ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು (Cauvery water) ಹರಿಸದಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಮಂಡ್ಯದಲ್ಲಿ ರೈತರು ರಸ್ತೆ ತಡೆ ನಡೆಸಿ ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಅದೇ ರೀತಿ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಕ್ಕೆ ಕನ್ನಡಪರ ಸಂಘಟನೆಗಳಿಂದಲೂ ತೀವ್ರ ವಿರೋಧ ವ್ಯಕ್ತವಾಗಿದೆ. ಒಂದೆಡೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ರಾಜ್ಯಕ್ಕೆ ಬೆಂಕಿ ಬೀಳುತ್ತೆ ಎಂದು ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಎಚ್ಚರಿಕೆ ನೀಡಿದ್ದರೆ, ಮತ್ತೊಂದೆಡೆ ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟ ಮಾಡಲಾಗುವುದು ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಅವರು ತಿಳಿಸಿದ್ದಾರೆ.
ನಾವು ಜೈಲಿಗೆ ಹೋಗಲೂ ಸಿದ್ಧ, ಆದ್ರೆ ನೀರು ಬಿಡೆವು: ವಾಟಾಳ್ ನಾಗರಾಜ್
ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು, ನಮ್ಮ ರೈತರಿಗೆ ಕುಡಿಯುವುದಕ್ಕಾಗಿ ಮಾತ್ರ ನೀರು ಬಿಡಲಾಗುತ್ತದೆ, ಕೃಷಿ ಉದ್ದೇಶಕ್ಕೆ ನೀರು ಬಳಸಬಾರದು ಎಂದು ರಾಜ್ಯ ಸರ್ಕಾರ ಹೇಳಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಒಂದು ಹನಿ ಕಾವೇರಿ ನೀರನ್ನೂ ತಮಿಳುನಾಡಿಗೆ ಬಿಡಬಾರದು. ಕದ್ದುಮುಚ್ಚಿ ನೀರು ಬಿಟ್ಟರೆ ಇಡೀ ರಾಜ್ಯಾದ್ಯಂತ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಭಾರಿ ಹೋರಾಟ ಮಾಡಲಾಗುತ್ತದೆ. ಸಾವಿರಾರು ಜನ ಜೈಲಿಗೆ ಹೋಗುತ್ತಾರೆ, ನಾವು ಜೈಲಿಗೆ ಹೋಗಲು ಸಿದ್ಧ. ಏನಾದರೂ ಕರ್ನಾಟಕ ಸರ್ಕಾರ ವಿವೇಚನೆಯಿಲ್ಲದೆ ನೀರು ಬಿಟ್ಟರೆ ರಾಜ್ಯಕ್ಕೆ ಬೆಂಕಿ ಬೀಳುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
ನೀರು ಬಿಡುಗಡೆ ಮಾಡಿದರೆ ತೀವ್ರ ಸ್ವರೂಪದ ಹೋರಾಟ: ಕರವೇ ನಾರಾಯಣಗೌಡ
ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಪ್ರತಿಕ್ರಿಯಿಸಿ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕವು ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ನೀಡಿರುವ ನಿರ್ದೇಶನವು ಸಂಪೂರ್ಣವಾಗಿ ಅವೈಜ್ಞಾನಿಕ, ವಾಸ್ತವ ಪರಿಸ್ಥಿತಿಯನ್ನು ನಿರ್ಲಕ್ಷಿಸಿರುವ ಹಾಗೂ ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ ಆದೇಶವಾಗಿದೆ ಎಂದು ಕಿಡಿಕಾರಿದ್ದಾರೆ.
ಈ ವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ. ಕೆಆರ್ಎಸ್, ಕಬಿನಿ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಳವಳಕಾರಿ ಮಟ್ಟದಲ್ಲಿದೆ. ಈಗಿರುವ ನೀರು ರಾಜ್ಯದ ಜನರ ಕುಡಿಯುವ ನೀರಿನ ಅಗತ್ಯವನ್ನೇ ಸಂಪೂರ್ಣವಾಗಿ ಪೂರೈಸಲು ಸಾಕಾಗದ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಕರ್ನಾಟಕದಿಂದ ನಾಲ್ಕೂವರೆ ಟಿಎಂಸಿಗೂ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶಿಸುವುದು ವಾಸ್ತವ ಸ್ಥಿತಿಗೆ ಕಣ್ಣು ಮುಚ್ಚಿಕೊಂಡು ತೆಗೆದುಕೊಂಡ ನಿರ್ಧಾರವಾಗಿದೆ.
