ನವದೆಹಲಿ: ವಿಧಾನಪರಿಷತ್ ಚುನಾವಣೆಯಲ್ಲಿ (MLC Election) ಬಿಜೆಪಿಯ ಕೆಲವು ಶಾಸಕರು ಅಡ್ಡ ಮತದಾನ ಮಾಡಿ ವಿಪ್ ಉಲ್ಲಂಘಿಸಿದ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಜೀ ಅವರ ಗಮನಕ್ಕೆ ತಂದಿದ್ದೇವೆ ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರು ತಿಳಿಸಿದ್ದಾರೆ.
ನಿತಿನ್ ನವೀನ್ ಅವರ ಭೇಟಿಯ ಬಳಿಕ ಇಂದು ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಅಧ್ಯಕ್ಷರಿಗೂ ಅವರದೇ ಆದ ಮಾಹಿತಿ ಇತ್ತು. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಯಾರು ಅನ್ಯಾಯ ಮಾಡಿದ್ದಾರೋ, ದ್ರೋಹ ಎಸಗಿದ್ದಾರೋ ಅವರ ವಿರುದ್ಧ ಕಠಿಣ ನಿರ್ಣಯ ಮಾಡಲೇಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಸಂಘಟನಾತ್ಮಕ ಸಲಹೆಗಳನ್ನೂ ನೀಡಿದ್ದಾರೆ ಎಂದು ವಿವರಿಸಿದರು. ಮುಂದಿನ ದಿನಗಳಲ್ಲಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಒಟ್ಟಿಗೆ ಸೇರಿ ಕೆಲಸ ಮಾಡಲು ತಿಳಿಸಿದ್ದಾಗಿ ಹೇಳಿದರು.
ವಿಪಕ್ಷ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಅಡ್ಡ ಮತದಾನ ಸಂಬಂಧ ಅಂಕಿ-ಅಂಶಗಳು ರಾಷ್ಟ್ರೀಯ ಅಧ್ಯಕ್ಷರ ಬಳಿ ಇದೆ. ಯಾರು ಈ ಥರ ಮಾಡಿರಬಹುದೆಂಬ ಅಂಕಿ ಅಂಶಗಳು ಅವರ ಬಳಿ ಇವೆ. ನಾವು ಕೊಟ್ಟ ಮಾಹಿತಿ ಮೇರೆಗೆ ತಪ್ಪು ಮಾಡಿದವರ ವಿರುದ್ಧ ಸರಿಯಾದ ಸಮಯಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಪಕ್ಷಕ್ಕೆ ದ್ರೋಹ ಬಗೆದವರಿಗೆ, ಮೋಸ ಮಾಡಿದವರಿಗೆ ಸರಿಯಾದ ಪಾಠ ಕಲಿಸುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ವಿವರ ನೀಡಿದರು.
M R Venkatesh Column: ಅಡ್ಡ ಮತದಾನಕ್ಕೆ ಮುಕ್ತ ಮತದಾನ ಪರಿಹಾರವೇ ?
ಪಕ್ಷವನ್ನು ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಿಸುವ ದೃಷ್ಟಿಯಿಂದ ಒಗ್ಗಟ್ಟಿನಿಂದ, ಒಳ್ಳೆಯ ರೀತಿಯಿಂದ ಮುನ್ನಡೆಯುವಂತೆ ತಿಳಿಸಿದ್ದಾಗಿ ಹೇಳಿದರು. ಅಡ್ಡ ಮತದಾನ ಮಾಡಿದವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರದ ನಾಯಕರು ತಿಳಿಸಿದ್ದಾರೆ ಎಂದರು.