ಗುಡಿಬಂಡೆ: ಇಂದು ಕೋಟ್ಯಂತರ ರೂಪಾಯಿ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿದ್ದು, ಅದು ಅರ್ಹ ಹಾಗೂ ನೊಂದಾಯಿತ ಕಾರ್ಮಿಕರಿಗೆ ದೊರೆಯಲಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್ ಬಣ)ದ ಜಿಲ್ಲಾಧ್ಯಕ್ಷ ಹೆಚ್.ಪಿ.ರಾಮನಾಥ್ ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುರಸದ್ಮಗಿರಿ ವಿದ್ಯುತ್ ವೈರ್ ಮೆನ್ ಕಾರ್ಮಿಕರ ಸಂಘದ ವತಿಯಿಂದ ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ ದರು.
ಇದನ್ನೂ ಓದಿ: Gudibande News: ಚುನಾವಣಾ ಸಮಯದಲ್ಲಿ ಟೂರ್ʼಗೆ ಬಂದವರಿಗೆ ಶಾಸಕರ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ : ಲಕ್ಷ್ಮೀನಾರಾಯಣ
ಇಂದು ದೇಶದ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಕಾರ್ಮಿಕರು. ವಿವಿಧ ರಂಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯಗಳು ದೊರೆಯಬೇಕಿದೆ. ಈಗಾಗಲೇ ಸರ್ಕಾರ ಕಾರ್ಮಿಕರ ಶ್ರೇಯೋಭಿವೃದ್ದಿಗಾಗಿ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ. ಆದರೆ ಅವು ಸರಿಯಾಗಿ ದೊರೆಯುತ್ತಿಲ್ಲ. ಕೆಲವರು ಕಾರ್ಮಿಕರಲ್ಲದೇ ಇದ್ದರೂ ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿಸಿಕೊಂಡು ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದರಿಂದ ಅರ್ಹ ಕಾರ್ಮಿಕರಿಗೆ ಸೌಲಭ್ಯಗಳು ಸಿಗುತ್ತಿಲ್ಲ. ಆದ್ದರಿಂದ ನಕಲಿ ಫಲಾನುಭವಿ ಗಳನ್ನು ಪತ್ತೆ ಹಚ್ಚಿ ಅರ್ಹರಿಗೆ ಸೌಲಭ್ಯಗಳು ಸಿಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು ಎಂದರು.
ಬಳಿಕ ಕಾರ್ಮಿಕ ಇಲಾಖೆಯ ಅಧಿಕಾರಿ ರಾಕೇಶ್ ಮಾತನಾಡಿ, ಸದ್ಯ ಕಾರ್ಮಿಕ ಇಲಾಖೆ ಯಡಿ ನೊಂದಾಯಿತರಾದ ಕಾರ್ಮಿಕರಿಗೆ ವಿದ್ಯಾರ್ಥಿ ವೇತನ, ಟೂಲ್ ಕಿಟ್ ವಿತರಣೆ, ಮಾಶಾಸನ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈಗಾಗಲೇ ನಕಲಿ ಕಾರ್ಮಿಕ ಕಾರ್ಡ್ಗಳ ರದ್ದತಿ ಕಾರ್ಯ ಸಹ ನಡೆಯುತ್ತಿದೆ. ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಕಾರ್ಮಿಕರಾದ ನೀವು ಇಂದು ತಮ್ಮ ಸ್ವಂತ ದುಡಿಮೆಯಲ್ಲಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುತ್ತಿರುವುದು ಶ್ಲಾಘನೀಯವಾದ ಸಂಗತಿಯಾಗಿದೆ. ಮುಂದಿನ ದಿನಗಳ ಈ ರೀತಿಯ ಸಾಮಾಜಿಕ ಕಾರ್ಯಕ್ರಮಗಳು ಮತ್ತಷ್ಟು ಜರುಗಲಿ ಹಾಗೂ ಕಾರ್ಮಿಕ ಇಲಾಖೆಯ ಸೌಲಭ್ಯಗಳನ್ನು ಬಳಸಿಕೊಳ್ಳಲು ಮುಂದಾಗಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಬಳಿಕ ಆಸ್ಪತ್ರೆಯ ವೈದ್ಯರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಮಯ ದಲ್ಲಿ ಸುರಸದ್ಮಗಿರಿ ವಿದ್ಯುತ್ ವೈರ್ ಮೆನ್ ಕಾರ್ಮಿಕರ ಸಂಘದ ಆದಿನಾರಾಯಣ, ಗೌಡ, ಅಶ್ವತ್ಥಪ್ಪ, ವೆಂಕಟೇಶ್, ಯಾಮನಾರಾಯಣ ಸೇರಿದಂತೆ ಕಾರ್ಮಿಕರು ಹಾಗೂ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಹಾಜರಿದ್ದರು.