ಕುಡಿಯುವ ನೀರು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು. ಅದರ ಜೊತೆಗೆ ರಾಜ್ಯದ ರೈತರ ಬೆಳೆ ಹಾಗೂ ಜೀವನೋಪಾಯವನ್ನು ರಕ್ಷಿಸುವುದು ಕರ್ನಾಟಕ ಸರ್ಕಾರದ ಮೊದಲ ಜವಾಬ್ದಾರಿಯಾಗಿದೆ. ರಾಜ್ಯದ ಜನರ ಅಗತ್ಯಗಳನ್ನು ಕಡೆಗಣಿಸಿ ನೀರು ಹರಿಸುವುದು ಯಾವುದೇ ದೃಷ್ಟಿಯಿಂದಲೂ ನ್ಯಾಯಸಮ್ಮತವಲ್ಲ. ಆದ್ದರಿಂದ ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಈ ಆದೇಶವನ್ನು ಪಾಲಿಸಬಾರದು ಮತ್ತು ಒಂದು ಹನಿ ನೀರನ್ನೂ ತಮಿಳುನಾಡಿಗೆ ಬಿಡುಗಡೆ ಮಾಡಬಾರದು.
ರಾಜ್ಯ ಸರ್ಕಾರ ತಕ್ಷಣವೇ ಈ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ದ ಮುಂದೆ ಪ್ರಶ್ನಿಸಿ, ಕರ್ನಾಟಕದ ವಾಸ್ತವ ಜಲಸ್ಥಿತಿಯನ್ನು ಸಮಗ್ರವಾಗಿ ಮಂಡಿಸಬೇಕು. ಅಗತ್ಯವಿದ್ದರೆ ಮುಂದಿನ ಕಾನೂನುಬದ್ಧ ಕ್ರಮಗಳನ್ನು ಕೈಗೊಂಡು ರಾಜ್ಯದ ಹಕ್ಕು ಮತ್ತು ಜನರ ಹಿತಾಸಕ್ತಿಯನ್ನು ರಕ್ಷಿಸಬೇಕು.
ಒಂದು ವೇಳೆ ಈ ಅವೈಜ್ಞಾನಿಕ ಆದೇಶವನ್ನು ಅನುಸರಿಸಿ ಕರ್ನಾಟಕ ಸರ್ಕಾರ ನೀರು ಬಿಡುಗಡೆ ಮಾಡಿದರೆ, ಅದರ ವಿರುದ್ಧ ರಾಜ್ಯಾದ್ಯಂತ, ವಿಶೇಷವಾಗಿ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ತೀವ್ರ ಜನಾಕ್ರೋಶ ವ್ಯಕ್ತವಾಗುವ ಸಾಧ್ಯತೆಯಿದೆ. ಇಂತಹ ಪರಿಸ್ಥಿತಿಗೆ ಸರ್ಕಾರವೇ ನೇರ ಹೊಣೆಗಾರವಾಗಲಿದೆ.
ಮಳೆ ಕೊರತೆ ನಡುವೆ ರಾಜ್ಯಕ್ಕೆ ಮತ್ತೊಂದು ಶಾಕ್; ತಮಿಳುನಾಡಿಗೆ ದಿನಕ್ಕೆ 3,500 ಕ್ಯುಸೆಕ್ ಕಾವೇರಿ ನೀರು ಹರಿಸಲು ಆದೇಶ
ಕರ್ನಾಟಕ ರಕ್ಷಣಾ ವೇದಿಕೆ ಈ ಆದೇಶವನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ರಾಜ್ಯದ ಹಿತಾಸಕ್ತಿ, ರೈತರ ಬದುಕು ಹಾಗೂ ಕುಡಿಯುವ ನೀರಿನ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಈ ಆದೇಶದ ವಿರುದ್ಧ ರಾಜ್ಯಾದ್ಯಂತ ತೀವ್ರ ಸ್ವರೂಪದ ಪ್ರಜಾಸತ್ತಾತ್ಮಕ ಹೋರಾಟವನ್ನು ಸಂಘಟಿಸಲಿದೆ. ಸರ್ಕಾರ ರಾಜ್ಯದ ಜನರ ಭಾವನೆಗಳಿಗೆ ಗೌರವ ನೀಡಿ, ಕರ್ನಾಟಕದ ಹಿತಾಸಕ್ತಿಯನ್ನು ಅಗ್ರಸ್ಥಾನದಲ್ಲಿರಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.