ಚಿಕ್ಕಬಳ್ಳಾಪುರ : ಬಸವ ಜಯಂತಿ, ಭಗೀರಥ ಜಯಂತಿಗಳ ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ಶಿಷ್ಟಾಚಾರದ ರೀತ್ಯ ಅರ್ಥಪೂರ್ಣವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಸವ ಜಯಂತಿ, ಭಗೀರಥ ಜಯಂತಿಗಳ ಅಂಗವಾಗಿ ಬುಧವಾರ ನಡೆದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಸಮುದಾಯದ ಮುಖಂಡರಿಂದ ಸಲಹೆಗಳನ್ನು ಸ್ವೀಕರಿಸಿದ ನಂತರ ಮಾತನಾಡಿದರು.
ಭಕ್ತಿಬಂಡಾರಿ ಬಸವಣ್ಣ ಅವರ ಜಯಂತಿಯನ್ನು ಚಿಕ್ಕಬಳ್ಳಾಪುರ ನಗರದ ಗಾಂಧಿಕೊಳಾಯಿ ರಸ್ತೆಯಲ್ಲಿರುವ ಬಸವನಗುಡಿಯಲ್ಲಿ ಏ.20ರಂದು ಹಾಗೂ ಭಗೀರಥ ಜಯಂತಿಯನ್ನು ಏ.23 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಕ್ತಿದಾಯಕವಾಗಿ ಹಾಗೂ ಅರ್ಥಪೂರ್ಣವಾಗಿ ಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಮಹನೀಯರ ವಿಚಾರದಾರೆಗಳ ಕುರಿತು ಭಾಷಣ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಈ ಕಾರ್ಯಕ್ರಮಗಳಿಗೆ ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ, ವೇದಿಕೆ ಸಿದ್ಧತೆ ಮತ್ತು ಅಲಂಕಾರ, ಕುಡಿಯುವ ನೀರು, ಪೊಲೀಸ್ ಬಿಗಿ ಭದ್ರತೆ, ಮಧ್ಯಾಹ್ನದ ಉಪಹಾರ, ನಗರದ ಸ್ವಚ್ಛತೆ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ಮೆರವಣಿಗೆ ಸೇರಿದಂತೆ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ಎಲ್ಲ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಿ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು. ಜಯಂತ್ಯೋತ್ಸವಗಳಿಗೆ ಯಾವುದೇ ಲೋಪದೋಷವಾಗದಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಸೂಚನೆಗಳನ್ನು ಸಂಬಂಧ ಪಟ್ಟ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಈ ವೇಳೆ ನೀಡಿದರು.
ಜಿಲ್ಲೆಯ ಸಮಸ್ತ ನಾಗರಿಕರು, ಸಮುದಾಯದ ಮುಖಂಡರು, ಪದಾಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಮುಖಂಡರು, ಸದಸ್ಯರು, ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಈ ವೇಳೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷಾ, ತಹಸೀಲ್ದಾರ್ ರಶ್ಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿ ಕುಮಾರ್, ಸಮುದಾಯದ ಮುಖಂಡ ರಾದ ಮಹೇಶ್ ಬಸಾಪುರ, ಪರಶುರಾಮಮೂರ್ತಿ, ಗಿರೀಶ್, ಬಿ.ವೆಂಕಟೇಶ್, ಕೃಷ್ಣಪ್ಪ, ದೇವರಾಜು, ಆಂಜಿನಪ್ಪ, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸದಸ್ಯರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.