ಚಿಕ್ಕಬಳ್ಳಾಪುರ: ಜಿಲ್ಲೆಯ ಜನ ಮತ್ತು ಜಾನುವಾರುಗಳು ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಪಡುವುದನ್ನು ತಪ್ಪಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಅಗತ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿ ಮಾಲೀಕರ ಸಹಕಾರ ಪಡೆಯಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಸೂಚನೆ ನೀಡಿದರು.
ನಗರ ಹೊರವಲಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸ್ತುತ ಜಿಲ್ಲೆಯ 13 ಗ್ರಾಮಗಳಲ್ಲಿ, 24 ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಪ್ರಸ್ತುತ ಖಾಸಗಿ ಕೊಳವೆ ಬಾವಿ ಮಾಲೀಕರ ಸಹಕಾರ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ. ಈವರೆಗೆ ಯಾವುದೇ ಪ್ರದೇಶದಲ್ಲಿ ಟ್ಯಾಂಕರ್ʼಗಳ ಮೂಲಕ ನೀರು ಪೂರೈಸುವ ಪರಿಸ್ಥಿತಿ ತಲೆದೂರಿಲ್ಲ. ಮುಂದಿನ ದಿನಗಳಲ್ಲಿ 42 ಗ್ರಾಮಗಳಲ್ಲಿ, 21 ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರ ಹಾಗೂ ಗ್ರಾಮಾಂತರ ಪ್ರದೇಶ ಸೇರಿದಂತೆ, ಜಿಲ್ಲೆಯ ಯಾವುದೇ ಭಾಗದಲ್ಲಿ ಜನರಿಗೆ ಕುಡಿ ಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಬಾರದು. ಯಾವುದೇ ಗ್ರಾಮ, ವಾರ್ಡ್ʼಗಳಲ್ಲಿ ಸಮಸ್ಯೆ ಕಂಡುಬಂದರೆ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ನಂತರ ಖಾಸಗಿ ಕೊಳವೆ ಬಾವಿ ಮಾಲೀಕರ ಸಹಕಾರ ಪಡೆದು ನೀರು ಪೂರೈಸುವ ವ್ಯವಸ್ಥೆ ಸಮರ್ಪಕವಾಗಿ ಆಗಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕಳೆದ ವರ್ಷದ ಜನವರಿಯಿಂದ ಡಿಸೆಂಬರ್ ಮಾಹೆಯವರೆಗೆ ವಾಡಿಕೆ ಮಳೆ 735 ಮಿ.ಮೀ ಮಳೆ ಪ್ರಮಾಣವಿದ್ದು, 735 ಮಿ.ಮೀ ಮಳೆಯಾಗಿರುತ್ತದೆ. ವಾಡಿಕೆ ಮಳೆಗಿಂತ ಕೊಂಚ ಅಧಿಕ ಮಳೆ ಆಗಿದ್ದರೂ ಕೂಡ ಜಿಲ್ಲೆಯಾದ್ಯಂತ ತಾಲ್ಲೂಕುವಾರು ಮಳೆ ಹಂಚಿಕೆ ಸಮರ್ಪಕವಾಗಿ ಆಗದೆ ಇರುವುದರಿಂದ ಕೆಲವೆಡೆ ಬರುವ ಬೇಸಿಗೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಂಭವ ವಿದೆ. ಅಂತಹ ಗ್ರಾಮಗಳು, ವಾರ್ಡ್ಗಳ ಮಾಹಿತಿಯನ್ನು ಪಡೆದು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.
ಬೆಳೆ ಹಾನಿ ಪರಿಹಾರ, ಬೆಳೆ ವಿಮೆ ಪರಿಹಾರ ಸೇರಿದಂತೆ ರೈತರಿಗೆ ಸರ್ಕಾರದಿಂದ ದೊರಕ ಬೇಕಾಗಿರುವ ಎಲ್ಲ ಸವಲತ್ತುಗಳು ವಿಳಂಬವಿಲ್ಲದೆ ತಲುಪಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಳೆದ ವರ್ಷದ ಅಕ್ಟೋಬರ್ ಮಾಹೆಯಿಂದ ಡಿಸೆಂಬರ್ ಮಾಹೆಯಲ್ಲಿ 29.63 ಹೇಕ್ಟರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಿಂಗಾರು ಮಳೆಗೆ ಹಾನಿಯಾಗಿವೆ. ಆ ಸಂತ್ರಸ್ತ ರೈತ ಕುಟುಂಬ ಗಳಿಗೆ ಪರಿಹಾರ ಹಣ ಪಾವತಿಯಾಗಿರುವ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಹಾನಿಯಾದಲ್ಲಿ ಕೂಡಲೆ ತಂತ್ರಾಂಶದಲ್ಲಿ ನಮೂದಿಸಿ ಪರಿಹಾರವನ್ನು ವಿಳಂಬ ವಿಲ್ಲದೆ ತಲುಪಿಸಲು ಕ್ರಮ ಆಗಬೇಕು ಎಂದರು.
ಬರುವ ದಿನಗಳಲ್ಲಿ ನಡೆಯಲಿರುವ ಪ್ರಮುಖ ಜಾತ್ರೆಗಳ ಸುತ್ತಮುತ್ತಲ ಸ್ಥಳಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಬ್ಲೀಚಿಂಗ್ ಪುಡಿ ಸಿಂಪಡಣೆ, ಕ್ಲೋರಿನೇಷನ್ ಮಾಡುವುದು, ಒಹೆಚ್ಪಿ ನೀರಿನ ಟ್ಯಾಂಕ್ಗಳ ಸ್ವಚ್ಛತೆಗೆ ನಿಗಾ ವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ವಹಿಸಲು ಸೂಚಿಸಿದರು.
ಮಂಚೇನಹಳ್ಳಿ ಭಾಗ ಸೇರಿದಂತೆ ಜಿಲ್ಲೆಯ ವಿವಿಧೆಡೆ ಇತ್ತೀಚಿಗೆ 23 ಸಿಡುಬು ಪ್ರಕರಣಗಳು ಕಂಡು ಬಂದಿದ್ದು, ಅಗತ್ಯವಿದ್ದರೆ ಪರೀಕ್ಷೆ ಮಾಡಿ ಸೂಕ್ತ ಆರೋಗ್ಯ ಚಿಕಿತ್ಸೆ ಹಾಗೂ ಲಸಿಕೆ ನೀಡಬೇಕು, ಆ ಎಲ್ಲರ ಆರೋಗ್ಯದ ಮೇಲೆ ನಿಗಾ ಇಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.