವೇ ತಲೆನೋವಾಗಿ ಪರಿಣಮಿಸಿದೆ. ಹಾಗಾಗಿ ವಿರೋಧಿಸುತ್ತಿದ್ದಾರೆ ಎಂದು ದೂರಿದರು.
ಮನರೇಗಾದಲ್ಲಿ ಕಾಂಗ್ರೆಸ್ ಅವಧಿಯಲ್ಲಿ ₹11 ಲಕ್ಷ ಕೋಟಿ ಮೊತ್ತದ ಭ್ರಷ್ಟಾಚಾರ ಆರೋಪವನ್ನು ಕಾಂಗ್ರೆಸ್ ವಿರೋಧಿಸಿಲ್ಲ. 2013ರಲ್ಲಿ ಸಿಎಜಿ ಪ್ರಕಾರ ದೇಶದಲ್ಲಿ 4.33 ಲಕ್ಷ ನಕಲಿ ಜಾಬ್ ಕಾರ್ಡ್ಗಳಿದ್ದವು. ಮೊದಲು ಜೆಸಿಬಿಯಿಂದ ಕೆಲಸ ಮಾಡಿಸುತ್ತಿದ್ದರು. ಈಗ ಈ ಎಲ್ಲಾ ಅಕ್ರಮ, ಲೋಪಗಳಿಗೂ ತೆರೆ ಎಳೆಯಲೆಂದೇ ʼವಿಬಿಜಿ ರಾಮ್ ಜಿ ಕಾಯ್ದೆʼ ತಂದಿದ್ದೇವೆ ಎಂದು ಜೋಶಿ ಸ್ಪಷ್ಟಪಡಿಸಿದರು.
ʼವಿಬಿ ಜಿ ರಾಮ್ ಜಿ ಕಾಯ್ದೆʼಯಲ್ಲಿ ಕೂಲಿಕಾರರಿಗೆ 60 ದಿನಗಳ ಕಾಲ ಬಿಡುವು ಕೊಟ್ಟಿದ್ದಕ್ಕೆ ಕಾಂಗ್ರೆಸ್ಸಿಗರು ಕೃಷಿ ಮೇಲೆ ದುಷ್ಪರಿಣಾಮ ಎನ್ನುತ್ತಿದ್ದಾರೆ, ಹಾಗಾದರೆ ಇವರ ಕಾಲದಲ್ಲೇನು 365 ದಿನ ಕೆಲಸ ಕೊಡುತ್ತಿದ್ದರಾ? ಎಂದು ಪ್ರಶ್ನಿಸಿದ ಜೋಶಿ, ಕಾಂಗ್ರೆಸ್ ಕಾಲದಲ್ಲಿ ಮನರೇಗಾದಲ್ಲಿ ಡಿಜಿಟಲ್ ಪೇಮೆಂಟ್ ಅನ್ನೇ ಮಾಡುತ್ತಿರಲಿಲ್ಲ. ಇದೀಗ ತನ್ನ ಮಧ್ಯವರ್ತಿಗಳಿಗೆ ಅನುಕೂಲವಾಗಬೇಕೆಂಬ ನಿಲುವಿನಲ್ಲಿ ʼವಿಬಿಜಿ ರಾಮ್ ಜಿ ಕಾಯ್ದೆʼ ವಿರೋಧಿಸಿ ಹೋರಾಟ ಮಾಡುತ್ತಿದೆ ಎಂದು ಆರೋಪಿಸಿದರು.
