ಗುಡಿಬಂಡೆ: ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ(MLA S N Subbareddy) ಯವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದಿರುವುದನ್ನು ಖಂಡಿಸಿ ಗುಡಿಬಂಡೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಕರೆ ನೀಡಿದ್ದ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು.
ಬೆಳಗ್ಗೆಯಿಂದಲೇ ಪಟ್ಟಣದ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದರೆ, ಸಾರಿಗೆ ಸಂಚಾರವೂ ಕೆಲಕಾಲ ಅಸ್ತವ್ಯಸ್ತಗೊಂಡಿತು. ಸರ್ಕಾರಿ ಕಚೇರಿಗಳು ಮಾತ್ರ ಎಂದಿನಂತೆ ಕಾರ್ಯನಿರ್ವಹಿಸಿದವು.
ಪ್ರತಿಭಟನಾಕಾರರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ, ಯುವ ಕಾಂಗ್ರೆಸ್ ಮುಖಂಡ ಅಂಬರೀಶ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು. ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಅವರನ್ನು ತಡೆದು ಪರಿಸ್ಥಿತಿ ನಿಯಂತ್ರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿರೆಡ್ಡಿ ಮಾತನಾಡಿ, ಮೂರು ಬಾರಿ ಗೆಲುವು ಸಾಧಿಸಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಸುಬ್ಬಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡದಿರುವುದು ಕಾರ್ಯಕರ್ತರಿಗೆ ತೀವ್ರ ನಿರಾಸೆ ಉಂಟುಮಾಡಿದೆ ಎಂದು ಹೇಳಿದರು.
ಮುಖಂಡ ಪ್ರಕಾಶ್ ಮಾತನಾಡಿ, ಸಂಕಷ್ಟದ ಸಂದರ್ಭಗಳಲ್ಲೂ ಪಕ್ಷದೊಂದಿಗೆ ನಿಷ್ಠೆಯಿಂದ ಇದ್ದ ನಾಯಕರನ್ನು ಕಡೆಗಣಿಸಿರುವುದು ಸರಿಯಲ್ಲ. ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಗುಡಿಬಂಡೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.