ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Student Protest: ವಿದ್ಯಾರ್ಥಿನಿಯರಿಗೆ ಮೂರು ದಿನ ಅನ್ನ ನೀಡಿಲ್ಲವೆಂಬ ಆರೋಪ; ಡಾ. ಲಲಿತಾ ಮನೋಹರನ್ ಫಾರ್ಮಸಿ ಕಾಲೇಜಿನ ವಿರುದ್ಧ ಪ್ರತಿಭಟನೆ

ಇಂಟಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನೀಂದ್ರ ಮಾತನಾಡಿ, ಕುಡಿದು ಬಂದು ವಿದ್ಯಾರ್ಥಿ ಗಳೊಂದಿಗೆ ಅನುಚಿತವಾಗಿ ವರ್ತಿಸಿದರೆಂದು ಆರೋಪಿಸಲಾಗಿರುವ ಉಪನ್ಯಾಸಕರನ್ನು ಕೂಡಲೇ ಅಮಾನತುಗೊಳಿಸಬೇಕು. ಮೊಬೈಲ್ ಇಟ್ಟುಕೊಂಡಿದ್ದಾರೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯರಿಗೆ ಊಟ ನೀಡದೆ ಕಿರುಕುಳ ನೀಡಿರುವ ಸಿಬ್ಬಂದಿಯ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಡಾ. ಲಲಿತಾ ಮನೋಹರನ್ ಫಾರ್ಮಸಿ ಕಾಲೇಜಿನ ವಿರುದ್ಧ ಪ್ರತಿಭಟನೆ

-

Profile
Ashok Nayak Jul 21, 2026 10:22 PM

ಚಿಕ್ಕಬಳ್ಳಾಪುರ: ನಗರದ ಸಿಎಸ್ಐ ಆವರಣದಲ್ಲಿರುವ ಡಾ.ಲಲಿತಾ ಮನೋಹರನ್ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಬಿ.ಎಸ್‌ಸಿ ಫಾರ್ಮಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಶಿಸ್ತು ಉಲ್ಲಂಘನೆ ನೆಪದಲ್ಲಿ ಮೂರು ದಿನಗಳಿಂದ ಊಟ ನೀಡದೆ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್, ಎನ್‌ಎಸ್‌ಯುಐ ಹಾಗೂ ಇಂಟಕ್ ಮುಖಂಡರು ಮಂಗಳವಾರ ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.

ಘಟನೆ ಕುರಿತು ಮಾಹಿತಿ ಪಡೆದ ಯುವ ಕಾಂಗ್ರೆಸ್, ಎನ್‌ಎಸ್‌ಯುಐ ಹಾಗೂ ಇಂಟಕ್ ಮುಖಂಡರು ಕಾಲೇಜಿಗೆ ಭೇಟಿ ನೀಡಿ ಪ್ರಾಂಶುಪಾಲರು ಮತ್ತು ವಾರ್ಡನ್ ಅವರನ್ನು ತರಾಟೆಗೆ ತೆಗೆದುಕೊಂಡರು. 

ವಿದ್ಯಾರ್ಥಿ ವಿರೋಧಿ ಧೋರಣೆ ಖಂಡಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಮದ್ಯಪಾನ ಮಾಡಿ ಬಂದು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದರೆಂದು ಆರೋಪಿ ಸಲಾದ ಸೈಕಾಲಜಿ ವಿಭಾಗದ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಇದನ್ನೂ ಓದಿ: Congress Protest: ಬಂಧನಕ್ಕೆ ಹೆದರಲ್ಲ; ಕೇಂದ್ರ ಸರ್ಕಾರ ಯುವಜನತೆಯ ಹೋರಾಟ ಹತ್ತಿಕ್ಕುತ್ತಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಕಿಡಿ

ಇಂಟಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನೀಂದ್ರ ಮಾತನಾಡಿ, ಕುಡಿದು ಬಂದು ವಿದ್ಯಾರ್ಥಿ ಗಳೊಂದಿಗೆ ಅನುಚಿತವಾಗಿ ವರ್ತಿಸಿದರೆಂದು ಆರೋಪಿಸಲಾಗಿರುವ ಉಪನ್ಯಾಸಕರನ್ನು ಕೂಡಲೇ ಅಮಾನತುಗೊಳಿಸಬೇಕು. ಮೊಬೈಲ್ ಇಟ್ಟುಕೊಂಡಿದ್ದಾರೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯರಿಗೆ ಊಟ ನೀಡದೆ ಕಿರುಕುಳ ನೀಡಿರುವ ಸಿಬ್ಬಂದಿಯ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 

ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರಿಗೂ ದೂರವಾಣಿ ಮೂಲಕ ಮಾಹಿತಿ ನೀಡಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದರು.

Protest 2

ಇದಕ್ಕೆ ಪ್ರತಿಕ್ರಿಯಿಸಿದ ಕಾಲೇಜಿನ ಪ್ರಾಂಶುಪಾಲರು, ನಡೆದಿರುವ ಘಟನೆಗೆ ವಿಷಾದ ವ್ಯಕ್ತಪಡಿಸಿ, "ಸಂಸ್ಥೆಯ ನಿಯಮಾವಳಿಗಳ ಪ್ರಕಾರ ನಡೆದುಕೊಂಡಿದ್ದೇವೆ. ಆದರೆ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿರುವ ಆರೋಪ ಬೆಳಕಿಗೆ ಬಂದ ಕೂಡಲೇ ಸಂಬಂಧಿಸಿದ ಉಪನ್ಯಾಸಕರ ವಿರುದ್ಧ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದ್ದು, ಅವರನ್ನು ಸೇವೆಯಿಂದ ವಜಾಗೊಳಿಸ ಲಾಗಿದೆ. ವಿದ್ಯಾರ್ಥಿಗಳಿಗೆ ಉಂಟಾದ ಅಸೌಕರ್ಯಕ್ಕಾಗಿ ಕ್ಷಮೆಯಾಚಿಸುತ್ತೇವೆ" ಎಂದು ಹೇಳಿದರು.

ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಮರ್ ಮುಗಳಿ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.

ಪ್ರತಿಭಟನೆಯಲ್ಲಿ ಇಂಟಕ್ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕುಬೇರ ಅಚ್ಚು, ಯುವ ಕಾಂಗ್ರೆಸ್ ಮುಖಂಡರಾದ ಋತ್ವಿಕ್, ಮನೋಜ್, ಆಶಿಕ್, ಲಿಖಿತ್, ರಂಜಿತ್, ಅಭಿ, ಕುಶಾಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.