Caste Census: ರಾಜ್ಯದಲ್ಲಿ ಸೆ.22ರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ
CM Siddaramaiah: ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ 15 ದಿನಗಳ ಕಾಲ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (socio-educational survey) ನಡೆಸುವ ನಿರ್ಧಾರ ಮಾಡಲಾಗಿದೆ. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ (Caste Census) ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಸಿಎಂ ಅವರು ಮಾತನಾಡಿದರು.
ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ. ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದರು.
ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಅಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದರು.
ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ಧಪಡಿಸಿ manual ಆಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ. ಈ ಬಾರಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು. ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸೂಚನೆ. ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತಿರ್ಮಾನ ಮಾಡಲಾಗಿದೆ ಎಂದರು.
ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕು. ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65 ಲಕ್ಷ ಗಣತಿದಾರರು ಸೇರಿ ಮಾನವ ಸಂಪನ್ಮೂಲ ಅವಶ್ಯಕತೆಯಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಯನ್ನೂ ಬಳಸಿಕೊಳ್ಳಲಾಗುವುದು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.
ಈ ಸುದ್ದಿಯನ್ನೂ ಓದಿ | CM Siddaramaiah: ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿದ್ದರಾಮಯ್ಯ
ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ ಆರ್ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.