ಶಿಡ್ಲಘಟ್ಟ: ಮಹಿಳೆಯರ ಸಬಲೀಕರಣದ ಬಗ್ಗೆ ಭರವಸೆ ನೀಡುತ್ತಿದ್ದರೂ, ಮಹಿಳಾ ಸಂಬಂಧಿತ ಮಹತ್ವದ ಬಿಲ್ ಪಾಸ್ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡ ಆಂಜಿನಪ್ಪ ಪುಟ್ಟು ಟೀಕಿಸಿದರು.
ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ನಡೆದ ಡಾ.ಬಿ ಆರ್ ಅಂಬೇಡ್ಕರ್ ಅವರ 135ನೇ ಜಯಂತಿಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿ ಸರ್ಕಾರವು ಚುನಾವಣೆ ಸಂದರ್ಭಗಳಲ್ಲಿ ಮಹಿಳಾ ಮತದಾರರನ್ನು ಸೆಳೆಯುವ ಉದ್ದೇಶದಿಂದ ನಾರಿ ಶಕ್ತಿ ಎಂಬ ಹೆಸರಿನಲ್ಲಿ ಹೆಚ್ಚು ಪ್ರಚಾರ ಮಾಡುತ್ತಿದೆ. ಆದರೆ ವಾಸ್ತವದಲ್ಲಿ ಮಹಿಳೆಯರಿಗೆ ಅನುಕೂಲವಾಗುವ ನೀತಿಗಳು ಹಾಗೂ ಮಸೂದೆಗಳನ್ನು ಪಾಸ್ ಮಾಡುವಲ್ಲಿ ಸ್ಪಷ್ಟವಾದ ಕ್ರಮ ಕೈಗೊಳ್ಳುವಲ್ಲಿ ಬಿಜೆಪಿ ಸಂಬಂಧಿತ ಎನ್ಡಿಎ ಮೈತ್ರಿಕೂಟ ವಿರೋಧಪಕ್ಷ ಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಸೋತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: Shidlaghatta News: ಬೇಸಿಗೆ ಶಿಬಿರಗಳಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ: ಡಾ.ನವೀನ್ ಭಟ್ ವೈ
ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಈ ಮಸೂದೆ ವಿಷಯವನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಇದೀಗ ಮತ ನೀಡಿ ಮುಂದೆ ಬಿಲ್ ಪಾಸ್ ಮಾಡುತ್ತೇವೆ ಎಂಬ ಹೇಳಿಕೆಗಳು ನಾಟಕೀಯವಾಗಿವೆ ಎಂದು ದೂರಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಳು ಮಹಿಳಾ ಮತದಾರರನ್ನು ಸೆಳೆಯಲು ಮಾತ್ರ ಸೀಮಿತವಾಗಿದ್ದು ನಿಜವಾದ ಬದ್ಧತೆಯ ಕೊರತೆ ಕಾಣಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷವು ಮಹಿಳೆಯರ ಪರವಾಗಿ ನಿಂತು ಅವರ ಶಿಕ್ಷಣ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ನೀಡುತ್ತಿದೆ. ಮಹಿಳೆಯರ ಜೀವನಮಟ್ಟ ಸುಧಾರಣೆಗೆ ಅಗತ್ಯವಾದ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ತಿಳಿಸಿದರು.
ಮಹಿಳೆಯರಿಗೆ ಗೌರವ ನೀಡುವ ನಿಟ್ಟಿನಲ್ಲಿ, ಸಂಬಂಧಿತ ಬಿಲ್ಗಳನ್ನು ತಕ್ಷಣ ಪಾಸ್ ಮಾಡಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.