ಶಿಡ್ಲಘಟ್ಟ: ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪುಗೊಳ್ಳುವಲ್ಲಿ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಮೌಲ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಸಮಾಜಕ್ಕೆ ಪರಿಚಯಿಸುವ ಮಹತ್ವದ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಶಿಕ್ಷಣ ತಜ್ಞ ಬಿ.ಎನ್. ಕೃಷ್ಣಪ್ಪ ಹೇಳಿದರು.
ನಗರದ ಡಾಲ್ಫಿನ್ಸ್ ಪದವಿ ಪೂರ್ವ ಕಾಲೇಜಿನ ಜ್ಞಾನ ಸಂಗಮ ಸಭಾಂಗಣದಲ್ಲಿ ವಿದ್ಯಾರ್ಥಿಗಳ ವತಿಯಿಂದ ಆಯೋಜಿಸಿದ್ದ ಗುರುನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಲೆ ಯೊಳಗಿನ ಶಿಲ್ಪವನ್ನು ಶಿಲ್ಪಿ ಹೊರತರುವಂತೆ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುಗಳು ಹೊರತರುತ್ತಾರೆ. ಶಿಕ್ಷಣದ ಮೂಲಕ ಜ್ಞಾನ ನೀಡುವುದರ ಜೊತೆಗೆ ಮೌಲ್ಯ, ಸಂಸ್ಕಾರ ಮತ್ತು ಮಾನವೀಯ ಗುಣಗಳನ್ನು ಬೆಳೆಸಬೇಕು ಎಂದರು.
ಅಂಕಗಳು ಕಡಿಮೆಯಾದರೂ ಮೌಲ್ಯಗಳು ಕಡಿಮೆಯಾಗಬಾರದು. ಧನ ಕಡಿಮೆಯಾದರೂ ಜ್ಞಾನ ಕಡಿಮೆಯಾಗಬಾರದು. ಜ್ಞಾನ ಮತ್ತು ಮೌಲ್ಯಗಳನ್ನು ಹೊಂದಿರುವ ವ್ಯಕ್ತಿಗೆ ಸಮಾಜದಲ್ಲಿ ಸದಾ ಗೌರವ ದೊರೆಯುತ್ತದೆ ಎಂದು ತಿಳಿಸಿದ ಅವರು, ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜೀವನ ಹಾಗೂ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾಲ್ಫಿನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರು ಪಾಠದ ಜೊತೆಗೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಮೌಲ್ಯ ಹಾಗೂ ಸಂಸ್ಕಾರ ಬೆಳೆಸಬೇಕು. ಸಂಸ್ಥೆಯ ಉತ್ತಮ ಫಲಿತಾಂಶದ ಹಿಂದೆ ಶಿಕ್ಷಕರ ಪರಿಶ್ರಮ ಪ್ರಮುಖವಾಗಿದೆ ಎಂದರು.
ಪ್ರಾಂಶುಪಾಲ ಡಾ. ಎನ್. ಶ್ರೀನಿವಾಸಮೂರ್ತಿ ಮಾತನಾಡಿ, ತಂತ್ರಜ್ಞಾನದಿಂದ ಮಾಹಿತಿ ಪಡೆಯ ಬಹುದು. ಆದರೆ ಬದುಕಿನ ಜ್ಞಾನ ಮತ್ತು ಮಾರ್ಗದರ್ಶನವನ್ನು ಗುರುಗಳಿಂದ ಪಡೆಯಲು ಸಾಧ್ಯ ಎಂದರು.
ನಂತರ ವಿದ್ಯಾರ್ಥಿಗಳು ಉಪನ್ಯಾಸಕರನ್ನು ಸನ್ಮಾನಿಸಿದರು. ಕೈಕೆಶ ಹಾಗೂ ಅಂಕಿತ ನಿರೂಪಿಸಿ ದರು. ಚೇತನಾ ಅವರ ಭರತನಾಟ್ಯ ಗಮನ ಸೆಳೆಯಿತು. ಯಶಸ್ವಿನಿ ಸ್ವಾಗತಿಸಿದರು. ಸುಬಿಹಾ ವಂದಿಸಿದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.