ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಮರುಪರಿಷ್ಕರಣೆಯ ಬೆನ್ನಲ್ಲೇ, ಈಗ 'ಅನ್ನಭಾಗ್ಯ' (Anna Bhagya Scheme) ಯೋಜನೆಗೂ ಕತ್ತರಿ ಬೀಳುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (K.H Muniyappa) ಈ ಕುರಿತು ಸುಳಿವನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಚ್. ಮುನಿಯಪ್ಪ, 'ಅನ್ನಭಾಗ್ಯ ಯೋಜನೆಯನ್ನು ನಿಜವಾದ ಬಡವರಿಗೆ ತಲುಪಿಸುವುದು ನಮ್ಮ ಗುರಿ ಎಂದು ಹೇಳಿದ್ದಾರೆ.
ಪ್ರಸ್ತುತ ಸುಮಾರು 13 ರಿಂದ 14 ಲಕ್ಷ ಜನರು ಅನರ್ಹರಾಗಿದ್ದರೂ ಬಿಪಿಎಲ್ (BPL) ಕಾರ್ಡ್ಗಳನ್ನು ಹೊಂದಿದ್ದಾರೆ. ಅಂತಹ ಅನರ್ಹರನ್ನು ಪತ್ತೆ ಹಚ್ಚಿ ಅವರನ್ನು ಪಟ್ಟಿಯಿಂದ ಕೈಬಿಡುವ ಕೆಲಸವನ್ನು ನಾವು ಶೀಘ್ರದಲ್ಲೇ ಮಾಡಲಿದ್ದೇವೆ' ಎಂದು ಅವರು ತಿಳಿಸಿದರು. ಅನರ್ಹರು ಸ್ವಯಂಪ್ರೇರಿತರಾಗಿ ತಮ್ಮ ಕಾರ್ಡ್ಗಳನ್ನು ಎಪಿಎಲ್ (APL) ಗೆ ವರ್ಗಾಯಿಸಿಕೊಳ್ಳಬೇಕು ಎಂದು ಈ ಹಿಂದೆಯೇ ಮನವಿ ಮಾಡಲಾಗಿತ್ತು ಎಂದು ಹೇಳಿದ್ದಾರೆ.
ಈಗ ಸರ್ಕಾರವು ಈಗಾಗಲೇ ಅನರ್ಹರ ಪಟ್ಟಿಯ ವರದಿಯನ್ನು ತರಿಸಿಕೊಂಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ. ಸರ್ಕಾರದ ಬೊಕ್ಕಸಕ್ಕೆ ಉಳಿತಾಯವಾಗುವುದಲ್ಲದೆ, ಅರ್ಹ ಬಡವರಿಗೆ ಹೆಚ್ಚಿನ ಸೌಲಭ್ಯ ನೀಡಲು ಸಾಧ್ಯವಾಗುತ್ತದೆ ಎಂಬುದು ಸರ್ಕಾರದ ಆಶಯವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಆ್ಯಪ್ ಮೂಲಕ ಪರಿಷ್ಕರಣೆ
ರಾಜ್ಯ ಸರ್ಕಾರವು ಅನರ್ಹರು ಮತ್ತು ಶ್ರೀಮಂತರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುವುದನ್ನು ತಡೆಯುವ ಉದ್ದೇಶದಿಂದ ಯೋಜನೆಗಳ ಪರಿಷ್ಕರಣೆಗೆ (ಮರು ಪರಿಶೀಲನೆ) ಮುಂದಾಗಿದೆ. ಈ ಪ್ರಕ್ರಿಯೆಯನ್ನು ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆ ನಡೆಸಿ ಅರ್ಹರನ್ನು ಮಾತ್ರ ಉಳಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆಗಾಗಿ ವಿಶೇಷ ಆ್ಯಪ್ ಅನ್ನು ಸಿದ್ಧಪಡಿಸಲಾಗಿದೆ. ಇದರ ಮೂಲಕ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.