ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಕೀಲರ ಸಂಘದ ಆಶ್ರಯದಲ್ಲಿ ಬುಧವಾರ ರಾಜ್ಯ ಮಟ್ಟದ ವಕೀಲರ ಲೆದರ್ಬಾಲ್ ಕ್ರಿಕೆಟ್ ಪಂದ್ಯಾವಳಿ ‘ಸರ್ ಎಂ.ವಿ. ವಕೀಲರ ಕಪ್’ಗೆ ಚಾಲನೆ ದೊರೆಯಿತು.
ಮುದ್ದೇನಹಳ್ಳಿಯ ಸಾಯಿಗ್ರಾಮದಲ್ಲಿರುವ ಸಾಯಿಕೃಷ್ಣನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾದ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ವಕೀಲರ ಸಂಘಗಳ ೧೨ ತಂಡಗಳು ಭಾಗವಹಿಸಿವೆ. ಮೇ 17ರಂದು ಫೈನಲ್ ಪಂದ್ಯ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಗ್ರಾಹಕ ವ್ಯಾಜ್ಯಗಳ ಆಯೋಗದ ಅಧ್ಯಕ್ಷರು ಹಾಗೂ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಉದ್ಘಾಟಿಸಿದರು. ತಾವು ಚಿಕ್ಕಬಳ್ಳಾಪುರದಲ್ಲಿ ನ್ಯಾಯಾಧೀಶರಾಗಿದ್ದ ಸಂದರ್ಭದಲ್ಲಿ ವಕೀಲರಲ್ಲಿ ಕ್ರೀಡಾ ಮನೋ ಭಾವ ಬೆಳೆಸುವ ಉದ್ದೇಶದಿಂದ ಕ್ರಿಕೆಟ್ ಪಂದ್ಯಾವಳಿಗಳನ್ನು ಆರಂಭಿಸಿದ್ದನ್ನು ನೆನಪಿಸಿ ಕೊಂಡರು. ಜಿಲ್ಲಾಡಳಿತದ ನೆರವಿನೊಂದಿಗೆ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯ ಕ್ರಮವು ಚಿಕ್ಕಬಳ್ಳಾಪುರದಲ್ಲಿ ನ್ಯಾಯಾಂಗ ಮತ್ತು ಕಾರ್ಯಾಂಗದ ಸಮನ್ವಯಕ್ಕೆ ಸಾಕ್ಷಿ ಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ: Chikkaballapur News: ಆದಿಚುಂಚನಗಿರಿ ಶ್ರೀ ಅಮೃತ ಹಸ್ತದಿಂದ ಮೇ.13ರಂದು ಒಕ್ಕಲಿಗರ ಸಂಘದ ನೂತನ ವಾಣಿಜ್ಯ ಮಳಿಗೆಗಳ ಲೋಕಾರ್ಪಣೆ
ಜಿಲ್ಲಾಧಿಕಾರಿ ಜಿ. ಪ್ರಭು ಮಾತನಾಡಿ, “ಯಾವುದೇ ವೃತ್ತಿಯಲ್ಲಿದ್ದರೂ ಕ್ರೀಡೆಗೆ ಆದ್ಯತೆ ನೀಡಬೇಕು. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಕ್ರೀಡೆಗೆ ಮನ್ನಣೆ ನೀಡುವ ದೇಶವು ಆರ್ಥಿಕತೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿ ಸಾಧಿಸುತ್ತದೆ” ಎಂದು ಅಭಿಪ್ರಾಯಪಟ್ಟರು.
ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಶೈಕ್ಷಣಿಕ ಹಾಗೂ ಗುಣಮಟ್ಟ ವಿಭಾಗದ ನಿರ್ದೇಶಕ ಡಾ.ಸತೀಶ್ ಬಾಬು ಮಾತನಾಡಿ, “ಕಳೆದ ಒಂದು ದಶಕದಲ್ಲಿ ಜೀವನಶೈಲಿ ಬದಲಾಗಿರುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿವೆ. ಹೀಗಾಗಿ ದೈಹಿಕ ಚಟುವಟಿಕೆಗಳಿಗೆ ಆದ್ಯತೆ ನೀಡು ವುದು ಅಗತ್ಯ. ಎಲ್ಲರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಇಂತಹ ಚಟುವಟಿಕೆ ಗಳಿಗೆ ಮುದ್ದೇನಹಳ್ಳಿಯ ಸತ್ಯಸಾಯಿ ಸಂಸ್ಥೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ, ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ರಾಜ್ಯ ವಕೀಲರ ಪರಿಷತ್ ಸದಸ್ಯ ಹರೀಶ್ ಎಸ್., ಚಿಕ್ಕಬಳ್ಳಾಪುರ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಕೆ.ವಿ. ಮಾತನಾಡಿದರು.
ಸತ್ಯಸಾಯಿ ಲೋಕಸೇವಾ ಸಂಸ್ಥೆಯ ಪ್ರಧಾನ ಸಂಪರ್ಕಾಧಿಕಾರಿ ಪಿ.ವಿ. ಗೋವಿಂದ ರೆಡ್ಡಿ, ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಮೊಮ್ಮಗ ಸತೀಶ್ ಮೋಕ್ಷಗುಂಡಂ, ವಕೀಲರ ಸಂಘದ ಕ್ರೀಡಾ ಸಮಿತಿ ಅಧ್ಯಕ್ಷ ಪಿ. ಸುಬ್ರಮಣಿ ಉಪಸ್ಥಿತರಿದ್ದರು. ಕಾರ್ಯ ಕ್ರಮಕ್ಕೂ ಮುನ್ನ ಅತಿಥಿಗಳು ವಿಶ್ವೇಶ್ವರಯ್ಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಸಸಿ ನೆಟ್ಟರು.