ಶಿಡ್ಲಘಟ್ಟ : ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಫುಟ್ಪಾತ್ ಹಾಗೂ ಮೋರಿಗಳ ಮೇಲೆ ಸರಕುಗಳನ್ನು ಇಟ್ಟು ವ್ಯಾಪಾರ ನಡೆಸಬಾರದು. ನಿಯಮ ಉಲ್ಲಂಘಿಸಿ ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಪಿ.ಎಸ್.ಐ ವೇಣುಗೋಪಾಲ್ ಎಚ್ಚರಿಸಿದರು.
ನಗರದ ಅಶೋಕ ರಸ್ತೆ ಹಾಗೂ ಟಿಬಿ ರಸ್ತೆಯಲ್ಲಿನ ಅಂಗಡಿಗಳ ಮುಂದೆ ಮೋರಿಗಳ ಮೇಲೆ ಹಾಗೂ ಫುಟ್ಪಾತ್ ಪ್ರದೇಶಗಳಲ್ಲಿ ಸರಕುಗಳನ್ನು ಇಟ್ಟು ಮಾರಾಟ ಮಾಡುತ್ತಿದ್ದ ಅಂಗಡಿಗಳ ವಿರುದ್ಧ ಪೊಲೀಸ್ ಇಲಾಖೆ ವತಿಯಿಂದ ವಿಶೇಷ ತೆರವು ಕಾರ್ಯಾಚರಣೆ ನಡೆಸಲಾಯಿತು.
ಇದನ್ನೂ ಓದಿ: Shidlaghatta News: 112 ವರ್ಷಗಳ ಐತಿಹಾಸಿಕ ಪಯಣ: ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನ ಆಚರಣೆ
ಕಾರ್ಯಾಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಿ.ಎಸ್.ಐ ವೇಣುಗೋಪಾಲ್ ಅವರು, ಸಾರ್ವಜನಿಕರ ಓಡಾಟಕ್ಕೆ ಅಡ್ಡಿಯಾಗಿದ್ದ ವಸ್ತುಗಳನ್ನು ತೆರವುಗೊಳಿಸಲಾಗಿದೆ. ಅಂಗಡಿಗಳ ಮುಂದೆ ಅಕ್ರಮವಾಗಿ ಸರಕುಗಳನ್ನು ಇಟ್ಟು ವ್ಯಾಪಾರ ನಡೆಸದಂತೆ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮರುಕಳಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಗರದಲ್ಲಿ ಪಾದಚಾರಿಗಳ ಸುರಕ್ಷತೆ ಹಾಗೂ ವಾಹನ ಸಂಚಾರ ಸುಗಮವಾಗಿರಲು ಇಂತಹ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು. ಕಾರ್ಯಾಚರಣೆಯಲ್ಲಿ ಎಎಸ್ಐ ಎನ್ .ಸೀನಪ್ಪ, ಪೊಲೀಸ್ ಸೇರಿದಂತೆ ಇತರರು ಭಾಗವಹಿಸಿದ್ದರು.