ಗುಡಿಬಂಡೆ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯ ಸಾಧ್ಯತೆ ಇರುವ ಹಿನ್ನೆಲೆ ಯಲ್ಲಿ ರೈತರು ಕಡ್ಡಾಯವಾಗಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಪ್ರಭು ಸಲಹೆ ನೀಡಿದರು.
ತಾಲೂಕಿನ ನಡುವನಹಳ್ಳಿ ಗ್ರಾಮದಲ್ಲಿ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಗಳೊಂದಿಗೆ ಬರ ಅಧ್ಯಯನ ನಡೆಸಿ ರೈತರೊಂದಿಗೆ ಸಂವಾದ ನಡೆಸಿದ ಅವರು, ಬೆಳೆ ವಿಮೆ ನೋಂದಣಿಗೆ ಸಂಬಂಧಿಸಿದಂತೆ ರೈತರಿಗೆ ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಗುಡಿಬಂಡೆ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಬೆಳೆ ವಿಮೆ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಿದರು.
ಸಹಕಾರ ಸಂಘಗಳಲ್ಲಿ ಸಾಲ ಪಡೆದ ರೈತರಿಗೆ ಮಾತ್ರವಲ್ಲದೆ ಎಲ್ಲ ಅರ್ಹ ರೈತರಿಗೂ ಬೆಳೆ ವಿಮೆ ನೋಂದಣಿ ಸೌಲಭ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಯಾವುದೇ ರೈತ ವಿಮೆಯಿಂದ ವಂಚಿತರಾಗದAತೆ ಕ್ರಮವಹಿಸುವಂತೆ ನಿರ್ದೇಶನ ನೀಡಿದರು.
ಇದನ್ನೂ ಓದಿ: Gudibande News: ಕಾರ್ಗಿಲ್ ವಿಜಯೋತ್ಸವದಲ್ಲಿ ವೀರ ಯೋಧರಿಗೆ ನಮನ
ಚಿಕ್ಕತಮ್ಮನಹಳ್ಳಿ ಗ್ರಾಮದ ರೈತ ಸಿ.ಎಸ್.ಗೋಪಿನಾಥ್ ಅವರ ಸಾವಯವ ಕೃಷಿ ತೋಟಕ್ಕೆ ಭೇಟಿ ನೀಡಿ, ರಾಸಾಯನಿಕ ಕೃಷಿಗಿಂತ ಸಾವಯವ ಕೃಷಿ ಆರೋಗ್ಯ ಹಾಗೂ ಉತ್ಪಾದಕತೆ ಎರಡಕ್ಕೂ ಪೂರಕವಾಗಿದ್ದು, ರೈತರು ಈ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದರು.
ಬರದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇರುವುದರಿಂದ ಕೆಎಂಎಫ್ ವತಿಯಿಂದ ಉಚಿತ ಮೇವಿನ ಬೀಜ ವಿತರಿಸಲಾಗುತ್ತಿದ್ದು, ರೈತರು ಮೇವು ಬೆಳೆಯಲು ಮುಂದಾಗಬೇಕು. ಹೆಚ್ಚುವರಿ ಮೇವನ್ನು ಜಿಲ್ಲಾಡಳಿತವೇ ಖರೀದಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.
ಟೊಮೆಟೊ ಬೆಳೆ ವಿಮೆ ಕುರಿತು ರೈತರಿಗೆ ಮಾಹಿತಿ ನೀಡದ ತೋಟಗಾರಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ, ಜಮೀನು ಖಾತೆ ಸಮಸ್ಯೆಯನ್ನು 15 ದಿನಗಳೊಳಗೆ ಬಗೆಹರಿಸುವಂತೆ ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು.