ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Purushothama Bilimale: ಯಕ್ಷಗಾನ ಸ್ತ್ರೀ ವೇಷಧಾರಿಗಳಿಗೆ ಮೇಳದೊಳಗೆ ಲೈಂಗಿಕ ಕಿರುಕುಳ; ಪುರುಷೋತ್ತಮ ಬಿಳಿಮಲೆ ಹೇಳಿದ್ದೇನು?, ಆಡಿಯೋ ಇಲ್ಲಿದೆ

Yakshagana artists: ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ 'ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು' ಹಾಗೂ 'ನಾವು ಕೂಗುವ ಕೂಗು' ಕೃತಿಗಳನ್ನು ಬಿಡುಗಡೆ ಕಾರ್ಯಕ್ರಮದಲ್ಲಿ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿದರ ಬಗ್ಗೆ ಮಾತನಾಡಿದ್ದರು. ಅವರ ಮಾತುಗಳು ವಿವಾದಕ್ಕೀಡಾಗಿದೆ.

ಪ್ರೊ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು, ನ.19: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಪ್ರೊ. ಪುರುಷೋತ್ತಮ ಬಿಳಿಮಲೆ (Purushothama Bilimale) ಅವರು ಯಕ್ಷಗಾನ ಕಲಾವಿದರ ಬಗ್ಗೆ ಆಡಿರುವ ಮಾತುಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಪ್ರೊ. ಬಿಳಿಮಲೆ ಅವರು ಸ್ಪಷ್ಟೀಕರಣ ನೀಡಿ, ಕ್ಷಮೆಯಾಚಿಸಿದ್ದಾರೆ. ಯಕ್ಷಗಾನ ಸ್ತ್ರೀ ವೇಷಧಾರಿಗಳಿಗೆ ಮೇಳದೊಳಗೆ ಲೈಂಗಿಕ ಕಿರುಕುಳದ ಬಗ್ಗೆ ಅವರು ಮಾತನಾಡಿರುವ ಆಡಿಯೊ ಲಭ್ಯವಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್‌ ಆಗುತ್ತಿದೆ.

ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ 'ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು' ಹಾಗೂ 'ನಾವು ಕೂಗುವ ಕೂಗು' ಕೃತಿಗಳನ್ನು ಬಿಡುಗಡೆ ಕಾರ್ಯಕ್ರಮದಲ್ಲಿ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿದರ ಬಗ್ಗೆ ಮಾತನಾಡಿದ್ದರು.

ಯಕ್ಷಗಾನ ಕಲಾವಿದರಲ್ಲಿ ಬಹುತೇಕರಲ್ಲಿ ಸಲಿಂಗಕಾಮ ಪ್ರವೃತ್ತಿ ಬೆಳೆಯುತ್ತಿತ್ತು. ಅಲ್ಲಿ ಅಂತಹ ಅನಿವಾರ್ಯತೆ ಇತ್ತು. ಯಾಕೆಂದರೆ ಯಕ್ಷಗಾನ ಕಲಾವಿದರು ಆರು ತಿಂಗಳಿಗೂ ಹೆಚ್ಚು ಕಾಲ ಮನೆಯಿಂದ ಹೊರಗೆ ಇರುತ್ತಿದ್ದರು. ಅಂತಹ ಸಂದರ್ಭದಲ್ಲಿ ಅವರ ದೈಹಿಕ ಕಾಮನೆಗಳು ಹೇಗಿರುತ್ತಿತ್ತು ಎಂದರೆ, ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೆಯುತ್ತಿತ್ತು. ಯಕ್ಷಗಾನದ ಒಳಗೆ ಸ್ತ್ರೀವೇಷಧಾರಿಗಳಿಗೆ ಅಲ್ಲಿ ಹೆಚ್ಚು ಒತ್ತಡ ಇರುತ್ತಿತ್ತು ಎಂದು ಹೇಳಿದ್ದರು.

ಪುರುಷೋತ್ತಮ ಬಿಳಿಮಲೆ ಅವರ ಆಡಿಯೋ ಇಲ್ಲಿದೆ



ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸುತ್ತಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ಮುಂದಿನ ವರ್ಷ ಮೇಳವೇ ಕಲಾವಿದರಿಗೆ ಸಿಗುತ್ತಿರಲಿಲ್ಲ. ವೇದಿಕೆಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು ಎಂದಿದ್ದರು.

ಕಲೆ, ದೈಹಿಕ ಕಾಮನೆಗಳು, ಭಾವನೆಗಳು ಇವೆಲ್ಲವನ್ನು ರಂಗಭೂಮಿಯ ಎದುರು ಕಾಣುವ ಲೋಕಕ್ಕಿಂತ ಭಿನ್ನವಾಗಿ ಪ್ರಕಟಗೊಳ್ಳುವ ಬಗೆ ಇದೆಯಲ್ಲ ಇವೆಲ್ಲ ವಿದ್ವಾಂಸರು, ಜಾನಪದ ವಿದ್ವಾಂಸರು ತಿಳಿದುಕೊಂಡು, ಅರ್ಥಮಾಡಿಕೊಂಡು ಯಾರಿಗೂ ತೊಂದರೆ ಆಗದ ಹಾಗೆ ಯಾರ ಭಾವನಗೂ ನೋವಾಗದ ಹಾಗೆ ಅಕ್ಷರದಲ್ಲಿ ಸುಂದರವಾಗಿ ಬರೆಯುವ ಕಲೆಯನ್ನು ಕಲಿತುಕೊಂಡರೆ ಯಕ್ಷಗಾನ ಜಾನಪದಕ್ಕೆ ಇನ್ನೊಂದು ಹೊಸ ಆಯಾಮ ಬರುತ್ತದೆ. ಈ ಅರ್ಥದಲ್ಲಿ ನನಗೆ ನಾವು ಕೂಗುವ ಕೂಗು ತುಂಬಾ ಸಂತೋಷ ಕೊಟ್ಟ ಕೃತಿ, ಇದರಲ್ಲಿ ಏಳು ಮಂಟೆಸ್ವಾಮಿ ಪರಂಪರೆಯ ನೀಲಗಾರರ ಆತ್ಮಕಥನಗಳಿವೆ ಎಂದಿದ್ದರು.