ವಿಬಿ-ಜಿ ರಾಮ್ ಜಿ ವಿರುದ್ಧ ಯಾವ ಪುರುಷಾರ್ಥಕ್ಕಾಗಿ ಕಾಂಗ್ರೆಸ್ಸಿನವರ ಹೋರಾಟ: ಜೋಶಿ
ರಾಜ್ಯದಲ್ಲಿ ಹೆಚ್ಚು ಭ್ರಷ್ಟಾಚಾರ
ಮನರೇಗಾದಲ್ಲಿ ರಾಜ್ಯಕ್ಕೆ ಹತ್ತು ವರ್ಷದಲ್ಲಿ 8 ಲಕ್ಷ 53 ಸಾವಿರ ಕೋಟಿ ಕೊಟ್ಟಿದ್ದೇವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲದಲ್ಲೇ ರಾಜ್ಯದಲ್ಲಿ ಮನರೇಗಾದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಆಗಿದೆ ಎಂದು ಆರೋಪಿಸಿದ ಅವರು, 80 ವರ್ಷದ ವ್ಯಕ್ತಿಯನ್ನೂ ಕೂಲಿಯನ್ನಾಗಿ ಮಾಡಿ ಹಣ ಪಡೆಯಲಾಗಿದೆ. ಇದೀಗ ರಾಹುಲ್ ಗಾಂಧಿಯಂತಹ ಅಪ್ರಬುದ್ಧ ರಾಜಕಾರಣಿಯನ್ನು ಖುಷಿಪಡಿಸಲು ಹೋರಾಟ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಗರಿ ಗರಿ ಅಂಗಿ ಹಾಕಿದವರಿಗೆ ದುಡ್ಡು ಸಿಗದು
ʼವಿಬಿಜಿ ರಾಮ್ ಜಿʼ ಯಲ್ಲಿ ಕೇಂದ್ರ ಸರ್ಕಾರ ತಾಂತ್ರಿಕತೆ ಅನುಷ್ಠಾನ ಮಾಡುತ್ತಿರುವುದರಿಂದ ಕಾಂಗ್ರೆಸ್ ಮಧ್ಯವರ್ತಿಗಳಿಗೆ ಸಮಸ್ಯೆಯಾಗುತ್ತಿದೆ. ಗರಿ ಗರಿ ಅಂಗಿ ಹಾಕಿಕೊಂಡು ಓಡಾಡುತ್ತಿದ್ದ ಕಾಂಗ್ರೆಸ್ ಮಧ್ಯವರ್ತಿಗಳಿಗೆ ಇನ್ನು ಮುಂದೆ ದುಡ್ಡು ಸಿಗುವುದಿಲ್ಲ ಎಂದು ಹೇಳಿದರು.
ʼವಿಬಿಜಿ ರಾಮ್ ಜಿʼ ಕಾಯ್ದೆಯಲ್ಲಿ ಇನ್ನು 14 ದಿನದಲ್ಲೇ ಕೂಲಿ ಹಣ ಪಾವತಿಸಬೇಕು. ಇಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ. ಮಾನಿಟರಿಂಗ್ ಜವಾಬ್ದಾರಿಯನ್ನು ಪಂಚಾಯತ್ಗೂ ಕೊಡಲಾಗಿದೆ. ಪ್ರತಿ ವಾರ ಕೆಲಸದ ವಿವರ ಬಹಿರಂಗಪಡಿಸಬೇಕು. ಯಾರೇ ತಪ್ಪು ಮಾಡಿದರೂ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಇದರಲ್ಲಿ ಅಷ್ಟೊಂದು ವ್ಯವಸ್ಥಿತವಾಗಿ ಪಾರದರ್ಶಕತೆ ತರಲಾಗಿದೆ ಎಂದು ಜೋಶಿ ತಿಳಿಸಿದರು.
ಯುಪಿಎ ಅವಧಿಯಲ್ಲಿ ನರೇಗಾದಲ್ಲಿ ಜೆಸಿಬಿಯಿಂದ ಕೆಲಸ ಮಾಡಿಸಲಿಲ್ಲವೆಂದು ಕಾಂಗ್ರೆಸ್ನ ಒಬ್ಬರಾದರೂ ಹೇಳಲಿ ನೋಡೋಣ ಎಂದು ಸವಾಲು ಹಾಕಿದ ಸಚಿವರು, ಇವರ ಅವಧಿಯಲ್ಲಿ ನರೇಗಾ ಸಿಬ್ಬಂದಿಗೆ ವೇತನವೇ ಸಿಗುತ್ತಿರಲಿಲ್ಲ. ಇನ್ನು ಯುಪಿಎ ಕಾಲದಲ್ಲಿ ರಕ್ಷಣಾ ವ್ಯವಸ್ಥೆಗೂ ಏನೂ ಮಾಡಲಿಲ್ಲ. ಆಗಿನ ರಕ್ಷಣಾ ಸಚಿವ ಆ್ಯಂಟನಿ ಅವರು ಹೈಕಮಾಂಡ್ಗೆ ಹೆದರಿ ಯಾವುದಕ್ಕೂ ಸಹಿ ಮಾಡುತ್ತಲೇ ಇರಲಿಲ್ಲ ಎಂದು ಕುಟುಕಿದರು.
