ಚಿಂತಾಮಣಿ: ಚಿಂತಾಮಣಿ ತಾಲೂಕಿನ ಐತಿಹಾಸಿಕ ಕೈವಾರ ಪಟ್ಟಣದಲ್ಲಿ ಯುವ ಕಾಂಗ್ರೆಸ್ ಮುಖಂಡ ಅಬ್ದುಲ್ ಸಮದ್ ರವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ರಾಜ್ಯ ಹಾಗೂ ಹೊರರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಶಾಸಕ ಡಾ. ಎಂ.ಸಿ. ಸುಧಾಕರ್(MLA Dr M C Sudhakar) ಅವರು ಭಾಗವಹಿಸಿ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದರು.
ಸಮಾರಂಭದಲ್ಲಿ ಮಾತನಾಡಿದ ಶಾಸಕರು ಈ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿವಿಧ ಭಾಗಗಳಿಂದ ಹಾಗೂ ಹೊರರಾಜ್ಯಗಳಿಂದ ಸುಮಾರು 15ಕ್ಕೂ ಹೆಚ್ಚು ಪ್ರಸಿದ್ಧ ತಂಡಗಳು ಆಗಮಿಸಿ ಭಾಗವಹಿಸಿರುವುದು ಅತ್ಯಂತ ಸಂತೋಷದ ವಿಷಯ.ಕ್ರೀಡಾಪಟುಗಳು ಕ್ರೀಡಾ ಮನೋಭಾವನೆ ಮತ್ತು ಕ್ರೀಡಾ ಸ್ಪೂರ್ತಿಯಿಂದ ಪಂದ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಮುಂದುವರಿದು ಮಾತನಾಡಿದ ಅವರು ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ನಮ್ಮ ಚಿಂತಾಮಣಿಯಲ್ಲಿ ಕ್ರೀಡಾಂಗಣ,ಸಿಂಥೆಟಿಕ್ ಟ್ರ್ಯಾಕ್ ಹಾಗೂ ಕ್ರಿಕೆಟ್ ಸ್ಟೇಡಿಯಂ ಸೇರಿದಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.ಗ್ರಾಮೀಣ ಭಾಗದ ಪ್ರತಿಭಾವಂತ ಯುವಕರು ಮತ್ತು ಮಕ್ಕಳು ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಬೆಳೆಯಬೇಕು ಎಂದು ಆಶಿಸಿದರು.
ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಮಂಜುನಾಥ್ ರೆಡ್ಡಿ ಮಾತನಾಡಿ, ಕೈವಾರದಲ್ಲಿ ಸುಮಾರು 30 ವರ್ಷಗಳ ಸುದೀರ್ಘ ಇತಿಹಾಸವಿರುವ ವಾಲಿಬಾಲ್ ಕ್ರೀಡಾ ಪರಂಪರೆಯನ್ನು ಸ್ಮರಿಸಿದರು.
"ಅಬ್ದುಲ್ ಸಮದ್ ಅವರ ಹುಟ್ಟುಹಬ್ಬದ ಸವಿನೆನಪಿನಲ್ಲಿ ಹಾಗೂ ಅವರ ನೆರವಿನಿಂದ ಈ ವಾಲಿಬಾಲ್ ಟೂರ್ನಮೆಂಟ್ ಆಯೋಜಿಸಲಾಗಿದೆ.ಹಿಂದೆ ಕೈವಾರದಲ್ಲಿ ಅತ್ಯಂತ ವಿಜೃಂಭಣೆ ಯಿಂದ ನಡೆಯುತ್ತಿದ್ದ ವಾಲಿಬಾಲ್ ಟೂರ್ನಿಗಳ ಮಾದರಿಯಲ್ಲೇ ಇಂದಿನ ಪಂದ್ಯಾವಳಿಯೂ ಅತ್ಯುತ್ತಮವಾಗಿ ಮೂಡಿಬಂದಿದೆ. ಹಲವಾರು ಭಾಗಗಳಿಂದ ಆಗಮಿಸಿರುವ ಕ್ರೀಡಾಪಟುಗಳು ಅತ್ಯಂತ ಕ್ರೀಡಾ ಮನೋಭಾವದಿಂದ ಭಾಗವಹಿಸಿದ್ದಾರೆ.
ಈ ಪಂದ್ಯಾವಳಿಯಲ್ಲಿ ವಿವಿಧ ಪ್ರದೇಶಗಳಿಂದ ಆಗಮಿಸಿದ್ದ ಬಲಿಷ್ಠ ತಂಡಗಳು ಭಾಗವಹಿಸಿ ಕ್ರೀಡಾ ಪ್ರೇಮಿಗಳನ್ನು ರಂಜಿಸಿದವು.ಸೋಲು-ಗೆಲುವು ಕ್ರೀಡೆಯ ಭಾಗವಾಗಿದ್ದು, ಪ್ರತಿಯೊಬ್ಬ ಆಟಗಾರನೂ ಕ್ರೀಡಾ ಮನೋಭಾವ ಮೈಗೂಡಿಸಿಕೊಂಡು ಆಡುವುದು ಮುಖ್ಯ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಸೀನಪ್ಪ, ಸೈಯದ್ ಮುಜಾಹಿದ್, ಸೈಯದ್ ಅಮ್ಜದ್, ಬಟ್ಟು ಹಾಗೂ ಸಂಘಟಕರು, ಅಪಾರ ಸಂಖ್ಯೆಯ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.