Brahmavara Double murder: ಬ್ರಹ್ಮಾವರದಲ್ಲಿ ಭೀಕರ ಕೃತ್ಯ; ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ!
ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ಗಾಂಧಿನಗರದಲ್ಲಿ ತಂದೆ ತನಗೆ ಮಾನಸಿಕ ಹಾಗೂ ದೈಹಿಕವಾಗಿ ಟಾರ್ಚರ್ ನೀಡುತ್ತಿದ್ದರು. ಅವರಿಗೆ ತಾಯಿ ಬೆಂಬಲ ನೀಡುತ್ತಿದ್ದರು. ಹೀಗಾಗಿ ಅವರನ್ನು ಕೊಂದಿರುವುದಾಗಿ ಪುತ್ರ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
-
ಬ್ರಹ್ಮಾವರ: ಸುತ್ತಿಗೆಯಿಂದ ಹೊಡೆದು ತಂದೆ-ತಾಯಿಯನ್ನೇ ಭೀಕರವಾಗಿ ಮಗ ಕೊಂದಿರುವ ಆಘಾತಕಾರಿ ಘಟನೆ (Brahmavara Double murder) ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ಗಾಂಧಿನಗರದಲ್ಲಿ ನಡೆದಿದೆ. ಬ್ರಹ್ಮಾವರದ ಗಾಂಧಿನಗರ ನಿವಾಸಿಗಳಾದ ಲಾರಿ ಚಾಲಕ ಮೆಹಬೂಬ್ ಅಲಿ (55) ಹಾಗೂ ಅವರ ಪತ್ನಿ ಶಂಶಾದ್ ಬೇಗಂ (50) ಕೊಲೆಯಾದವರು. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಇವರ ಪುತ್ರ ಶಾಹಿದ್ ಅಲಿ (31) ಕೊಲೆ ಆರೋಪಿಯಾಗಿದ್ದು, ಆತನನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಶಾಹಿದ್ ಅಲಿ ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ತುರ್ತು ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ, ತನ್ನ ತಂದೆ-ತಾಯಿಯನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ. ಪ್ರತಿನಿತ್ಯ ತನಗೆ ಮಾನಸಿಕ ಹಿಂಸೆ ನೀಡುತ್ತಿದ್ದರು, ಹೀಗಾಗಿ ಭಾನುವಾರ ರಾತ್ರಿ ಸುಮಾರು 7 ಗಂಟೆಗೆ ಇಬ್ಬರನ್ನೂ ಕೊಲೆ ಮಾಡಿರುವುದಾಗಿ ಹೇಳಿದ್ದಾನೆ.
ತಂದೆ-ತಾಯಿಯೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ, ತೀವ್ರ ಆಕ್ರೋಶಗೊಂಡ ಶಾಹಿದ್ ಅಲಿ ಮನೆಯಲ್ಲಿದ್ದ ಸುತ್ತಿಗೆಯಿಂದ ಇಬ್ಬರ ತಲೆ ಹಾಗೂ ದೇಹಕ್ಕೆ ಮನಸೋಇಚ್ಛೆ ಪ್ರಹಾರ ಮಾಡಿದ್ದಾನೆ. ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದ ದಂಪತಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಆರೋಪಿ ಶಾಹಿದ್ ಅಲಿಯನ್ನು ವಶಕ್ಕೆ ಪಡೆದಿದ್ದಾರೆ.
ತಂದೆ ತನಗೆ ಮಾನಸಿಕ ಹಾಗೂ ದೈಹಿಕವಾಗಿ ಟಾರ್ಚರ್ ನೀಡುತ್ತಿದ್ದರು. ಅವರಿಗೆ ತಾಯಿ ಬೆಂಬಲ ನೀಡುತ್ತಿದ್ದರು. ಹೀಗಾಗಿ ಅವರನ್ನು ಕೊಂದಿರುವುದಾಗಿ ಪುತ್ರ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ, ಕೊಲೆಗೆ ನಿಖರ ಕಾರಣವೇನು ಎಂಬುವುದರ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.