ರಾಹುಲ್ ಗಾಂಧಿ ಗಂಭೀರ ರಾಜಕಾರಣಿಯೇ?: ಜೋಶಿ
ಅಧಿವೇಶನ ವೇಳೆ ವಿದೇಶಕ್ಕೆ ಹೋಗಿದ್ದ ರಾಹುಲ್ ಗಾಂಧಿ ಅವರೊಬ್ಬ ಗಂಭೀರ ರಾಜಕಾರಣಿಯೇ? ʼವಿಬಿ ಜಿ ರಾಮ್ ಜಿ ಕಾಯ್ದೆʼ ಯೋಜನೆ ಚರ್ಚೆ ವೇಳೆ ಸದನದಲ್ಲಿ ಇರಲೇ ಇಲ್ಲ. ಹೊಸ ಬದಲಾವಣೆ ಅನ್ವಯ ತಪ್ಪು ಕಂಡಲ್ಲಿ ನ್ಯಾಯಾಲಯಕ್ಕೆ ಹೋಗಬಹುದು. ಅಧಿಕಾರಿಗಳಿಗೆ ಶಿಕ್ಷೆ ಕೂಡ ಆಗುತ್ತದೆ. ಇದರಲ್ಲಿ ತಪ್ಪೇನು? ಎಂದು ಪ್ರಶ್ನಿಸಿದ ಜೋಶಿ, ಮೊದಲೆಲ್ಲಾ ಸರ್ಕಾರ ₹100 ಹಾಕಿದರೆ ₹15 ಮಾತ್ರ ಜನರಿಗೆ ತಲುಪುತ್ತಿತ್ತು ಎಂಬುದನ್ನು ರಾಜೀವ್ ಗಾಂಧಿಯೇ ಹೇಳುತ್ತಿದ್ದರು. ಹಾಗಾದರೆ ಕಾಂಗ್ರೆಸ್ಗೆ ವ್ಯವಸ್ಥೆ ಹಾಗೇ ಇರಬೇಕಿತ್ತಾ? ಎಂದು ಹರಿಹಾಯ್ದರು.
ಹಸಿರು ಹೈಡ್ರೋಜನ್ ಚಾಲಿತ ಮಿರೈ ಕಾರಿನಲ್ಲಿ ಜೋಶಿ-ಗಡ್ಕರಿ ಜಂಟಿ ಪ್ರಯಾಣ
ಮಹಿಳೆ ವಿವಸ್ತ್ರ ಪ್ರಕರಣದಲ್ಲಿ ಎಸ್ಐಆರ್ ಭಯ
ಹುಬ್ಬಳ್ಳಿಯ ಮಹಿಳೆ ವಿವಸ್ತ್ರಗೊಳಿಸಿ ಪೊಲೀಸರು ಹಲ್ಲೆ ನಡೆಸಿದ್ದಾರೆಂಬ ಆರೋಪದ ಪ್ರಕರಣದಲ್ಲಿ ಕಾಂಗ್ರೆಸ್ಗೆ ಎಸ್ಐಆರ್ ಭಯವಿದೆ. ಹಾಗಾಗಿಯೇ ಎಸ್ಐಆರ್ ಮಾಡಿ ಎಂದರೆ ಎಫ್ಐಆರ್ ಮಾಡುತ್ತಾರೆ. ಸಿಎಂ ಮತ್ತು ಗೃಹ ಸಚಿವರು ಪೊಲೀಸರ ಪರ ಮಾತಾಡಿದ್ದಾರೆ. ತನಿಖೆ ಮಾಡುತ್ತೇವೆ ಎನ್ನಬಹುದಿತ್ತಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು.