ಚಿಕ್ಕಬಳ್ಳಾಪುರ: ಕುಡಿಯುವ ನೀರಿನ ಪೂರೈಕೆಯ ಕೆಲಸ ಕಾರ್ಯಗಳನ್ನು ಮೊದಲ ಆದ್ಯತೆಯ ಕೆಲಸಗಳೆಂದು ಪರಿಗಣಿಸಿ ಅಭಿಯಾನದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.
ನಗರ ಹೊರವಲಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ "ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆ"ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ 32 ಗ್ರಾಮಗಳು, 12 ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು ಮುಂದಿನ ದಿನ ಗಳಲ್ಲಿ 107 ಗ್ರಾಮಗಳಲ್ಲಿ 20 ವಾರ್ಡ್ಗಳಲ್ಲಿ ಸಮಸ್ಯೆ ಎದುರಾಗಬಹುದು. ಹೀಗಾಗಿ ಕುಡಿಯುವ ನೀರಿನ ಪೂರೈಕೆಯ ಕಾರ್ಯಗಳನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಲು ತಹಸೀಲ್ದಾರ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯಾಡಳಿತ ಸಂಸ್ಥೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿಗಳು ಕ್ರಮ ವಹಿಸಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ನೋಡಲ್ ಅಧಿಕಾರಿಗಳಿಗೆ ಹೊಣೆ
ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹೋಬಳಿಗಳಿಗೆ ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿ ಯನ್ನು ನೇಮಕ ಮಾಡಲಾಗಿದೆ. ಈ ರೀತಿ ನಿಯೋಜನೆ ಆಗಿರುವ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯ ಗ್ರಾಮಗಳಿಗೆ ವಾರಕ್ಕೆ ಒಂದೆರಡು ಬಾರಿ ಖುದ್ದಾಗಿ ಭೇಟಿ ನೀಡಬೇಕು. ಯಾವ ಯಾವ ಗ್ರಾಮಗಳಿಗೆ ಯಾವ ರೀತಿ ನೀರು ಪೂರೈಸಲಾಗುತ್ತಿದೆ. ಖಾಸಗಿ ಕೊಳವೆ ಬಾವಿಗಳು ಎಷ್ಟಿವೆ. ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆಯೇ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸ ಬೇಕು ಎಮದು ತಾಕೀತು ಮಾಡಿದರು.
24 ಗಂಟೆ ಕೆಲಸ ಮಾಡಬೇಕು!!
ಒಂದು ವೇಳೆ ಕುಡಿಯುವ ನೀರಿನ ಸಮಸ್ಯೆಯ ಬೀಕರತೆ ಹೆಚ್ಚಾದಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದಾಗಿ ಪೂರ್ವ ಯೋಜಿತವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳ ಬೇಕು. ಸ್ಥಳೀಯ ಜಲಗಾರರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ತಹಸೀಲ್ದಾರವರೊಂದಿಗೆ ಸಮಲೋಚಿಸಿ ನೀರಿನ ಪೂರೈಕೆ ಯಲ್ಲಿ ವ್ಯತ್ಯಯ ಆಗದಂತೆ ಕ್ರಮವಹಿಸಬೇಕು. ಹೊಸದಾಗಿ ನೀರಿನ ಸಮಸ್ಯೆ ಯಾವುದೇ ಗ್ರಾಮ ದಲ್ಲಿ ಎದುರಾದಲ್ಲಿ 24 ಗಂಟೆಯ ಒಳಗಾಗಿ ಪರಿಹರಿಸುವಂತೆ ಸನ್ನದ್ದರಾಗಿರಬೇಕು. ಜೊತೆಗೆ ತಮ್ಮ ಕಾರ್ಯ ವ್ಯಾಪ್ತಿಯ ಗ್ರಾಮಗಳಲ್ಲಿರುವ ಶುದ್ದ ನೀರಿನ ಘಟಕಗಳೆಷ್ಟು, ಅದರಲ್ಲಿ ಕಾರ್ಯ ನಿರ್ವಹಣೆಯಲ್ಲಿರುವುದು ಎಷ್ಟು ಮತ್ತು ರಿಪೇರಿಗೆ ಬಂದಿರುವುದು ಎಷ್ಟು ಎಂಬುದರ ಬಗ್ಗೆ ಮಾಹಿತಿ ಪಡೆದು ತಿಳಿಸಬೇಕು ಎಂದು ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಸಡ್ಡೆ ಸಹಿಸುವುದಿಲ್ಲ?
ನಗರ ಪ್ರದೇಶದ ವಾರ್ಡ್ಗಳ ವ್ಯಾಪ್ತಿಯಲ್ಲಿ ಪ್ರತಿ ದಿನ ನೀರು ಪೂರೈಕೆ ಮಾಡಲು ಆಧ್ಯತೆ ನೀಡಬೇಕು. ನೀರಿನ ಲಭ್ಯತೆ ಆಧರಿಸಿ ಕನಿಷ್ಠ ವಾರಕ್ಕೆ ಎರಡು ಬಾರಿಯಾದರೂ ಪೂರೈಕೆ ಮಾಡಬೇಕು. ಅಸಡ್ಡೆ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅನುಮತಿ ಕಡ್ಡಾಯ!!
ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಘ ಸಂಸ್ಥೆಗಳು ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಬೇಕಾದರೂ ಸ್ಥಳೀಯ ಗ್ರಾ.ಪಂ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರಾ.ಪಂ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ನಿಗಾ ವಹಿಸುವಂತೆ ಸೂಚನೆ ನೀಡಿದರು.
ಜಲಜೀವನ್ ಮಾಹಿತಿ ?
ಜಲಜೀವನ್ ಮಿಷನ್ ಅಭಿಯಾನದಡಿ ಜಿಲ್ಲೆಯಲ್ಲಿ ಈ ವರೆಗೆ ಎಷ್ಟು ಕೊಳವೆ ಬಾವಿಗಳನ್ನು ಕೊರೆಯಲಾಗಿದೆ, ಎಷ್ಟು ಯಶಸ್ವಿಯಾಗಿವೆ, ಎಷ್ಟು ವಿದ್ಯುತ್ ಸಂಪರ್ಕ ಪಡೆದಿವೆ. ವಿದ್ಯುತ್ ಸಂಪರ್ಕ ಪಡೆಯಲು ಎಷ್ಟು ಬಾಕಿ ಇವೆ ಎಂಬ ವಿವರವನ್ನು ನೀಡಬೇಕು. ಒಂದೆರಡು ದಿನಗಳಲ್ಲಿ ವಿದ್ಯುತ್ ಸಂಪರ್ಕ ಪಡೆಯಲು ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ ಕೊಳವೆ ಬಾವಿ ನೀರು ಪೂರೈಕೆ ಸೇವೆಯನ್ನು ಜನರಿಗೆ ಮುಕ್ತಗೊಳಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.
ಪರಿಹಾರಕ್ಕೆ ಸೂಚನೆ!!
ಕಳೆದ ಒಂದೆರಡು ದಿನಗಳಲ್ಲಿ ಜಿಲ್ಲೆಯಲ್ಲಿ ಆಗಿರುವ ಸಣ್ಣ ಪ್ರಮಾಣದ ಗಾಳಿ ಮಳೆಗೆ 48 ಹೆಕ್ಟೇರ್ ಪ್ರದೇಶದ ತೋಟಗಾರಿಕಾ ಬೆಳೆಗಳು ನಾಶವಾಗಿದ್ದು, ಆ ಎಲ್ಲ ಸಂತ್ರಸ್ತ ರೈತರಿಗೆ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲು ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಪಾಸ್ಟಿಕ್ ಬೆಂಕಿ ನಿಷೇಧ!!
ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳನ್ನು ಸಂಪರ್ಕಿಸುವ ಬಹುತೇಕ ರಸ್ತೆಗಳ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯವು ವಿಪರೀತವಾಗಿ ಬಿದ್ದಿರುವುದು ಕಂಡುಬರುತ್ತಿದೆ. ಕೆಲವೆಡೆ ಕಿಡಿಗೇಡಿಗಳು ಬೆಂಕಿ ಇಟ್ಟು ಅವೈಜ್ಞಾನಿಕವಾಗಿ ವರ್ತಿಸುವುದು ಗಮನಕ್ಕೆ ಬಂದಿದೆ. ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ಜರುಗಬಾರದು. ಸ್ಥಳೀಯಾಡಳಿತ ಸಂಸ್ಥೆಗಳು ಕೂಡಲೇ ಎಚ್ಚೆತ್ತುಕೊಂಡು ಸಮರ್ಪಕ ವಿವೇವಾರಿಗೆ ಕ್ರಮ ವಹಿಸಬೇಕು. ಬೆಂಕಿ ಇಡುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷಾ ಸೇರಿದಂತೆ ಎಲ್ಲಾ ತಾಲ್ಲೂಕು ತಹಸೀಲ್ದಾರರು, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯಾಡಳಿತ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಹಾಜರಿದ್ದರು.