ಗೌರಿಬಿದನೂರು: ಸ್ವಚ್ಛತೆ, ನೀರಿನ ಸಂರಕ್ಷಣೆ ಹಾಗೂ ಪರಿಸರ ರಕ್ಷಣೆಯ ಕುರಿತು ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಮುನೇಶ್ವರ ಬಡಾವಣೆಯ ತೀರ್ಥ ಶಾಲೆಯಲ್ಲಿ ಸ್ವಚ್ಛತಾ ಪಾಕ್ಷಿಕ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಲಹೆಯಂತೆ ಸೆ.1ರಿಂದ 15ರವರೆಗೆ ನಡೆಯಲಿರುವ ಅಭಿಯಾನಕ್ಕೆ ಸಂಸ್ಥೆಯ ಅಧ್ಯಕ್ಷ ಪ್ರೊ.ಕೆ.ವಿ.ಪ್ರಕಾಶ್ ಸ್ವಚ್ಛತಾ ಶಪಥ ಬೋಧಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಇದನ್ನೂ ಓದಿ: Gauribidanur News: ಶ್ರೀ ಮಹೇಶ್ವರಮ್ಮ ದೇವಿಯ ವಾರ್ಷಿಕೋತ್ಸವ ಯಶಸ್ವಿ
ಅಭಿಯಾನದ ಮೂಲಕ ನೀರಿನ ಸಂರಕ್ಷಣೆ, ಪ್ಲಾಸ್ಟಿಕ್ ನಿರ್ಮೂಲನೆ, ಪರಿಸರ ಸ್ವಚ್ಛತೆ ಹಾಗೂ ಕೈತೊಳೆಯುವ ಮಹತ್ವ ಸೇರಿದಂತೆ ಹಲವು ವಿಷಯಗಳ ಕುರಿತು ವಿದ್ಯಾರ್ಥಿಗಳು, ಪೋಷಕರು ಮತ್ತು ಸಮುದಾಯದವರಲ್ಲಿ ಜಾಗೃತಿ ಮೂಡಿಸಿ, ಅವುಗಳನ್ನು ದೈನಂದಿನ ಜೀವನದಲ್ಲಿ ಅನುಷ್ಠಾನಗೊಳಿಸುವಂತೆ ಪ್ರೇರೇಪಿಸಲಾಗುವುದು. ಜಲವೇ ಜೀವವಾಗಿದ್ದು, ಪ್ರತಿಯೊಂದು ಹನಿ ನೀರೂ ಅಮೂಲ್ಯ. ಸ್ವಚ್ಛತೆಯನ್ನು ಪ್ರತಿಯೊಬ್ಬರೂ ಜೀವನದ ಅವಿಭಾಜ್ಯ ಭಾಗವನ್ನಾಗಿ ಮಾಡಿ ಕೊಳ್ಳಬೇಕು ಎಂದು ಹೇಳಿದರು.
ಶಾಲಾ ಮುಖ್ಯಶಿಕ್ಷಕಿ ಎಂ.ಶೋಭಾ ಮಾತನಾಡಿ, ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ನೀರನ್ನು ವ್ಯರ್ಥ ಮಾಡದೆ ಸಂರಕ್ಷಿಸಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸ್ವಚ್ಛತೆ ಮತ್ತು ಆರೋಗ್ಯದ ಕುರಿತು ನಿರಂತರ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ಶಾಲಾ ಸಿಬ್ಬಂದಿಗಳಾದ ಭಾರ್ಗವಿ, ಸುಜಾತ, ಚಂದ್ರಮ್ಮ, ತಿಮ್ಮಕ್ಕ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.