ಚಿಕ್ಕಬಳ್ಳಾಪುರ : ಉದ್ಯೋಗ, ಶಿಕ್ಷಣ ಹಾಗೂ ಉತ್ತಮ ಜೀವನದ ಆಮಿಷವೊಡ್ಡಿ ನಡೆಯುವ ಮಾನವ ಕಳ್ಳಸಾಗಣಿಕೆ ಸಮಾಜದ ಭೀಕರ ಪಿಡುಗಾಗಿದ್ದು, ಇದರ ವಿರುದ್ಧ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಕರೆ ನೀಡಿದರು.
ವಿಶ್ವ ಮಾನವ ಕಳ್ಳಸಾಗಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತ ಆಶ್ರಯ ದಲ್ಲಿ ನಗರದ ಎಸ್ಜೆಸಿಐಟಿ ಕಾಲೇಜಿನಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು, ಮಕ್ಕಳು ಹಾಗೂ ಯುವಜನತೆ ಮಾನವ ಕಳ್ಳಸಾಗಣಿಕೆಯ ಪ್ರಮುಖ ಗುರಿಯಾಗು ತ್ತಿದ್ದಾರೆ. ಉದ್ಯೋಗ, ವಿದೇಶಿ ಉದ್ಯೋಗ, ಶಿಕ್ಷಣ ಮತ್ತು ಉತ್ತಮ ಬದುಕಿನ ಹೆಸರಿನಲ್ಲಿ ವಂಚಕರು ಬಲೆ ಬೀಸುತ್ತಿರುವುದರಿಂದ ಯುವಕರು ಅತ್ಯಂತ ಎಚ್ಚರಿಕೆಯಿಂದಿರಬೇಕು ಎಂದು ಎಚ್ಚರಿಸಿದರು.
ಇದನ್ನೂ ಓದಿ: Chikkaballapur News: ಕರ್ತವ್ಯಕ್ಕೆ ವಿದಾಯ ಸೇವೆಗೆ ನಮನ
ವಿದ್ಯಾರ್ಥಿಗಳು ತಮ್ಮ ಹಕ್ಕುಗಳು, ಸಂವಿಧಾನ ನೀಡಿರುವ ರಕ್ಷಣೆ ಹಾಗೂ ಸಂಬಂಧಿತ ಕಾನೂನು ಗಳ ಬಗ್ಗೆ ಅರಿವು ಹೊಂದಿರಬೇಕು. ಯಾವುದೇ ಅನುಮಾನಾಸ್ಪದ ವ್ಯಕ್ತಿ ಅಥವಾ ಚಟುವಟಿಕೆ ಕಂಡುಬಂದರೆ ಮೌನ ವಹಿಸದೆ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸಾರ್ವಜನಿಕರ ಜಾಗೃತಿ ಮತ್ತು ಸಹಭಾಗಿತ್ವದಿಂದ ಮಾತ್ರ ಮಾನವ ಕಳ್ಳಸಾಗಣಿಕೆ ಎಂಬ ಸಾಮಾಜಿಕ ಪಿಡುಗನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪಾ ಬಿ. ಅವರು ಕಾನೂನು ಸೇವೆಗಳ ಮಹತ್ವ ಹಾಗೂ ಮಾನವ ಕಳ್ಳಸಾಗಣಿಕೆ ತಡೆಗೆ ಇರುವ ಕಾನೂನು ರಕ್ಷಣೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ವಕೀಲರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಮಾನವ ಕಳ್ಳಸಾಗಣಿಕೆ ತಡೆಗೆ ಜಾಗೃತಿ ಮೂಡಿಸುವ ಸಂಕಲ್ಪ ಕೈಗೊಂಡರು.