ಚಿಕ್ಕಬಳ್ಳಾಪುರ: ಮದ್ಯಪಾನ, ತಂಬಾಕು ಹಾಗೂ ಮಾದಕ ವಸ್ತುಗಳಂತಹ ದುಷ್ಟಚಟಗಳು ವ್ಯಕ್ತಿಯ ಆರೋಗ್ಯ, ಕುಟುಂಬ ಮತ್ತು ಸಮಾಜದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತವೆ. ಆದ್ದರಿಂದ ಯಾವುದೇ ವ್ಯಸನಕ್ಕೆ ದಾಸರಾಗದೆ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳ ಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಕರೆ ನೀಡಿದರು.
ಚಿಕ್ಕಬಳ್ಳಾಪುರ ತಾಲ್ಲೂಕಿನ ಗುವ್ವಲಕಾನಹಳ್ಳಿಯ ಸೇಟ್ ದಿನ್ನೆ ಸಮೀಪದ ಶ್ರೀನಿವಾಸ್ ಸಪ್ಲೈ ಚೈನ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ: Chikkaballapur News: ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ : ಎಸ್ಪಿ ಕುಶಲ್ ಚೌಕ್ಸೆ
ಸಿಗರೇಟ್ ಪ್ಯಾಕ್ಗಳ ಮೇಲೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಎಚ್ಚರಿಕೆ ಹಾಗೂ ಕ್ಯಾನ್ಸರ್ ಸಂಬಂಧಿತ ಚಿತ್ರಗಳಿದ್ದರೂ ಜನರು ವ್ಯಸನಗಳಿಂದ ದೂರವಾಗದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಉತ್ತಮ ಆರೋಗ್ಯ ಮತ್ತು ಯಶಸ್ವಿ ಜೀವನಕ್ಕಾಗಿ ಕ್ರೀಡೆ, ಸಂಗೀತ, ಸಾಹಿತ್ಯ, ವ್ಯಾಯಾಮದಂತಹ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್ ಮಾತನಾಡಿ, ಕೆಟ್ಟ ಸಹವಾಸ, ಪ್ರಲೋಭನೆ ಮತ್ತು ತಪ್ಪು ನಿರ್ಧಾರಗಳಿಂದ ಅನೇಕರು ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರೊಂದಿಗೆ ಕುಟುಂಬಗಳೂ ಸಂಕಷ್ಟಕ್ಕೆ ಸಿಲುಕುತ್ತವೆ ಎಂದು ಹೇಳಿದರು. ಡಾ.ಮಹಾಂತ ಶಿವಯೋಗಿಗಳು ಆರಂಭಿಸಿದ್ದ "ಮಹಾಂತ ಜೋಳಿಗೆ" ಅಭಿಯಾನವು ಸಾವಿರಾರು ಮಂದಿಯನ್ನು ವ್ಯಸನಮುಕ್ತ ಬದುಕಿನತ್ತ ಕೊಂಡೊಯ್ದಿರುವುದನ್ನು ಸ್ಮರಿಸಿದರು.
ಮನೋವೈದ್ಯೆ ಡಾ.ಲಾವಣ್ಯ ತಂಬಾಕು, ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು. ವ್ಯಸನ ಸಮಸ್ಯೆಯಿಂದ ಬಳಲುತ್ತಿರುವವರು 14416 ಟೆಲಿಮಾನಸ್ ಸಹಾಯವಾಣಿ ಸಂಪರ್ಕಿಸಿ ಉಚಿತ ಸಮಾಲೋಚನೆ ಮತ್ತು ಚಿಕಿತ್ಸಾ ನೆರವು ಪಡೆಯಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ೨೦೦ಕ್ಕೂ ಹೆಚ್ಚು ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಸಿ. ಚೇತನ್ ವ್ಯಸನಮುಕ್ತ ಪ್ರತಿಜ್ಞೆ ಬೋಧಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಸಿ. ಚೇತನ್, ಶ್ರೀನಿವಾಸ್ ಸಪ್ಲೈ ಚೈನ್ ಸಲ್ಯೂಷನ್ಸ್ ಸಂಸ್ಥೆಯ ರಾಮು, ಮಾದಪ್ಪ ಎಂ, ಪುರುಷೋತ್ತಮ್, ಪ್ರಧಾನ ವ್ಯವಸ್ಥಾಪಕ ಲೋಕೇಶ್, ಉಪ ವ್ಯವಸ್ಥಾಪಕ ವೀರೇಂದ್ರ ರೆಡ್ಡಿ ,ಸಿದ್ದಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಆರ್. ಮಂಜುನಾಥ್, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ಶಿವಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕೃಷ್ಣ ಪ್ರಸಾದ್, ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಕಾಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ. ಹರೀಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಂಜುಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.