ಇಲ್ಲಿ ನಾವು ಸತ್ಯವನ್ನು ಹೇಳಲು ಹಿಂಜರಿಯಬಾರದು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇದ್ದರಿಂದ, ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹ ಇರುತ್ತಿತ್ತು ಎಂದು ಹೇಳಿದ್ದರು.

ಈಗ ನಾವು ಹೋಮೋ ಸೆಕ್ಸುವಲ್ ಬಗ್ಗೆ ಮಾತನಾಡುತ್ತೇವೆ, ಬಹಳ ಕೇಳುತ್ತೇವೆ, ಹಿಂದೆ ಅಂತಹ ಮುಕ್ತ ವಾತಾವರಣವಿರಲಿಲ್ಲ. ಯಕ್ಷಗಾನದಲ್ಲಿ ಸ್ತ್ರೀ ವೇಷಧಾರಿಗಳ ಮೇಲೆ ಒತ್ತಡ, ನಾವು ಚಿಕ್ಕವರಿದ್ದಾಗ ನಮ್ಮ ಫಸ್ಟ್ ಕ್ರಶ್ ಗಳು ಸ್ತ್ರೀ ವೇಷಧಾರಿಗಳು, ಈಗ ಸಿನಿಮಾ ನಟ, ನಟಿಯರ ಹೆಸರನ್ನು ಶಾಲೆ-ಕಾಲೇಜಿಗೆ ಹೋಗುವ ಹುಡುಗರು, ಹುಡುಗಿಯರು ಹೇಳುತ್ತಾರೆ, ನಮಗೆ ಆಗ ಇದ್ದದ್ದು ಕ್ರಶ್ ಸ್ತ್ರೀ ವೇಷಧಾರಿಗಳ ಮೇಲೆ. ಅವರು ರಂಗದ ಮೇಲೆ ಬಂದು ಕುಣಿದರೆ ನೋಡಲು ಏನು ಚೆಂದವಿತ್ತು ಎಂದಿದ್ದರು.

ಈ ಸುದ್ದಿಯನ್ನೂ ಓದಿ | Purushottama Bilimale: ಯಕ್ಷಗಾನ ಕಲಾವಿದರ ಸಲಿಂಗಕಾಮ ಕುರಿತು ಪುರುಷೋತ್ತಮ ಬಿಳಿಮಲೆ ಹೇಳಿಕೆ, ಪ್ರತಿರೋಧದ ಬಳಿಕ ಕ್ಷಮೆಯಾಚನೆ

ಆಗೆಲ್ಲ ಕಲಾವಿದ ಮೇಳಕ್ಕೆಂದು ಹೋಗಿ ವಾಪಸಾದಾಗ ಹಲವರಿಗೆ ಮನೆಯೇ ಇರುತ್ತಿರಲಿಲ್ಲ. ಅಂತಹ ದುರಂತ ಕಾವ್ಯಗಳು ಅವರ ಬದುಕಿನಲ್ಲಿವೆ. ಅವನ್ನು ಗ್ರಹಿಸುವ ಶಕ್ತಿ ಸಮಾಜಕ್ಕೆ ಇಲ್ಲವಾಗಿದೆ. ಹಾಡಿನ ಚಪ್ಪಾಳೆಯಷ್ಟೇ ಮುಖ್ಯವಾಗಬಾರದು. ಅವರ ಬದುಕಿನ ಬಿಕ್ಕಟ್ಟಿನ ಕಾವ್ಯಕ್ಕೆ ಅಕ್ಷರಸ್ಥರು, ವಿದ್ವಾಂಸರು ದನಿಯಾಗಬೇಕು ಎಂದಿದ್ದರು.

ವಿವಾದದ ಬಳಿಕ ಕ್ಷಮೆಯಾಚನೆ

ಸುದ್ದಿ ವೈರಲ್‌ ಆದ ಬಳಿಕ ಪುರುಷೋತ್ತಮ ಬಿಳಿಮಲೆ ಕ್ಷಮೆ ಯಾಚಿಸಿದ್ದಾರೆ. ಯಕ್ಷಗಾನ ಕಲಾವಿದರನ್ನು ಅವಮಾನ ಮಾಡುವ ಉದ್ದೇಶ ನನಗೆ ಇರಲಿಲ್ಲ. ನಾನು ಅವರ ಬಗ್ಗೆ ಯಾವುದೇ ಕೀಳು ಭಾವನೆ ಹೊಂದಿಲ್ಲ. ಯಕ್ಷಗಾನ ಕಲಾವಿದರ ಬದುಕು ಹಸನಾಗಬೇಕು ಎಂಬುದಷ್ಟೇ ನನ್ನ ಆಶಯ. ಆದಾಗ್ಯೂ, ಯಾರಿಗಾದರೂ ನೋವಾಗಿದ್ದರೆ ಅವರಲ್ಲಿ ಕ್ಷಮೆ ಯಾಚಿಸುತ್ತೇನೆ. ಪ್ರಾಧಿಕಾರದ ಅಧ್ಯಕ್ಷ ಸ್ಥಾನದಿಂದ ನನ್ನನ್ನು ತೆಗೆದರೆ ಹೋಗಲು ಸಿದ್ಧ ಎಂದು ಬಿಳಿಮಲೆ ಹೇಳಿದ್ದಾರೆ.